ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಪ್ರಾಥಮಿಕ ಶಾಲೆ : ಸಚಿವ ಮಧು ಬಂಗಾರಪ್ಪ

KannadaprabhaNewsNetwork |  
Published : Aug 03, 2024, 12:41 AM ISTUpdated : Aug 03, 2024, 11:44 AM IST
ಸಮಾವೇಶದ ಎರಡನೇ ದಿನದ ಕಾರ್ಯಕ್ರಮವನ್ನು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಉದ್ಘಾಟಿಸಿ ಮಾತನಾಡಿದರು. | Kannada Prabha

ಸಾರಾಂಶ

ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಶೇ.25 ಅನುದಾನ ಮೀಸಲಿರಿಸಲಾಗುವುದು.

ಸಂಡೂರು: ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಪ್ರಾಥಮಿಕ ಶಾಲೆಗಳನ್ನು ಆರಂಭಿಸಲಾಗಿದೆ. ಇದರಿಂದ ಸರ್ಕಾರಿ ಶಾಲೆಗೆ ಬರುವ ಮಕ್ಕಳ ಸಂಖೆಯಲ್ಲಿ ಹೆಚ್ಚಳವಾಗಲಿದೆ ಎಂದು ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ತಾಲೂಕಿನ ತೋರಣಗಲ್ಲಿನ ವಿದ್ಯಾನಗರದಲ್ಲಿನ ಜೆ ಮ್ಯಾಕ್ಸ್ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ, ಕಲಬುರಗಿ ವಿಭಾಗ ಹಾಗೂ ಜೆಎಸ್‌ಡಬ್ಲು ಫೌಂಡೇಶನ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಎಜುಕಾನ್ 2024 ಸಮಾವೇಶದ ಎರಡನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಶೇ.೨೫ ಅನುದಾನ ಮೀಸಲಿರಿಸಲಾಗುವುದು. ಈಗಾಗಲೇ ರಾಜ್ಯದಲ್ಲಿ 42500 ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ೧೧೬೦೦ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ ಎಂದರು.

ಸರ್ಕಾರಿ ಕಾಲೇಜಿನಲ್ಲೂ ನೀಟ್, ಸಿಇಟಿ ತರಬೇತಿ:

ಖಾಸಗಿ ಕಾಲೇಜು ವಿದ್ಯಾರ್ಥಿಗಳು ನೀಟ್, ಜೆಇಇ ಮತ್ತಿತರ ಪ್ರವೇಶ ಪರೀಕ್ಷೆಗಳಿಗೆ ಪ್ರತ್ಯೇಕ ಶುಲ್ಕ ಪಾವತಿಸಿ, ಕಾಲೇಜು ಹಂತದಲ್ಲಿ ತರಬೇತಿ ಪಡೆಯುತ್ತಾರೆ. ದ್ವಿತೀಯ ಪಿಯು ಕಲಿಯುವ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೂ ಕೂಡ ಸಿಇಟಿ, ನೀಟ್ ಸೇರಿದಂತೆ ವಿವಿಧ ಕೋಸ್‌ರ್ಗಳ ಪ್ರವೇಶಕ್ಕೆ ಅಗತ್ಯ ತರಬೇತಿ ನೀಡಲು ರಾಜ್ಯ ಸರ್ಕಾರದಿಂದ ₹12 ಕೋಟಿ ನೀಡಲಾಗಿದೆ ಎಂದು ತಿಳಿಸಿದರು.

ವಾರದ ೬ ದಿನವೂ ಮೊಟ್ಟೆ ವಿತರಣೆ:

ಮಕ್ಕಳಿಗೆ ಮಧ್ಯಾಹ್ನದ ಊಟದ ಜೊತೆಗೆ ವಾರಕ್ಕೆ ಎರಡು ದಿನ ಮೊಟ್ಟೆ, ಚಿಕ್ಕಿ ಬಾಳೆಹಣ್ಣು ನೀಡಲಾಗುತ್ತಿತ್ತು. ರಾಜ್ಯದಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಇನ್ನು ಮುಂದೆ 6 ದಿನವೂ ಮೊಟ್ಟೆ ನೀಡಲಾಗುತ್ತದೆ. ಎಲ್ಲ ಮಕ್ಕಳಿಗೆ ಒಳ್ಳೆಯ ಆಹಾರ ಸಿಗಬೇಕು ಎಂಬುದು ನಮ್ಮ ಸರ್ಕಾರದ ಆಶಯವಾಗಿದೆ ಎಂದರು.

ಸರ್ಕಾರಿ ಶಾಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಬೇಕು. ಜ್ಞಾನದ ವಿಕಾಸವಾಗಬೇಕು ಎನ್ನುವ ವಿನೂತನ ಚಿಂತನೆಯಿಂದ ನನ್ನ ಶಾಲೆ-ನನ್ನ ಜವಾಬ್ದಾರಿ ಹೆಸರಿನ ವಿದ್ಯಾರ್ಥಿಗಳ ಸಂಘ ರಚನೆ ಮಾಡಿ, ವಾಟ್ಸಪ್ ಗ್ರೂಪ್‌ಗಳ ಮೂಲಕ ಒಗ್ಗೂಡಿಸಲು ಸಲಹೆ ನೀಡಲಾಗುತ್ತಿದೆ ಎಂದರು.

ರಾಜ್ಯದಲ್ಲಿ 6 ಸಾವಿರ ಗ್ರಾಮ ಪಂಚಾಯತ್‌ಗಳಿದ್ದು, ಎರಡು ಗ್ರಾಪಂಗೊಂದರಂತೆ 3 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಸ್ಥಾಪಿಸಲಾಗುವುದು. ಈ ಬಾರಿ 600 ಶಾಲೆಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಶಿಕ್ಷಕರ ನೇಮಕಾತಿಗೂ ಕ್ರಮ ವಹಿಸಲಾಗಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ, ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಪರ ಆಯುಕ್ತ ಡಾ.ಆಕಾಶ್ ಶಂಕರ್, ಜೆಎಸ್‌ಡಬ್ಲು ಸಂಸ್ಥೆಯ ಅಧ್ಯಕ್ಷ ಪಿ.ಕೆ. ಮುರುಗನ್, ಸಿಇಒ ಹರ್ಷವರ್ಧನ್ ನವತೆ, ವಡ್ಡು ಗ್ರಾಪಂ ಅಧ್ಯಕ್ಷೆ ಕೆ.ಎಂ. ನಿಂಗಮ್ಮ ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು, ಶಿಕ್ಷಕರು ಉಪಸ್ಥಿತರಿದ್ದರು.

PREV

Recommended Stories

ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''