ಮೂಡುಬಿದಿರೆ ಆಳ್ವಾಸ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ, 15 ಸಾವಿರಕ್ಕೂ ಅಧಿಕ ಮಂದಿ ಧ್ವಜವಂದನೆ

KannadaprabhaNewsNetwork |  
Published : Aug 16, 2024, 12:56 AM IST
ಮಾಜಿ ಮುಖ್ಯಮಂತ್ರಿ  ಎಂ.ವೀರಪ್ಪ ಮೊಯ್ಲಿ, ಪಿ.ಜಿ.ಆರ್ ಸಿಂಧ್ಯಾ, ಉದ್ಯಮಿ ಶ್ರೀಪತಿ ಭಟ್ ಅವರನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ವಿದ್ಯಾಗಿರಿಯ ಸುಂದರಿ ಆಳ್ವ ಆವರಣದ ಕೆ.ವಿ.ಸುಬ್ಬಣ್ಣ ರಂಗಮಂದಿರದಲ್ಲಿ ಗುರುವಾರ ನಡೆದ ೭೮ನೇ ಸ್ವಾತಂತ್ರ‍್ಯೋತ್ಸವ ಸಂಭ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯ್ಲಿ ಧ್ವಜಾರೋಹಣ ನೆರವೇರಿಸಿದರು. ವಿವಿಧ ಕ್ಷೇತ್ರದ ಸಾಧಕರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು, ಸಿಬ್ಬಂದಿ ಸೇರಿದಂತೆ ೧೫ ಸಾವಿರಕ್ಕೂ ಅಧಿಕ ಜನರು ಸಂಭ್ರಮದಲ್ಲಿ ಪಾಲ್ಗೊಂಡರು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ವ್ಯಕ್ತಿ, ಸಮುದಾಯ, ದೇಶ ಸೇರಿದಂತೆ ಸರ್ವರಲ್ಲಿ ನಿರ್ಭೀತ ಸ್ವಾತಂತ್ರ‍್ಯದ ಸಂಸ್ಕೃತಿ ನಮ್ಮದಾಗಬೇಕು. ವೈಯಕ್ತಿಕ ಸ್ವಾತಂತ್ರ‍್ಯದ ಉಳಿವೂ ಇಂದಿನ ಅವಶ್ಯಕತೆ. ಸ್ವಾತಂತ್ರ‍್ಯ ವನ್ನು ಯಾರದೇ ಪಾದಕ್ಕೆ ಸಮರ್ಪಿಸಬೇಡಿ ಎಂದು ಮಾಜಿ ಮುಖ್ಯ ಮಂತ್ರಿ ಎಂ.ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ವಿದ್ಯಾಗಿರಿಯ ಸುಂದರಿ ಆಳ್ವ ಆವರಣದ ಕೆ.ವಿ.ಸುಬ್ಬಣ್ಣ ರಂಗಮಂದಿರದಲ್ಲಿ ಗುರುವಾರ ನಡೆದ ೭೮ನೇ ಸ್ವಾತಂತ್ರ‍್ಯೋತ್ಸವ ಸಂಭ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಯಾವುದೂ ಅಸಾಧ್ಯ ಎಂಬುದು ಇಲ್ಲ. ಪ್ರಕೃತಿ ಪೂರಕ ಸಂಸ್ಕೃತಿ ಬೆಳೆಯಬೇಕು. ಸ್ವಾತಂತ್ರ‍್ಯದ ಸಂಸ್ಕೃತಿ ನಮ್ಮದಾಗಬೇಕು. ಅದಕ್ಕೆ ಪ್ರತಿ ವ್ಯಕ್ತಿಯೂ ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು ಎಂದರು.

ಮಾಜಿ ಸಚಿವರಾದ ಕೆ. ಅಭಯಚಂದ್ರ ಜೈನ್, ಪಿ.ಜಿ.ಆರ್ ಸಿಂಧ್ಯಾ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಉದ್ಯಮಿ ಶ್ರೀಪತಿ ಭಟ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹಾಗೂ ಡಾ ವಿನಯ ಆಳ್ವ ಇದ್ದರು.

