ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹದಲ್ಲಿ ಮಂಗಳವಾರ ವಿವಿಧ ಸಂಘಟನೆಗಳ ಕಾರ್ಯಕರ್ತರು ಧರಣಿಯಲ್ಲಿ ಭಾಗವಹಿಸುವ ಮೂಲಕ ಬೆಂಬಲ ಸೂಚಿಸಿದರು.
ಹೋರಾಟಗಾರ ಕೆ.ಆರ್.ರವೀಂದ್ರ ಮಾತನಾಡಿ, 1941, 47 ಹಾಗೂ 48ರ ಅವಧಿಯಲ್ಲಿ ಅಂದಿನ ಮೈಸೂರು ಮಹಾರಾಜರು ಆರೋಗ್ಯ ಮತ್ತು ಶಿಕ್ಷಣಕ್ಕಾಗಿ ರೈತರಿಂದ 78.17 ಎಕರೆ ಜಮೀನನ್ನು ಭೂಸ್ವಾನ ಮಾಡಿಕೊಂಡಿದ್ದರು. ನಂತರದ ದಿನಗಳಲ್ಲಿ ಪಟ್ಟಭದ್ರ ಹಿತಾಸಕ್ತಿಗಳು ಈ ಜಾಗವನ್ನು ಅತಿಕ್ರಮ ಮಾಡಿಕೊಂಡು ಕಟ್ಟಡಗಳನ್ನು ಕಟ್ಟಿಕೊಂಡಿದ್ದಾರೆ. ತಮಿಳು ಕಾಲೋನಿ ಸಹ ನಿರ್ಮಾಣವಾಯಿತು. ಈ ಎಲ್ಲ ಜಾಗವನ್ನು ತೆರವುಗೊಳಿಸುವಲ್ಲಿ ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಈ ಜಾಗವನ್ನು ತೆರವುಗೊಳಿಸುವಂತೆ ನಾವು ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಪ್ರಕರಣ ದಾಖಲು ಮಾಡಿದ್ದೇವು. ಅದರಂತೆ ನ್ಯಾಯಾಲಯ ತಮಿಳುಕಾಲೋನಿ ನಿವಾಸಿಗಳನ್ನು ತೆರವುಗೊಳಿಸುಂತೆ ಆದೇಶ ನೀಡಿತ್ತು. 16 ಕೋಟಿ ರೂ. ವೆಚ್ಚದಲ್ಲಿ ಚಿಕ್ಕಮಂಡ್ಯ ಬಳಿ ಮನೆಗಳನ್ನು ನಿರ್ಮಿಸಲಾಗಿತ್ತು. ಆದರೆ, ಅಲ್ಲಿಗೆ ನಿವಾಸಿಗಳನ್ನು ಸ್ಥಳಾಂತರ ಮಾಡುವಲ್ಲಿ ಜಿಲ್ಲಾಡಳಿತ ಮತ್ತು ಕೊಳಚೆ ನಿರ್ಮೂಲನಾ ಮಂಡಳಿ ವಿಫಲವಾಗಿದೆ ಎಂದು ಕಿಡಿಕಾರಿದರು.
ಮಂಡ್ಯದಲ್ಲಿ ಹೃದಯಾಘಾತ, ಕ್ಯಾನ್ಸರ್ ಸೇರಿದಂತೆ ಮಾರಕ ರೋಗದಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಅದಕ್ಕಿ ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ. ಎಷ್ಟೋ ಮಂದಿ ಸಾಯುವಂತಹ ಸ್ಥಿತಿಗೆ ಬಂದು ತಲುಪಿದ್ದಾರೆ. ಇಷ್ಟಾದರೂ ಕೇವಲ ತಮಿಳುನಿವಾಸಿಗಳ ಒಂದು ಸಾವಿರ ಮತಗಳಿಗಾಗಿ ಈ ಜಾಗವನ್ನು ತೆರವು ಮಾಡದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾವು 6 ಬೇಡಿಕೆಗಳಿಗಾಗಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದೇನೆ. ತಮಿಳುಕಾಲೋನಿ ಜಾಗ ತೆರವಿಗೆ ಇರುವ ನ್ಯಾಯಾಲಯದ ತಡೆಯಾಜ್ಞೆ ತೆರವು ಮಾಡಿಸಬೇಕು. ಮಿಮ್ಸ್ನವರು ಸಾರ್ವಜನಿಕ ಹಿತಾಸಕ್ತಿ ಪ್ರಕರಣ ದಾಖಲಿಸಿದ್ದು, ಇದಕ್ಕೆ ವಿಶೇಷ ವಕೀಲರನ್ನು ನೇಮಕ ಮಾಡಬೇಕು ಎಂದು ಆಗ್ರಹಿಸಿದರು.
ಡೀಸಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ದೂರವಾಣಿ ಕರೆ ಮಾಡಿ ಧರಣಿ ಕೈಬಿಡುವಂತೆ ಮನವಿ ಮಾಡಿದ್ದು, ನಮ್ಮ ಬೇಡಿಕೆ ಈಡೇರಿಸಿದರಷ್ಟೇ ಸತ್ಯಾಗ್ರಹ ಕೈಬಿಡುವುದಾಗಿ ಸ್ಪಷ್ಟವಾಗಿ ತಿಳಿಸಿದರು.