ಸಕಲೇಶಪುರ: ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ವಿದ್ಯಾರ್ಥಿಗಳು ಹಾಗೂ ಪ್ರತಿಯೊಬ್ಬ ನಾಗರಿಕರು ತಿಳಿದುಕೊಳ್ಳಬೇಕು. ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದವರ ಜೀವನ ಹಾಗೂ ಹೋರಾಟವನ್ನು ಅರಿತು ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೊಡುಗೆ ನೀಡಬೇಕು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ಸರ್ಕಾರಿ ಕಚೇರಿಗಳಿಗೆ ಬರುವ ಸಾಮಾನ್ಯ ಜನರಿಗೆ ಗೌರವಯುತವಾಗಿ ಸ್ಪಂದಿಸಿ ಅವರ ಕೆಲಸಗಳನ್ನು ಮಾಡಿಕೊಡುವ ವಾತಾವರಣ ನಿರ್ಮಾಣವಾಗಬೇಕು. ಬಡವರು ತಮ್ಮ ದಿನದ ಕೂಲಿಯನ್ನೂ ಲೆಕ್ಕ ಹಾಕಿಕೊಂಡು ಕಚೇರಿಗಳಿಗೆ ಬರುತ್ತಾರೆ. ಹೀಗಾಗಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಾರ್ವಜನಿಕರ ಹಿತ ಕಾಪಾಡಬೇಕು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.
ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ ಮಾತನಾಡಿ, ಭಾರತಕ್ಕೆ ಸ್ವಾತಂತ್ರ್ಯವು ಯಾರೋ ಹೂವಿನ ಬುಟ್ಟಿಯಲ್ಲಿ ತಂದುಕೊಟ್ಟದ್ದಲ್ಲ. ಸುಮಾರು 200 ವರ್ಷಗಳ ಬ್ರಿಟಿಷರ ಶೋಷಣೆ ಹಾಗೂ ದಮನಕಾರಿ ಆಡಳಿತವನ್ನು ದೇಶ ಎದುರಿಸಿತ್ತು. ದಾದಾಭಾಯಿ ನೌರೋಜಿ ಸೇರಿದಂತೆ ಹಲವು ನಾಯಕರು ಬ್ರಿಟಿಷರು ಭಾರತದ ಸಂಪತ್ತನ್ನು ಕೊಳ್ಳೆ ಹೊಡೆದ ರೀತಿಯನ್ನು ವಿವರಿಸಿದ್ದರು. ಲಾಲಾ ಲಜಪತ್ ರಾಯ್, ಬಾಲ ಗಂಗಾಧರ ತಿಲಕ್, ಬಿಪಿನ್ ಚಂದ್ರಪಾಲ್ ಸೇರಿದಂತೆ ಅನೇಕ ನಾಯಕರು ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದರು. ಮಹಾತ್ಮ ಗಾಂಧೀಜಿಯವರ ಅಹಿಂಸೆ ಹಾಗೂ ಸತ್ಯಾಗ್ರಹದ ಮೂಲಕ ಹೋರಾಟಕ್ಕೆ ಹೊಸ ದಿಕ್ಕು ದೊರೆಯಿತು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸ್ಮರಿಸಿ ದೇಶದ ಏಕತೆ ಹಾಗೂ ಅಭಿವೃದ್ಧಿಗೆ ಎಲ್ಲರೂ ಕೊಡುಗೆ ನೀಡಬೇಕು ಎಂದರು.ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸಾಮಾಜಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರನ್ನು ಸನ್ಮಾನಿಸಿ ಗೌರವಿಸಲಾಯಿತು.