ವಿದ್ಯಾರ್ಥಿಗಳು ಉನ್ನತ ಗುರಿಯೊಂದಿಗೆ ಕಠಿಣ ಪರಿಶ್ರಮದಿಂದ ನಿರಂತರ ಅಧ್ಯಯನ ಶೀಲರಾಗಿ ತಮ್ಮ ಜ್ಞಾನಮಟ್ಟವನ್ನು ವೃದ್ಧಿಸಿಕೊಂಡು ಪ್ರತಿಭಾನ್ವಿತರಾಗಿ ಎಂದು ನಿವೃತ್ತ ಪ್ರಾದೇಶಿಕ ಆಯುಕ್ತ ಎಂ.ಜಿ.ಹಿರೇಮಠ ಹೇಳಿದರು.
ಕನ್ನಡಪ್ರಭ ವಾರ್ತೆ ಗೋಕಾಕ
ವಿದ್ಯಾರ್ಥಿಗಳು ಉನ್ನತ ಗುರಿಯೊಂದಿಗೆ ಕಠಿಣ ಪರಿಶ್ರಮದಿಂದ ನಿರಂತರ ಅಧ್ಯಯನ ಶೀಲರಾಗಿ ತಮ್ಮ ಜ್ಞಾನಮಟ್ಟವನ್ನು ವೃದ್ಧಿಸಿಕೊಂಡು ಪ್ರತಿಭಾನ್ವಿತರಾಗಿ ಎಂದು ನಿವೃತ್ತ ಪ್ರಾದೇಶಿಕ ಆಯುಕ್ತ ಎಂ.ಜಿ.ಹಿರೇಮಠ ಹೇಳಿದರು.ನಗರದ ಕೆಎಲ್ಇ ಸಂಸ್ಥೆಯ ಸಿ.ಎಸ್.ಅಂಗಡಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಹಾಗೂ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಈ ಸಾಧನೆಯನ್ನು ಪ್ರಾರಂಭವೆಂದು ತಿಳಿದು ಇನ್ನೂ ಹೆಚ್ಚಿನ ಸಾಧನೆ ಮಾಡಲು ಸಿದ್ಧರಾಗಬೇಕು. ಸಾಧಕರಲ್ಲಿ ಹೆಚ್ಚಿನವರು ಗ್ರಾಮೀಣ ಭಾಗದವರೇ ಆಗಿದ್ದು, ಧನಾತ್ಮಕ ಚಿಂತನೆಯೊಂದಿಗೆ ತಮ್ಮ ಪ್ರಯತ್ನವನ್ನು ಮುಂದುವರೆಸಿ ಎಂದು ಸಲಹೆ ನೀಡಿದರು.ಕೆಎಲ್ಇ ನಿರ್ದೇಶಕ ಜಯಾನಂದ ಮುನವಳ್ಳಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರದಲ್ಲಿ ಸಂಸ್ಥೆಯಿಂದ ನೂರು ಹಾಸಿಗೆಗಳ ಆಸ್ಪತ್ರೆ, ವಿವಿಧ ಕಾಲೇಜುಗಳು, ವಿಶೇಷ ತರಬೇತಿಗಳು, ಲೇಡಿಸ್ ಹಾಸ್ಟೆಲ್ಗಳಂತಹ ಸೌಲಭ್ಯಗಳೊಂದಿಗೆ ಡಾ.ಪ್ರಭಾಕರ ಕೋರೆಯವರ ಮಾರ್ಗದರ್ಶನದಲ್ಲಿ ಈ ಭಾಗದ ಜನರ ಸೇವೆ ಮಾಡುತ್ತಿದೆ ಎಂದು ತಿಳಿಸಿದರು.ವೇದಿಕೆಯ ಮೇಲೆ ಕೆಎಲ್ಇ ಸಂಸ್ಥೆಯ ಸ್ಥಳೀಯ ಸಮಿತಿಯ ಅಧ್ಯಕ್ಷ ಎಂ.ಡಿ.ಚುನಮರಿ, ಆಡಳಿತಾಧಿಕಾರಿ ಜಿ.ಎಂ.ಅಂದಾಣಿ, ಪ್ರಾಚಾರ್ಯರುಗಳಾದ ಕೆ.ಬಿ. ಮೇವುಂಡಿಮಠ, ಅಮೃತ ಜಕ್ಕಲಿ, ಎಂ.ಎ.ಪಾಟೀಲ ಇದ್ದರು.
ಪ್ರತಿಯೊಂದು ವಿಷಯದಲ್ಲಿ ಆಳವಾದ ಜ್ಞಾನ ಪಡೆದರೇ ಸ್ಫರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ಉನ್ನತ ಹುದ್ದೆಗಳನ್ನು ಅಲಂಕರಿಸಬಹುದು. ಶಿಕ್ಷಕರು, ಪಾಲಕರು ಮಕ್ಕಳಲ್ಲಿಯ ಪ್ರತಿಭೆ ಗುರುತಿಸಿ ಅವರನ್ನು ಪ್ರೋತ್ಸಾಹಿಸಬೇಕು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ವಿದ್ಯಾರ್ಥಿ ವೇತನ ಸೇರಿದಂತೆ ಹಲವಾರು ಸೌಲಭ್ಯ ಕಲ್ಪಿಸಿ ಅವರ ಉಜ್ವಲ ಭವಿಷ್ಯಕ್ಕಾಗಿ ಶ್ರಮಿಸುತ್ತಿರುವ ಕೆಎಲ್ಇ ಸಂಸ್ಥೆಯ ಕಾರ್ಯ ಮಾದರಿಯಾಗಿದೆ.
-ಎಂ.ಜಿ.ಹಿರೇಮಠ, ನಿವೃತ್ತ ಪ್ರಾದೇಶಿಕ ಆಯುಕ್ತರು.
ಈ ಬಾರಿ ಕಲಾ ವಿಭಾಗದ ಪದವಿ ಮಹಾವಿದ್ಯಾಲಯವನ್ನು ಪ್ರಾರಂಭಿಸಿ ಸ್ಫರ್ಧಾತ್ಮಕ ಪರೀಕ್ಷೆಗಳ ವಿಶೇಷ ತರಬೇತಿ ನೀಡಲಾಗುವುದು. ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು.-ಜಯಾನಂದ ಮುನವಳ್ಳಿ, ಕೆಎಲ್ಇ ನಿರ್ದೇಶಕರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.