ಭಾರತೀಯ ಸಂಸ್ಕೃತಿ ವಿಶ್ವದ ಎಲ್ಲ ದೇಶಗಳಿಗೂ ಮಾದರಿ: ಸದಾಶಿವ ಸ್ವಾಮೀಜಿ

KannadaprabhaNewsNetwork |  
Published : Sep 04, 2024, 01:53 AM IST
ಬಳ್ಳಾರಿಯ ರಾಘವ ಕಲಾಮಂದಿರದಲ್ಲಿ ಜರುಗಿದ ಭಾರತೀಯ ಸಂಸ್ಕೃತಿ ಉತ್ಸವಕ್ಕೆ ಸೇಡಂನ ಶ್ರೀಕೊತ್ತಲ ಬಸವೇಶ್ವರ ದೇವಸ್ಥಾನದ ಶ್ರೀಸದಾಶಿವ ಸ್ವಾಮೀಜಿ ಚಾಲನೆ ನೀಡಿದರು.  | Kannada Prabha

ಸಾರಾಂಶ

ವ್ಯಕ್ತಿ ಉನ್ನತಿಯಿಂದ ರಾಷ್ಟ್ರದ ಉನ್ನತಿ ಸಾಧ್ಯ ಎಂಬ ನಿಟ್ಟಿನಲ್ಲಿ ಬರುವ 2025ರ ಜನವರಿ 29ರಿಂದ ಫೆಬ್ರವರಿ 6ರ ವರೆಗೆ ಕಲಬುರ್ಗಿ ಜಿಲ್ಲೆಯ ಸೇಡಮ್‌ನಲ್ಲಿ 7ನೇ ಭಾರತೀಯ ಸಂಸ್ಕೃತಿ ಉತ್ಸವ ಆಯೋಜಿಸಲಾಗಿದೆ ಎಂದು ಸೇಡಂನ ಕೊತ್ತಲ ಬಸವೇಶ್ವರ ದೇವಸ್ಥಾನದ ಶ್ರೀ ಸದಾಶಿವ ಸ್ವಾಮೀಜಿ ಹೇಳಿದರು.

ಬಳ್ಳಾರಿ: ಭಾರತೀಯ ಸಂಸ್ಕೃತಿ ಉಳಿದೆಲ್ಲ ದೇಶಗಳಿಗೂ ಮಾದರಿ. ಹೀಗಾಗಿಯೇ ಅನೇಕ ದೇಶಗಳು ನಮ್ಮ ದೇಶದ ಸಂಸ್ಕೃತಿ ಮೈಗೂಡಿಸಿಕೊಳ್ಳುತ್ತಿದ್ದಾರೆ ಎಂದು ಸೇಡಂನ ಕೊತ್ತಲ ಬಸವೇಶ್ವರ ದೇವಸ್ಥಾನದ ಶ್ರೀ ಸದಾಶಿವ ಸ್ವಾಮೀಜಿ ಹೇಳಿದರು.

