ಹಾವೇರಿ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆರಾಯ ಮತ್ತೆ ಚುರುಕಾಗಿದ್ದು, ಬರಡಾಗುತ್ತಿದ್ದ ಭೂಮಿಗೆ ತಂಪೆರೆದಿದ್ದಾನೆ. ಅಲ್ಲದೇ ಜಿಲ್ಲೆಯಲ್ಲಿ ಹರಿದಿರುವ ತುಂಗಭದ್ರಾ, ವರದಾ ನದಿಯ ಹರಿವು ಹೆಚ್ಚಿದ್ದು, ಇಷ್ಟು ದಿನ ಮಳೆಯಿಲ್ಲದೇ ಕಂಗಾಲಾಗಿದ್ದ ಅನ್ನದಾತರ ಮುಖದಲ್ಲಿ ಕೊನೆಗೂ ಮಂದಹಾಸ ಮೂಡಿದಂತಾಗಿದೆ.
ರೈತರಲ್ಲಿ ಮೂಡಿದ ಭರವಸೆ: ಕಳೆದ ಕೆಲವು ವಾರಗಳಿಂದ ಮಳೆ ಕೈಕೊಟ್ಟಿದ್ದರಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗುವ ಭೀತಿ ಎದುರಾಗಿತ್ತು. ಇದರಿಂದ ಕಂಗಾಲಾಗಿದ್ದ ಜಿಲ್ಲೆಯ ರೈತರು ಆಕಾಶದ ಕಡೆ ಮುಖ ಮಾಡಿ ಮಳೆಗಾಗಿ ಪ್ರಾರ್ಥಿಸುತ್ತಿದ್ದರು. ಆದರೆ ಈಗ ಕಳೆದ ಎರಡು ದಿನಗಳಿಂದ ವಾತಾವರಣ ಸಂಪೂರ್ಣ ಬದಲಾಗಿದ್ದು, ಜಿಟಿಜಿಟಿ ಮಳೆ ಮುಂದುವರಿದಿದೆ. ನದಿಗಳಲ್ಲಿ ನೀರಿನ ಮಟ್ಟ ಏರಿಕೆ ಕಂಡಿರುವುದರಿಂದ ಅಂತರ್ಜಲ ಮಟ್ಟವೂ ಸುಧಾರಿಸುವ ನಿರೀಕ್ಷೆಯಿದೆ.
ನದಿ ಪಾತ್ರದ ಗ್ರಾಮಗಳ ರೈತರು ಪಂಪ್ಸೆಟ್ಗಳ ಮೂಲಕ ತೋಟ ಹಾಗೂ ಗದ್ದೆಗಳಿಗೆ ನೀರು ಹರಿಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಿದೆ.ಮಂಗಳವಾರ ಬೆಳಗ್ಗೆವರೆಗಿನ 24 ಗಂಟೆಗಳ ಅವಧಿಯಲ್ಲಿ ಹಾವೇರಿಯಲ್ಲಿ 10.20 ಮಿಮೀ, ಹಾನಗಲ್ಲ 16.76 ಮಿಮೀ, ಸವಣೂರು 10.49, ಶಿಗ್ಗಾಂವಿ 15.85 ಸೇರಿದಂತೆ ಜಿಲ್ಲೆಯಲ್ಲಿ ಸರಾಸರಿ 10.10 ಮಿಮೀ ಮಳೆ ಬಿದ್ದಿದೆ. ಮಂಗಳವಾರವೂ ಮಳೆ ಮುಂದುವರಿದಿದೆ. ಇದರಿಂದ ವಾತಾವರಣ ಸಂಪೂರ್ಣ ತಂಪಾಗಿದೆ.