ಅತಿಥಿಗಳು ಕಾಲೇಜಿನ ಎನ್ ಸಿಸಿ ತಂಡಗಳಿಂದ ಗೌರವ ರಕ್ಷೆ ಸ್ವೀಕರಿಸಿದರು. ಎನ್‌ಸಿಸಿ ಸೀನಿಯರ್ ಅಂಡರ್ ಆಫೀಸರ್ ಜೊನಾಥನ್ ಡಿಸೋಜ ನೇತೃತ್ವದಲ್ಲಿ ಗೌರವ ರಕ್ಷೆ ನೀಡಲಾಯಿತು. ಬಳಿಕ ‘ವಂದೇ ಮಾತರಂ’ ಹಾಡಲಾಯಿತು. ‘ಕೋಟಿ ಕಂಠೋ ಸೇ...’'''''''' ಗಾನಕ್ಕೆ ವೇದಿಕೆ ಹಾಗೂ ಸಭಾಂಗಣದಲ್ಲಿ ಶಿಸ್ತು ಬದ್ಧವಾಗಿ ನಿಂತ ವಿದ್ಯಾರ್ಥಿಗಳು ಧ್ವಜ ಹಾರಡಿಸಿದರೆ, ಕೇಸರಿ, ಬಿಳಿ, ಹಸಿರು ಬಣ್ಣಗಳ ರಂಗು ಬ್ಲೋವರ್ ಮೂಲಕ ಗಾಳಿಯಲ್ಲಿ ತೇಲಿ ಬಂತು. ಕೇಸರಿ,ಬಿಳಿ, ಹಸಿರು ಬಣ್ಣದ ಪುರುಲಿಯಾ ಸಿಂಹಗಳು ವಿಶೇಷ ಮೆರುಗು ನೀಡಿದವು. ಉಪನ್ಯಾಸಕ ರಾಜೇಶ್ ಡಿಸೋಜಾ ನಿರೂಪಿಸಿದರು.

ವಿವಿಧ ಕ್ಷೇತ್ರದ ಸಾಧಕರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿವಿಧ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು, ಸಿಬ್ಬಂದಿ ಸೇರಿದಂತೆ ೧೫ ಸಾವಿರಕ್ಕೂ ಅಧಿಕ ಜನರು ಸಂಭ್ರಮದಲ್ಲಿ ಪಾಲ್ಗೊಂಡರು.

......................

ಆನಂದ ಆಳ್ವ ಪ್ರಥಮ ಪುಣ್ಯಸ್ಮರಣೆಬಳಿಕ ಕೃಷಿಋಷಿ ಮಿಜಾರುಗುತ್ತು ಆನಂದ ಆಳ್ವರ ಪ್ರಥಮ ಪುಣ್ಯಸ್ಮರಣೆ ಡಾ.ವಿ.ಎಸ್‌.ಆಚಾರ್ಯ ಸಭಾಭವನದಲ್ಲಿ ನಡೆಯಿತು. ಆನಂದ ಆಳ್ವರ ನೆನಪಿಗಾಗಿ, ಅವರಂತೆ ವಿವಿಧ ಕ್ಷೇತ್ರಗಳ ಸಾಧಕರಾದ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ, ಪಿ.ಜಿ.ಆರ್ ಸಿಂಧ್ಯಾ, ಉದ್ಯಮಿ ಶ್ರೀಪತಿ ಭಟ್ ಅವರನ್ನು ಸನ್ಮಾನಿಸಲಾಯಿತು. ಡಾ. ಮೋಹನ ಆಳ್ವರ ಸಹೋದರ ಬಾಲಕೃಷ್ಣ ಆಳ್ವ, ಸಹೋದರಿ ಮೀನಾಕ್ಷಿ ಆಳ್ವ ಇದ್ದರು. ಆಳ್ವಾಸ್ ಪದವಿಪೂರ್ವ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ವೇಣುಗೋಪಾಲ ಶೆಟ್ಟಿ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

400 ಕೋಟಿ ರು. ದರೋಡೆ ಪ್ರಮುಖ ಆರೋಪಿ ಬಂಧನ
ಕಾಂಗ್ರೆಸ್‌ನವರಿಗೆ ಬಜೆಟ್ ಅರ್ಥವಾಗಲ್ಲ: ಜೋಶಿ ಚಾಟಿ