ವಿದ್ಯಾರ್ಥಿಗಳು ಕ್ರೀಡೆಯಿಂದಲೂ ಉನ್ನತ ಮಟ್ಟದ ಜೀವನ ರೂಪಿಸಿಕೊಳ್ಳಬಹುದು.
ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅಂತರ್ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಉದ್ಘಾಟನೆ
ಕನ್ನಡಪ್ರಭ ವಾರ್ತೆ ಕೊಪ್ಪಳ
ಕ್ರೀಡೆಯಿಂದ ಕ್ರಿಯಾಶೀಲತೆ ಹೆಚ್ಚುತ್ತದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿಠಲ ಬಿ. ಜಾಬಗೌಡರ ಹೇಳಿದರು.
ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜ ವತಿಯಿಂದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅಂತರ್ ಕಾಲೇಜು ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಕ್ರೀಡೆಯಿಂದಲೂ ಉನ್ನತ ಮಟ್ಟದ ಜೀವನ ರೂಪಿಸಿಕೊಳ್ಳಬಹುದು. ಪಾಠದ ಜೊತೆಗೆ ಆಟದಲ್ಲಿಯೂ ವಿದ್ಯಾರ್ಥಿಗಳು ಆಸಕ್ತಿ ಬೆಳೆಸಿಕೊಳ್ಳಬೇಕು. ಜಿಲ್ಲಾ ಕ್ರೀಡಾಂಗಣದಲ್ಲಿ ಉತ್ತಮ ಮಟ್ಟದ ಒಳ ಕ್ರೀಡಾಂಗಣಗಳನ್ನು ಕ್ರೀಡಾಪಟುಗಳಿಗಾಗಿ ನಿರ್ಮಿಸಿದ್ದೇವೆ. ಅದರ ಸದುಪಯೋಗವನ್ನು ತಾವೆಲ್ಲರೂ ಪಡೆದುಕೊಳ್ಳಬೇಕು ಎಂದರು.
ಹಿರಿಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಮಾತನಾಡಿ, ಕ್ರೀಡೆ ಜೀವನದ ಅವಿಭಾಜ್ಯ ಅಂಗ. ಕ್ರೀಡೆ ಇಲ್ಲದೆ ಮನುಷ್ಯ ನಿರಾಸಕ್ತನಾಗುತ್ತಾನೆ. ಕ್ರೀಡೆಯು ಮನುಷ್ಯನಿಗೆ ಉತ್ಸಾಹ ನೀಡುತ್ತದೆ. ವಿದ್ಯಾರ್ಥಿಯಾಗಿದ್ದಾಗ ನಾನು ಈಜು ಕ್ರೀಡೆಯಲ್ಲಿ ಪಾಲ್ಗೊಂಡಿದ್ದೇ ಎಂದು ತಮ್ಮ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಗಣಪತಿ ಕೆ ಲಮಾಣಿ ಮಾತನಾಡಿ, ನಮ್ಮ ಕಾಲೇಜಿನಲ್ಲಿ ಕ್ರೀಡಾ ವಿಭಾಗವು ಅತ್ಯಂತ ಕ್ರಿಯಾಶೀಲವಾಗಿ ಕೆಲಸ ನಿರ್ವಹಿಸುತ್ತಿದೆ. ಪ್ರತೀ ವರ್ಷವು ಒಂದು ಕ್ರೀಡಾಕೂಟವನ್ನು ಅಚ್ಚುಕಟ್ಟಾಗಿ ಆಯೋಜಿಸುತ್ತೇವೆ. ಎಲ್ಲರೂ ಕ್ರೀಡಾ ಮನೋಭಾವನೆಯೊಂದಿಗೆ ಭಾಗವಹಿಸಬೇಕು. ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಭಾಗವಹಿಸುವುದು ಮುಖ್ಯ ಎಂದರು.
ನಿವೃತ್ತ ಪ್ರಾಂಶುಪಾಲ ಬಿ.ಜಿ. ಕರಿಗಾರ ಮಾತನಾಡಿ, ಕ್ರೀಡೆಯು ಒಂದು ಕಡ್ಡಾಯ ವಿಷಯವಾಗಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯೂ ಕ್ರೀಡೆಯನ್ನು ವಿಷಯವಾಗಿ ಅಧ್ಯಯನ ಮಾಡಬೇಕು. ಕ್ರೀಡೆಯನ್ನು ಪ್ರಾಥಮಿಕ ಹಂತದಿಂದಲೇ ಕಡ್ಡಾಯಗೊಳಿಸಬೇಕು ಹಾಗೂ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ದೈಹಿಕ ಶಿಕ್ಷಣ ಶಿಕ್ಷಕರನ್ನು ಸರ್ಕಾರ ನೇಮಿಸಬೇಕು ಎಂದರು.
ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಎ. ಬಸವರಾಜ ಮಾತನಾಡಿ, ಕ್ರೀಡಾಪಟುಗಳು ಸತತ ಪ್ರಯತ್ನ ಹಾಗೂ ಅಭ್ಯಾಸದಿಂದ ಮಾತ್ರ ಯಶಸ್ಸು ಗಳಿಸಲು ಸಾಧ್ಯ ಎಂದರು. ಕಾಲೇಜಿನ ದೈಹಿಕ ಶಿಕ್ಷಣ ಬೋಧಕ ಡಾ. ಪ್ರದೀಪ್ ಕುಮಾರ್ ಮಾತನಾಡಿದರು.
ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಗವಿಸಿದ್ದಪ್ಪ ಮುತ್ತಾಳ, ಡಾ. ಮಲ್ಲಿಕಾಜುನ ಇದ್ದರು. ಬಳ್ಳಾರಿಯ ಎ.ಎಸ್.ಎಂ. ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಪ್ರಥಮ ಹಾಗೂ ಇಳಕಲ್ನ ಎಸ್.ವಿ.ಎಂ. ಮಹಿಳಾ ಪದವಿ ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ ಗಳಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.