ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಗ್ಯಾರಂಟಿ ಯೋಜನೆ ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡದೇ ಸರ್ಕಾರ ದೊಡ್ಡಮಟ್ಟದಲ್ಲಿ ಸಾಲ ಮಾಡಿದೆ ಎಂದು ಕೇಂದ್ರ ಸಚಿವ ಜೋಶಿ ಹೇಳಿದರು.
ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ಕಳೆದ ಹತ್ತು ವರ್ಷದಲ್ಲಿ ಅಂದರೆ, ಮೋದಿ ಅವರು ಬರುವ ಮುಂಚೆ ದೇಶ ಹೇಗಿತ್ತು. ಈಗ ಹೇಗಿದೆ ಎಂಬುದು ಜನರಿಗೆ ಗೊತ್ತಿದೆ. ಭಾರತ ದೇಶ 5ನೇ ಅತಿದೊಡ್ಡ ಆರ್ಥಿಕ ವ್ಯವಸ್ಥೆಯ ರಾಷ್ಟ್ರವಾಗಿ ಹೊರಹೊಮ್ಮಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ದೇಶದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವ ಬೇಕೋ..? ರಾಹುಲ್ ಗಾಂಧಿ ಹಾಗೂ ಇತ್ಯಾದಿ ನೇತೃತ್ವ ಬೇಕೋ..? ಎಂಬುದನ್ನು ನಿರ್ಧರಿಸುವ ಚುನಾವಣೆ ಇದಾಗಿದೆ. ಇಲ್ಲಿ ನಾನು ಮಾಡಿದ ಅಭಿವೃದ್ಧಿ ಕಾರ್ಯ ನೋಡಿಕೊಂಡು ಜನರು ಆಶೀರ್ವಾದ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಲಿಂಗಾಯತ ಮತಗಳು ಒಡೆಯುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಇಲ್ಲಿ ಯಾವುದೇ ಜಾತಿ ಆಧಾರದ ಮೇಲೆ ಚುನಾವಣೆ ಆಗುವುದಿಲ್ಲ. ಜನರು ದೇಶದ ಅಭಿವೃದ್ಧಿ ಹಾಗೂ ಸದೃಢ ನಾಯಕತ್ವದ ಆಧಾರದ ಮೇಲೆ ಆಶೀರ್ವಾದ ಮಾಡುತ್ತಾರೆ ಎಂದು ಹೇಳಿದರು.
ಕಾಂಗ್ರೆಸ್ ವಿರುದ್ಧ ಕಿಡಿ
ಬರ ಪರಿಹಾರ ವಿಚಾರವಾಗಿ ಕಾಂಗ್ರೆಸ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಜೋಶಿ ಅವರು, ರಾಜ್ಯದ ಬರ ಕುರಿತು ಸುಪ್ರೀಂ ಕೋರ್ಟ್ನಿಂದ ಎಲ್ಲವೂ ಸತ್ಯ ತಿಳಿದು ಬರಲಿದೆ. ಬಿಜೆಪಿ ವಿರುದ್ಧ ವಿನಾಕಾರಣ ಆರೋಪ ಮಾಡುವ ರಾಜ್ಯ ಕಾಂಗ್ರೆಸ್ ಸರ್ಕಾರ ಇಷ್ಟು ಜನಪ್ರಿಯತೆ ಇದ್ದರೆ ದುಡ್ಡು ಕೊಡಬಹುದಿತ್ತು. ಕೇವಲ ಎರಡು ಸಾವಿರ ಕೊಡ್ತಿದ್ದೀರಿ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
ಆರ್ಥಿಕ ಸ್ಥಿತಿ ಅಧೋಗತಿಗೆ
ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಗ್ಯಾರಂಟಿ ಯೋಜನೆ ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡದೇ ಸರ್ಕಾರ ದೊಡ್ಡಮಟ್ಟದಲ್ಲಿ ಸಾಲ ಮಾಡಿದೆ. ಬರ ಸಮೀಕ್ಷೆಯ ಬಗ್ಗೆ ಸುಪ್ರೀಂಕೋರ್ಟ್ ವಿಚಾರಣೆ ಬಳಿಕ ಎಲ್ಲವೂ ಗೊತ್ತಾಗುತ್ತದೆ. ಪಾಪ್ಯುಲಾರಿಟಿ ಇದ್ದ ರಾಜ್ಯ ಸರ್ಕಾರ ಎರಡು ಸಾವಿರ ಕೊಡುತ್ತಿದೆ, ನಾಚಿಕೆ ಆಗುವುದಿಲ್ಲವೇ? ಯಡಿಯೂರಪ್ಪ ಸಿಎಂ ಇದ್ದ ಸಂದರ್ಭದಲ್ಲಿ ಬರ ಹಾವಳಿ ಇದ್ದಾಗ ಸಾಕಷ್ಟು ಹಣ ಕೊಟ್ಟಿದ್ದೇವೆ. ಎಷ್ಟೇ ತೆರಿಗೆ ಜಾಸ್ತಿ ಮಾಡಿದರೂ ರಾಜ್ಯ ಸರ್ಕಾರದ ಆದಾಯ ಮಾತ್ರ ಜಾಸ್ತಿಯಾಗುತ್ತಿಲ್ಲ. ಮುದ್ರಾಂಕ ಶುಲ್ಕದಿಂದಲೂ ಕೂಡ ಯಾವುದೇ ರೀತಿಯಲ್ಲಿ ಆದಾಯ ಸ್ಥಿತಿ ಸರಿದೂಗುತ್ತಿಲ್ಲ. ಅಲ್ಲದೆ ದೊಡ್ಡ ಮಟ್ಟದ ಭ್ರಷ್ಟಾಚಾರದಿಂದ ಆರ್ಥಿಕ ಸ್ಥಿತಿ ಅಧೋಗತಿಗೆ ತಲುಪಿದೆ ಎಂದು ಆರೋಪಿಸಿದರು.ಕೇಂದ್ರ ಸಚಿವ ಜೋಶಿ ಟೆಂಪಲ್ ರನ್
ಕನ್ನಡಪ್ರಭ ವಾರ್ತೆ ಕುಂದಗೋಳ
ಕೇಂದ್ರ ಸಚಿವ ಹಾಗೂ ಧಾರವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಕುಂದಗೋಳದಲ್ಲಿ ಟೆಂಪಲ್ ರನ್ ಮಾಡಿದರು. ಶಿಥಿಕಂಠೇಶ್ವರ ಮಠ, ಕಲ್ಯಾಣಪುರಮಠ, ಶಿವಾನಂದ ಮಠ ಸೇರಿದಂತೆ ವಿವಿಧ ಮಠಗಳಿಗೆ ತೆರಳಿ ದರ್ಶನಾಶೀರ್ವಾದ ಪಡೆದರು. ಈ ವೇಳೆ ಶಾಸಕ ಎಂ.ಆರ್. ಪಾಟೀಲ, ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.