ಚನ್ನಪಟ್ಟಣ: ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಲು ಹಲವು ಮಹನೀಯರು ಸಾಕಷ್ಟು ಶ್ರಮಿಸಿದ್ದಾರೆ. ೭೯ನೇ ಸ್ವಾತಂತ್ರ್ಯ ದಿನಾಚರಣೆಯ ಈ ಸಂದರ್ಭದಲ್ಲಿ ಅವರನ್ನು ನೆನೆಯುವುದು ನಮ್ಮೆಲ್ಲರ ಕರ್ತವ್ಯ ಎಂದು ಬಾಲು ಪಬ್ಲಿಕ್ ಶಾಲೆಯ ಸಂಸ್ಥಾಪಕ ಅಧ್ಯಕ್ಷ ವಿ.ವೆಂಕಟಸುಬ್ಬಯ್ಯ ಚೆಟ್ಟಿ ತಿಳಿಸಿದರು.
ಶಾಲೆಯ ಜಂಟಿ ಕಾರ್ಯದರ್ಶಿ ಬಾಲಸುಬ್ರಮಣ್ಯಂ ಮಾತನಾಡಿ, ಬ್ರಿಟೀಷರ ಕಪಿಮುಷ್ಠಿಗೆ ಸಿಲುಕಿದ್ದ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಲು ಮಹನೀಯರು ಸಾಕಷ್ಟು ಹೋರಾಟ ನಡೆಸಿದರು. ವಿದ್ಯಾರ್ಥಿಗಳು ಮಹಾತ್ಮ ಗಾಂಧಿ, ಬಾಲಗಂಗಾಧರ ತಿಲಕ್ ರಂಥ ಮಹನೀಯರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ಪೋಷಕರಿಗೆ, ಗುರುಹಿರಿಯರಿಗೆ ಗೌರವ ನೀಡುವ ಪರಿಪಾಠ ಬೆಳೆಸಿಕೊಳ್ಳಬೇಕು. ಉನ್ನತ ಸಾಧನೆ ಮಾಡಿ ಕಲಿತ ಶಾಲೆ ಹಾಗೂ ಪೋಷಕರಿಗೆ ಕೀರ್ತಿ ತರುವ ಕೆಲಸ ಮಾಡಬೇಕು ಎಂದರು.
ವಿದ್ಯಾರ್ಥಿಗಳು ವಿವಿಧ ರಾಷ್ಟ್ರ ನಾಯಕರ ವೇಷಭೂಷಣ ಧರಿಸಿ, ದೇಶಭಕ್ತಿ ಗೀತೆಗೆ ನೃತ್ಯ ಮಾಡುವ ಮೂಲಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿದರು.ಕಾರ್ಯಕ್ರಮದಲ್ಲಿ ಶಾಲೆಯ ಅಧ್ಯಕ್ಷೆ ಶೈಲಜಾ, ಕವಿತಾ ಬಾಲಸುಬ್ರಮಣ್ಯಂ, ಶಾಲೆಯ ಮುಖ್ಯ ಶಿಕ್ಷಕಿ ಕವಿತಾ, ಲಯನ್ಸ್ ರಮೇಶ್ ಇತರರು ಇದ್ದರು.