ವಿಶ್ವದಲ್ಲಿಯೇ ಶ್ರೇಷ್ಠ ಪ್ರಜಾಪ್ರಭುತ್ವ ಹೊಂದಿದ ದೇಶ ಭಾರತ: ಜಿ.ಎಸ್. ಪಾಟೀಲ

KannadaprabhaNewsNetwork |  
Published : Sep 16, 2025, 12:03 AM IST
ಕಾರ್ಯಕ್ರಮವನ್ನು ಶಾಸಕ ಜಿ.ಎಸ್‌.ಪಾಟೀಲ ಉದ್ಘಾಟಿಸಿದರು. | Kannada Prabha

ಸಾರಾಂಶ

ಗದಗ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ಸೋಮವಾರ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಗದಗ: ವಿಶ್ವದಲ್ಲಿ ಹಲವಾರು ದೇಶಗಳು ಪ್ರಜಾಪ್ರಭುತ್ವಕ್ಕೆ ತಮ್ಮ ತಮ್ಮ ವಿಚಾರಗಳನ್ನು ಅಳವಡಿಸಿಕೊಂಡಿವೆ. ಆದರೆ ಭಾರತ ದೇಶವು ವಿಶ್ವದಲ್ಲಿಯೇ ಶ್ರೇಷ್ಠ ಪ್ರಜಾಪ್ರಭುತ್ವ ಹೊಂದಿದ ದೇಶವಾಗಿದೆ ಎಂದು ರೋಣ ಶಾಸಕ ಜಿ.ಎಸ್. ಪಾಟೀಲ ಹೇಳಿದರು.

ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ನಂತರ ಪ್ರಜೆಗಳ ಹಿತಕ್ಕೋಸ್ಕರವಾಗಿಯೇ ಪ್ರಜಾಪ್ರಭುತ್ವದ ಅವಶ್ಯಕತೆ ಇದೆ ಎನ್ನುವ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರದಿಂದಲೇ ದೇಶವು ಅಖಂಡ ಭಾರತವಾಗಿ ಉಳಿಯಲು ಸಾಧ್ಯವಾಯಿತು. ಪ್ರಜಾಪ್ರಭುತ್ವ ವ್ಯವಸ್ಥೆ ಮನವರಿಕೆ ಮಾಡಲು 2007ರಲ್ಲಿ ಯುನೈಟೆಡ್ ನೇಶನ್‌ದ ಸದಸ್ಯರೆಲ್ಲರೂ ನಿರ್ಣಯಿಸಿದರು. ತದನಂತರ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು 2008ರಿಂದ ಆಚರಿಸಲಾಗುತ್ತಿದೆ. ಸರ್ಕಾರ ಮತ್ತು ಪ್ರಜೆಗಳ ಮಧ್ಯೆ ಆಡಳಿತ ವ್ಯವಸ್ಥೆ ಕಲ್ಪಿಸುವ ಮಹತ್ವದ ಹೆಜ್ಜೆ ಇದಾಗಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳು ಪೂರ್ಣ ಪ್ರಮಾಣದಲ್ಲಿ ಸಾಧಿಸಬೇಕಾಗಿದೆ. ವಿಶೇಷವಾಗಿ ಆರ್ಥಿಕ ಮತ್ತು ಸಾಮಾಜಿಕ ಸಮಾನತೆ ತರಬೇಕಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಲ್ಲಿಲ್ಲದ ದೇಶಗಳೂ ಸಹಿತ ಪ್ರಜಾಪ್ರಭುತ್ವ ವ್ಯವಸ್ಥೆ ಒಪ್ಪಿಕೊಳ್ಳುವ ಮಹತ್ವದ ಹೆಜ್ಜೆ ಇಡಬೇಕು. ಪ್ರಜಾಪ್ರಭುತ್ವದಲ್ಲಿ ಶಾಂತಿ ಮತ್ತು ಸಮಾನತೆ ಅವಕಾಶ ಕಲ್ಪಿಸಲಾಗಿದೆ ಎಂದರು.

ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, ಪ್ರಜೆಗಳ ಅಧೀನದಲ್ಲಿನ ಸರ್ಕಾರವೇ ಪ್ರಜಾಪ್ರಭುತ್ವವಾಗಿದೆ. ಪ್ರತಿಯೊಬ್ಬರೂ ಸ್ವಾತಂತ್ರ್ಯವಾಗಿ ಇರುವುದು ಸಂವಿಧಾನದಿಂದ ಸಾಧ್ಯವಾಗಿದೆ. ಸಮಾಜದಲ್ಲಿನ ಎಲ್ಲ ಪ್ರಜೆಗಳೂ ಕಾನೂನಿನ ಚೌಕಟ್ಟಿನೊಳಗೆ ಇರಬೇಕಾಗುತ್ತದೆ. ಎಂತಹ ಪ್ರತಿಷ್ಠಿತ ವ್ಯಕ್ತಿಯೂ ಸಹಿತ ಕಾನೂನು ಉಲ್ಲಂಘನೆ ಮಾಡಿದರೆ ತಕ್ಕ ಶಿಕ್ಷೆ ಅನುಭವಿಸಬೇಕಾಗುತ್ತದೆ. ಸಂವಿಧಾನದ ಬೆಲೆ ಶಿಕ್ಷಣ ಪಡೆದಾಗ ಮಾತ್ರ ಸಾಧ್ಯವಾಗುತ್ತದೆ. ಸಂವಿಧಾನದಲ್ಲಿ ಮೀಸಲಾತಿ ಇರದೇ ಹೋಗಿದ್ದರೆ ಕೆಳವರ್ಗದ ಪ್ರಜೆಗಳು ಸಮಾಜ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತಿರಲಿಲ್ಲ. ಪ್ರಜಾಪ್ರಭುತ್ವದ ಕುರಿತು ಇನ್ನೂ ಹೆಚ್ಚು ಅರಿವು ಮೂಡಿಸುವ ಕಾರ್ಯವು ಜಿಲ್ಲೆಯ ಪ್ರತಿ ಗ್ರಾಮದಲ್ಲಿ ಆಗಬೇಕಿದೆ ಎಂದು ಹೇಳಿದರು.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರು ಕ್ರಿ.ಶ.1949ರಲ್ಲಿ ಸಂವಿಧಾನ ಜಾರಿಗೆ ತಂದು ಬದಲಾವಣೆ ತಂದರು. ಸಂವಿಧಾನವನ್ನು ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸದೇ ಇದ್ದರೆ ಕೆಳಹಂತದಲ್ಲಿರುವ ಪ್ರಜೆಗಳು ಅಧಿಕಾರ ಪಡೆಯಲು ಸಾಧ್ಯವಾಗುತ್ತಿರಲಿಲ್ಲ. ಭಾರತವು ಬಲಿಷ್ಠ ಹಾಗೂ ಶ್ರೇಷ್ಠವಾದ ಪ್ರಜಾಪ್ರಭುತ್ವ ಹೊಂದಿದ ದೇಶವಾಗಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯದಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಎಲ್ಲ ಸೌಲಭ್ಯಗಳು ದೊರಕಬೇಕಾಗಿದೆ ಎಂದರು.

ಸರ್ಕಾರಿ ಪಪೂ ಕಾಲೇಜಿನ ಉಪನ್ಯಾಸಕ ಎಚ್.ಎ. ಕರ್ನೂಲ ಮಾತನಾಡಿ, ವಿಶ್ವದ 195 ದೇಶಗಳಲ್ಲಿ ಭಾರತ ದೇಶವು ಪ್ರಜಾಪ್ರಭುತ್ವದಲ್ಲಿ ತನ್ನದೇ ಆದ ವೈಶಿಷ್ಟತೆ ಹಾಗೂ ಮಹತ್ವ ಹೊಂದಿದೆ. ವಿವಿಧತೆಯಲ್ಲಿ ಏಕತೆಯನ್ನು ಹಾಗೂ ಏಕತೆಯಲ್ಲಿ ವಿವಿಧತೆಯನ್ನು ಸಾರಿದಂತಹ ಈ ದೇಶ. ಸರ್ವೇ ಜನಾಃ ಸುಖಿನೋ ಭವಂತು, ವಸುಧೈವ ಕುಟುಂಬಕ ಎನ್ನುವ ಮೂಲಕ ಸಮಾನತೆಯನ್ನು ಸಾರುತ್ತಿದೆ ಎಂದರು.

ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅವರು, ಸಂವಿಧಾನ ಪ್ರಸ್ತಾವನೆ ಬೋಧಿಸಿದರು. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಮಟ್ಟದ ಚಿತ್ರಕಲೆ, ಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆಗೆ ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರೋಹನ್ ಜಗದೀಶ, ಎಸ್.ಎನ್. ಬಳ್ಳಾರಿ, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ ಇದ್ದರು.

ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ನಾಡಗೀತೆ ಪ್ರಸ್ತುತಪಡಿಸಿದರು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ ಸ್ವಾಗತಿಸಿದರು. ವೀರಯ್ಯ ಹೊಸಮಠ ಕಾರ್ಯಕ್ರಮ ನಿರೂಪಿಸಿದರು. ಎಚ್.ಆರ್. ಸಕ್ರಿ ವಂದಿಸಿದರು.

PREV

Recommended Stories

ದ.ಕ.ದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆಗೆ ಚಾಲನೆ
ಕದ್ರಿ ದೇವಸ್ಥಾನ ಪ್ರಾಂಗಣದಲ್ಲಿ ‘ಮುದ್ದು ಕೃಷ್ಣ’ ವೇಷ ಸ್ಪರ್ಧೆ