ಭಾರತೀಯ ಶಿಕ್ಷಣ ಸಮಿತಿಯಿಂದ ನಗರದ ರಾಘವ ಕಲಾಮಂದಿರದಲ್ಲಿ ಹಮ್ಮಿಕೊಂಡಿದ್ದ ಕಲ್ಯಾಣ ಕರ್ನಾಟಕ ವಿಕಾಸ ಪಥ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಭಾರತೀಯ ಅನನ್ಯ ಸಂಸ್ಕೃತಿಯ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಬೇಕು. ಇಲ್ಲಿನ ಸಂಸ್ಕೃತಿ ಹಾಗೂ ಸಂಸ್ಕಾರದ ಪರಂಪರೆಯ ಬಗ್ಗೆ ಹೆಮ್ಮೆ ಮೂಡುವಂತೆ ಮಕ್ಕಳಲ್ಲಿ ಪ್ರೇರೇಪಿಸಬೇಕು. ಸ್ವಾರ್ಥ ಜೀವನದ ಬದಲು ಇತರರಿಗಾಗಿ ಬದುಕುವ ಹಾಗೂ ಬೇರೆಯವರ ಶ್ರೇಯಸ್ಸಿನ ಚಿಂತನೆ ಮಾಡುವ ಯೋಚನೆಗಳು ಮತ್ತಷ್ಟು ಬಲಗೊಳ್ಳಬೇಕು. ಉತ್ತಮ ಸಮಾಜ ನಿರ್ಮಾಣ ಹಾಗೆಯೇ ನಿರ್ಮಿತವಾಗುವುದಿಲ್ಲ. ಅದಕ್ಕಾಗಿ ಸಾಕಷ್ಟು ಶ್ರಮಿಸಬೇಕು. ಜನಕಲ್ಯಾಣವೇ ಮುಖ್ಯ ಆಶಯವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ವ್ಯಕ್ತಿ ಉನ್ನತಿಯಿಂದ ರಾಷ್ಟ್ರದ ಉನ್ನತಿ ಸಾಧ್ಯ ಎಂಬ ನಿಟ್ಟಿನಲ್ಲಿ ಬರುವ 2025ರ ಜನವರಿ 29ರಿಂದ ಫೆಬ್ರವರಿ 6ರ ವರೆಗೆ ಕಲಬುರ್ಗಿ ಜಿಲ್ಲೆಯ ಸೇಡಮ್‌ನಲ್ಲಿ 7ನೇ ಭಾರತೀಯ ಸಂಸ್ಕೃತಿ ಉತ್ಸವ ಆಯೋಜಿಸಲಾಗಿದೆ. ಒಂಭತ್ತು ದಿನಗಳ ಈ ಉತ್ಸವಕ್ಕೆ ಪೂರಕವಾಗಿ ಈ ಕಲ್ಯಾಣ ಕರ್ನಾಟಕ ವಿಕಾಸ ಪಥ ಸಂಚಾರ ಹಮ್ಮಿಕೊಳ್ಳಲಾಗಿದೆ. ಈ ಉತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, 4 ರಾಜ್ಯಗಳ ರಾಜ್ಯಪಾಲರು, ಇನ್ಫೋಸಿಸ್ ಪ್ರತಿಷ್ಠಾನದ ಸುಧಾಮೂರ್ತಿ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿ 153 ಗಣ್ಯವ್ಯಕ್ತಿಗಳು ಭಾಗಿಯಾಗಲಿದ್ದಾರೆ. ಈ ಉತ್ಸವದಲ್ಲಿ 80 ಸಾವಿರ ಜನ ಸಾಮರ್ಥ್ಯದ ಸಭಾಂಗಣ ಸೇರಿ 5 ಸಾವಿರ ಸಾಮರ್ಥ್ಯದ 4 ಸಭಾಂಗಣಗಳಲ್ಲಿ ಉತ್ಸವ ನಡೆಯಲಿದೆ. 10 ಸಾವಿರಕ್ಕೂ ಅಧಿಕ ಕೊಠಡಿ, ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಕಮ್ಮರಚೇಡು ಕಲ್ಯಾಣಮಠದ ಶ್ರೀ ಕಲ್ಯಾಣ ಸ್ವಾಮಿ ಹಾಗೂ ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಅಲ್ಲಂ ಗುರುಬಸವರಾಜ್, ಎಸ್‌ಜಿಟಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್.ಎನ್. ರುದ್ರಪ್ಪ ಮಾತನಾಡಿದರು.

ಕಲ್ಯಾಣ ಕರ್ನಾಟಕ ವಿಕಾಸ ಅಕಾಡೆಮಿಯ ಜಿಲ್ಲಾ ಸಂಚಾಲಕ ಡಾ. ಜಿ.ಆರ್. ವಸ್ತ್ರದ, ಸಹ ಸಂಚಾಲಕ ಅಡವಿಸ್ವಾಮಿ, ನಗರ ಸಂಚಾಲಕ ವೆಂಕಟೇಶ ಬಡಿಗೇರ, ಬಳ್ಳಾರಿ ಗ್ರಾಮೀಣ ತಾಲೂಕು ಸಂಚಾಲಕ ಜೋಳದರಾಶಿ ಪೊಂಪನಗೌಡ ಉಪಸ್ಥಿತರಿದ್ದರು.

PREV

Recommended Stories

ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಕಡಿಮೆ ಗುಣದ ಔಷಧಿ ಎರಡೇ ದಿನಕ್ಕೇ ಮಾರುಕಟ್ಟೆಯಿಂದ ವಾಪಸ್‌: ಸಚಿವ