ಕನ್ನಡಪ್ರಭ ವಾರ್ತೆ ಮಡಿಕೇರಿ
ಶಾಸಕರಾದ ಡಾ.ಮಂತರ್ ಗೌಡ ಅಧ್ಯಕ್ಷತೆ ವಹಿಸಲಿದ್ದರು. ಏರ್ ಮಾರ್ಷಲ್ (ನಿ) ಕೆ.ಸಿ.ಕಾರ್ಯಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ, ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಇತರರು ಪಾಲ್ಗೊಂಡಿದ್ದರು.
ಮಳೆಯ ಸಿಂಚನದ ನಡುವೆಯೂ ವಿವಿಧ ಶಾಲೆಯ ವಿದ್ಯಾರ್ಥಿಗಳು ದೇಶಭಕ್ತಿ ಕುರಿತು ನೃತ್ಯ ಪ್ರದರ್ಶನ ನೀಡಿದ್ದು ವಿಶೇಷವಾಗಿತ್ತು. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಜವಹರಲಾಲ್ ನೆಹರು, ಡಾ.ಬಿ.ಆರ್.ಅಂಬೇಡ್ಕರ್ ಹೀಗೆ ಸ್ವಾತಂತ್ರ್ಯ ಕ್ಕಾಗಿ ಹೋರಾಟ ಮಾಡಿದ ಮಹನೀಯರು ಹಾಗೂ ರಾಷ್ಟ್ರದ ಸೇನಾ ಪ್ರಥಮ ಮಹಾದಂಡ ನಾಯಕ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸೇರಿದಂತೆ ಹಲವರನ್ನು ಸ್ಮರಿಸಿದ್ದು ಗಮನ ಸೆಳೆಯಿತು.ಗುರುವಾರ ನಡೆದ ಸ್ವಾತಂತ್ರ್ಯ ದಿನಾಚರಣೆಯು ಅರ್ಥಪೂರ್ಣ ಹಾಗೂ ವೈವಿಧ್ಯತೆಯಿಂದ ಕೂಡಿದ್ದು ವಿಶೇಷವಾಗಿತ್ತು.
ಭಾರತ್ ಸ್ಕೌಟ್ಸ್ ಅಂಡ್ ಗೈಡ್ ನಿಂದ ಅತ್ಯುತ್ತಮ ಸೇವಾ ಪ್ರಶಸ್ತಿಗೆ ಆಯ್ಕೆಯಾದ ಮಡಿಕೇರಿ ಸಂತ ಜೋಸೆಫರ ಆಂಗ್ಲ ಮಾಧ್ಯಮ ಶಾಲೆಯ ಸಹ ಶಿಕ್ಷಕಿ ಗಟ್ರೂಡ್, ಸುಂಟಿಕೊಪ್ಪ ಸಂತ ಅಂತೋನಿ ಹಿರಿಯ ಪ್ರಾಥಮಿಕ ಶಾಲೆಯ ಈವಾ ಜೀತಾ ಬೆನ್ನಿಸ್ ಅವರನ್ನು ಸನ್ಮಾನಿಸಲಾಯಿತು.
ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಡಿಕೇರಿ ಸಂತ ಜೋಸೆಫರ ಪದವಿ ಪೂರ್ವ ಕಾಲೇಜಿನ ಹೇಮಾವತಿ, ಗೋಣಿಕೊಪ್ಪ ವಿದ್ಯಾನಿಕೇತನ ಪದವಿ ಪೂರ್ವ ಕಾಲೇಜಿನ ಚರಿಸ್ಮ್ ಜಾನ್ ಸನ್, ಮಡಿಕೇರಿ ಸಂತ ಮೈಕಲರ ಕಾಲೇಜಿನ ಡಿಯಾನ್ ನವೀನ್ ಅವರನ್ನು ಗೌರವಿಸಲಾಯಿತು.ಮಡಿಕೆರಿ ನಗರಸಭೆ ವತಿಯಿಂದ ಖಾಯಂ ಪೌರ ಕಾರ್ಮಿಕರಾದ ರಂಗಮ್ಮ, ಚಂದ್ರ ಅವರನ್ನು ಸನ್ಮಾನಿಸಲಾಯಿತು.