ಬಳ್ಳಾರಿ: ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಗಣನೀಯ ಪ್ರಗತಿ ಸಾಧಿಸಿದ್ದು, ಇದೇ ವೇಗದಲ್ಲಿ ಮುನ್ನಡೆದರೆ ಕೆಲವೇ ವರ್ಷಗಳಲ್ಲಿ ವಿಶ್ವದಲ್ಲಿಯೇ ಅಗ್ರಸ್ಥಾನಕ್ಕೇರಲಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಾಜಿ ಅಧ್ಯಕ್ಷ ಹಾಗೂ ಖ್ಯಾತ ಬಾಹ್ಯಾಕಾಶ ಹಿರಿಯ ವಿಜ್ಞಾನಿ ಎ.ಎಸ್. ಕಿರಣ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ಬಾಹ್ಯಾಕಾಶ ಸಂಶೋಧನೆಯಲ್ಲಿ ಭಾರತ ಹಲವು ಮಹತ್ವದ ಸಾಧನೆ ಮಾಡಿದೆ. ಚಂದ್ರನ ಮೇಲೆ ನೀರಿನ ಅಂಶ ಇರುವುದನ್ನು ಪತ್ತೆ ಹಚ್ಚುವಲ್ಲಿ ಚಂದ್ರಯಾನ-1 ಪ್ರಮುಖ ಪಾತ್ರ ವಹಿಸಿದೆ. ಭಾರತ ನಡೆಸಿದ ಈ ಸಂಶೋಧನೆಯ ಬಳಿಕವಷ್ಟೇ ಇತರ ರಾಷ್ಟ್ರಗಳು ಚಂದ್ರನಲ್ಲಿನ ನೀರಿನ ಅಂಶದ ಕುರಿತು ಹೆಚ್ಚಿನ ಅಧ್ಯಯನಕ್ಕೆ ಮುಂದಾದವು ಎಂದು ಹೇಳಿದರು.
ದೇಶದ ಬಾಹ್ಯಾಕಾಶ ಕ್ಷೇತ್ರದ ಸಾಧನೆ ಭಾರತೀಯ ವಿಜ್ಞಾನಿಗಳ ಸಾಮರ್ಥ್ಯಕ್ಕೆ ಸಾಕ್ಷಿಯಾಗಿವೆ. ಸೀಮಿತ ಸಂಪನ್ಮೂಲಗಳ ನಡುವೆಯೂ ಸಂಕೀರ್ಣ ಬಾಹ್ಯಾಕಾಶ ಯೋಜನೆ ಯಶಸ್ವಿಯಾಗಿ ಕೈಗೊಳ್ಳುವ ಮೂಲಕ ಭಾರತ ಜಾಗತಿಕ ಮಟ್ಟದಲ್ಲಿ ತನ್ನದೇ ಆದ ಸ್ಥಾನ ಗಳಿಸಿಕೊಂಡಿದೆ. ಮುಂದಿನ ದಿನಗಳಲ್ಲಿ ಸಂಶೋಧನೆ ಮತ್ತು ತಂತ್ರಜ್ಞಾನಕ್ಕೆ ಹೆಚ್ಚಿನ ಆದ್ಯತೆ ನೀಡಿದರೆ ಭಾರತ ಮತ್ತಷ್ಟು ವೇಗವಾಗಿ ಮುನ್ನಡೆಯಲಿದೆ ಎಂದರು.ಇದೇ ವೇಳೆ ಬಾಹ್ಯಾಕಾಶ ವಿಜ್ಞಾನ ಸಂಬಂಧಿತ ಪ್ರಶ್ನೋತ್ತರಗಳ ಮೂಲಕ ಮಕ್ಕಳಲ್ಲಿ ವಿಜ್ಞಾನದ ಬಗ್ಗೆ ಕುತೂಹಲ ಮೂಡಿಸಿದ ಹಿರಿಯ ವಿಜ್ಞಾನಿ ಎ.ಎಸ್. ಕಿರಣ್ ಕುಮಾರ್ ಅವರು, ವಿಜ್ಞಾನ ಸಂಬಂಧಿಸಿದ ಯಾವುದೇ ಗೊಂದಲವಿದ್ದರೂ ಪ್ರಶ್ನಿಸಿ ಉತ್ತರ ಕಂಡುಕೊಳ್ಳಬೇಕು ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.
ಪ್ರತಿಯೊಂದು ಮಗುವಿನಲ್ಲೂ ವಿಜ್ಞಾನಿ:
ಮಕ್ಕಳ ಕುತೂಹಲಕ್ಕೆ ಕಡಿವಾಣ ಹಾಕದೆ, ಪ್ರಶ್ನೆಗಳಿಗೆ ಉತ್ತರ ಹುಡುಕುವ ಅವಕಾಶ ಕಲ್ಪಿಸಬೇಕು. ಶಾಲೆಗಳಲ್ಲಿ ಪ್ರಯೋಗ, ವೀಕ್ಷಣೆ ಮತ್ತು ಸಂಶೋಧನೆ ಆಧಾರಿತ ಕಲಿಕೆಗೆ ಹೆಚ್ಚಿನ ಒತ್ತು ನೀಡಬೇಕು. ಇದರಿಂದ ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಬೆಳೆದು ಹೊಸ ಆವಿಷ್ಕಾರಗಳತ್ತ ಅವರ ಚಿಂತನೆ ವಿಸ್ತರಿಸಲಿದೆ ಎಂದು ತಿಳಿಸಿದರು.
ಪ್ರಾಸ್ತಾವಿಕ ಮಾತನಾಡಿದ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಏಳುಬೆಂಚೆ ರಾಜಶೇಖರ್, ದೇಶದ ಪ್ರಮುಖ ವಿಜ್ಞಾನಿಗಳನ್ನು ಎಸ್.ಕೆ. ಮೋದಿ ಶಾಲೆಗೆ ಆಹ್ವಾನಿಸಿ ಅವರಿಂದ ಅನೇಕ ವಿಜ್ಞಾನದ ಸಂಗತಿ ತಿಳಿಸಿಕೊಡಲು ಮನವಿ ಮಾಡಿಕೊಡಲಾಯಿತು. ಅಂತೆಯೇ ನಮ್ಮ ಮನವಿಗೆ ಒಪ್ಪಿ ಖ್ಯಾತ ವಿಜ್ಞಾನಿಗಳು ಆಗಮಿಸಿ ತಮ್ಮ ಸಂಶೋಧನಾ ಅನುಭವ ಹಾಗೂ ಸಂಶೋಧನಾ ಫಲಿತಗಳ ಕುರಿತು ಮಕ್ಕಳಿಗೆ ತಿಳಿಸಿಕೊಟ್ಟಿದ್ದಾರೆ. ಇದು ನಮ್ಮ ಶಾಲೆಯ ಪ್ರತಿಯೊಬ್ಬ ವಿದ್ಯಾರ್ಥಿ ಸೌಭಾಗ್ಯವಾಗಿದೆ ಎಂದು ಸ್ಮರಿಸಿದರು.