ಕನ್ನಡಪ್ರಭ ವಾರ್ತೆ ಮಾಗಡಿ
ಪೌರ ನೌಕರ ಸಂಘದ ಮಾಗಡಿ ಶಾಖೆಯ ಅಧ್ಯಕ್ಷ ರವಿಕುಮಾರ್ ಮಾತನಾಡಿ, ಈ ಹಿಂದೆ ಕೂಡ ಪ್ರತಿಭಟನೆ ಮೂಲಕ ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು, ಜ್ಯೋತಿ ಸಂಜೀವಿನಿ ಯೋಜನೆ ಜಾರಿ ಮಾಡಬೇಕು. ನೀರು ಸರಬರಾಜು ಮಾಡುವ ಹೊರ ಗುತ್ತಿಗೆ ನೌಕರರನ್ನು ನೇರ ಪಾವತಿ ಅಥವಾ ಕಾಯಂಗೊಳಿಸುವಂತೆ ಆಗ್ರಹ ಮಾಡಿದ್ದರೂ ಕೂಡ ರಾಜ್ಯ ಸರ್ಕಾರ ನಮ್ಮ ಬೇಡಿಕೆಯನ್ನು ಈಡೇರಿಸಿಲ್ಲ. ಈ ಹಿನ್ನೆಲೆ ರಾಜ್ಯಾದ್ಯಂತ ನಮ್ಮ ಸಂಘದ ರಾಜ್ಯಾಧ್ಯಕ್ಷರು ಪ್ರಭಾಕರ್ ಹಾಗೂ ರಾಜ್ಯ ಉಪಾಧ್ಯಕ್ಷರಾದ ಆರ್. ನಾಗರಾಜು ನೇತೃತ್ವದಲ್ಲಿ ಮಂಗಳವಾರ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತಿದ್ದು, ಬುಧವಾರ ಕೂಡ ಬೇಡಿಕೆ ಈಡೇರಿಕೆಗಾಗಿ ಹೋರಾಟ ಮುಂದುವರಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕರ್ತವ್ಯಕ್ಕೆ ಗೈರು:ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಪೌರ ನೌಕರರು ಮಂಗಳವಾರ ಕರ್ತವ್ಯಕ್ಕೆ ಗೈರು ಹಾಜರಾದರು. ಕಸ ಸಂಗ್ರಹ, ವಿಲೇವಾರಿ, ಸ್ವಚ್ಛತೆ, ನೀರು ಪೂರೈಕೆ, ಒಳಚರಂಡಿ ನಿರ್ವಹಣೆ ಸ್ಥಗಿತಗೊಳಿಸಿ, ಪುರಸಭೆ ಮುಂಭಾಗದಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೂ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದ ಎಲ್ಲಾ ನಗರ, ಸ್ಥಳೀಯ ಸಂಸ್ಥೆ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸಿ ಜ್ಯೋತಿ ಸಂಜೀವಿನಿ, ಕೆಜಿಐಡಿ, ಸೇರಿದಂತೆ ಸರ್ಕಾರಿ ನೌಕರ ಪಡೆಯುವ ಎಲ್ಲಾ ಸೌಲಭ್ಯಗಳನ್ನು ನೀಡಬೇಕು.
ಇದೇ ವೇಳೆ ಬಿಲ್ ಕಲೆಕ್ಟರ್ ನಾಗರಾಜು, ವಾಟರ್ ಮ್ಯಾನ್ ಗಳಾದ ಮಂಜು, ಅಜಮ್, ದೇವರಾಜ್, ಗಿರೀಶ್, ರಂಗಪ್ಪ ,ರಮೇಶ್ ಸೇರಿದಂತೆ ಹಲವು ಪೌರ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.