ಗದಗದಲ್ಲಿ ಶುರುವಾಗದ ಇಂದಿರಾ ಕ್ಯಾಂಟೀನ್

KannadaprabhaNewsNetwork |  
Published : Jun 19, 2025, 12:35 AM IST
ಇಂದಿರಾ ಕ್ಯಾಂಟೀನ್ ಪೋಟೋ (ಸಾಂಧರ್ಭಿಕ ಚಿತ್ರ) | Kannada Prabha

ಸಾರಾಂಶ

ಬಡವರು ಮತ್ತು ಕಾರ್ಮಿಕರಿಗೆ ಕೈಗೆಟಕುವ ದರದಲ್ಲಿ ಊಟ, ಉಪಾಹಾರ ಒದಗಿಸುವ ಮಹತ್ವಾಕಾಂಕ್ಷಿ ಇಂದಿರಾ ಕ್ಯಾಂಟೀನ್ ಯೋಜನೆಯು ರಾಜ್ಯಾದ್ಯಂತ ಜಾರಿಗೆ ಬಂದು 7 ವರ್ಷಗಳೇ ಕಳೆದಿದ್ದರೂ, ಜಿಲ್ಲಾ ಕೇಂದ್ರವಾದ ಗದಗ ನಗರದಲ್ಲಿ ಮಾತ್ರ ಇಂದಿಗೂ ಈ ಸೌಲಭ್ಯ ಪ್ರಾರಂಭವಾಗಿಲ್ಲ.

ಶಿವಕುಮಾರ ಕುಷ್ಟಗಿಗದಗ: ಬಡವರು ಮತ್ತು ಕಾರ್ಮಿಕರಿಗೆ ಕೈಗೆಟಕುವ ದರದಲ್ಲಿ ಊಟ, ಉಪಾಹಾರ ಒದಗಿಸುವ ಮಹತ್ವಾಕಾಂಕ್ಷಿ ಇಂದಿರಾ ಕ್ಯಾಂಟೀನ್ ಯೋಜನೆಯು ರಾಜ್ಯಾದ್ಯಂತ ಜಾರಿಗೆ ಬಂದು 7 ವರ್ಷಗಳೇ ಕಳೆದಿದ್ದರೂ, ಜಿಲ್ಲಾ ಕೇಂದ್ರವಾದ ಗದಗ ನಗರದಲ್ಲಿ ಮಾತ್ರ ಇಂದಿಗೂ ಈ ಸೌಲಭ್ಯ ಪ್ರಾರಂಭವಾಗಿಲ್ಲ.ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿದ್ದ ಇಂದಿರಾ ಕ್ಯಾಂಟೀನ್‌ಗೆ 2017ರ ಆಗಸ್ಟ್ 16ರಂದು ಬೆಂಗಳೂರಿನಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಿದ್ದರು. ಆದರೆ ಇದುವರೆಗೂ ಅದರ ಪ್ರಾರಂಭದ ಯಾವುದೇ ಸೂಚನೆ ಮಾತ್ರ ಗದಗ ನಗರದಲ್ಲಿ ಕಂಡು ಬರುತ್ತಿಲ್ಲ.ಗದಗಕ್ಕೆ ಅಗತ್ಯ: ಇಂದಿರಾ ಕ್ಯಾಂಟೀನ್ ಯೋಜನೆಯ ಮುಖ್ಯ ಉದ್ದೇಶ ಕೇವಲ ₹ 5ಕ್ಕೆ ಉಪಾಹಾರ ಮತ್ತು ₹10 ಕ್ಕೆ ಊಟ ಒದಗಿಸುವುದು, ಆ ಮೂಲಕ ಬಡವರು, ಕೂಲಿ ಕಾರ್ಮಿಕರು, ದಿನಗೂಲಿ ನೌಕರರು ಹಾಗೂ ಕಡಿಮೆ ಆದಾಯದ ಜನರಿಗೆ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವುದಾಗಿದೆ. ಗದಗ ಜಿಲ್ಲಾ ಕೇಂದ್ರವಾಗಿದ್ದು, ಪ್ರತಿದಿನ ಸಾವಿರಾರು ಜನರು ತಮ್ಮ ಕೆಲಸ ಕಾರ್ಯಗಳಿಗಾಗಿ ನಗರಕ್ಕೆ ಆಗಮಿಸುತ್ತಾರೆ. ಇವರಿಗೆ ಕಡಿಮೆ ದರದಲ್ಲಿ ಗುಣಮಟ್ಟದ ಊಟ ಸಿಗುವುದು ಅತ್ಯಗತ್ಯ. ಹೀಗಿದ್ದರೂ, ಗದಗ ನಗರದಲ್ಲಿ ಈ ಯೋಜನೆಯು ಕಾರ್ಯರೂಪಕ್ಕೆ ಬಾರದಿರುವುದು ಸಾರ್ವಜನಿಕ ವಲಯದಲ್ಲಿ ಅಸಮಾಧಾನ ಮೂಡಿಸಿದೆ.ಆಸಕ್ತಿಯ ಕೊರತೆಯೇ?: ಸಚಿವ, ಗದಗ ಶಾಸಕರಾಗಿರುವ ಎಚ್.ಕೆ. ಪಾಟೀಲ ಅವರು ಈ ಯೋಜನೆಯ ಅನುಷ್ಠಾನಕ್ಕೆ ಏಕೆ ಆಸಕ್ತಿ ತೋರಿಸುತ್ತಿಲ್ಲ ಎಂಬ ಪ್ರಶ್ನೆ ಇದೀಗ ವ್ಯಾಪಕವಾಗಿ ಕೇಳಿಬರುತ್ತಿದೆ. ಕಾಂಗ್ರೆಸ್ ಸರ್ಕಾರವೇ ಈ ಯೋಜನೆಯನ್ನು ಜಾರಿಗೆ ತಂದಿದ್ದರೂ, ಜಿಲ್ಲಾ ಕೇಂದ್ರದಲ್ಲಿಯೇ ಅದರ ಸೌಲಭ್ಯ ಇಲ್ಲದಿರುವುದು ವಿಪರ್ಯಾಸ. ನಗರದ ಬಸ್ ನಿಲ್ದಾಣ, ರೈಲು ನಿಲ್ದಾಣ ಅಥವಾ ಕಾರ್ಮಿಕರು ಹೆಚ್ಚಾಗಿ ಸೇರುವ ಪ್ರದೇಶಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿದ್ದರೆ, ಅದು ನಗರದ ಬಡ ಜನತೆಗೆ ದೊಡ್ಡ ಉಪಕಾರವಾಗುತ್ತದೆ ಎನ್ನುತ್ತಾರೆ ಶ್ರಮಿಕರು.

ಯೋಜನೆಗೆ ಮರುಜೀವ ಸಿಗಲಿ: ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಈಗಲಾದರೂ ಇಂದಿರಾ ಕ್ಯಾಂಟೀನ್ ಯೋಜನೆಗೆ ಮರುಜೀವ ಸಿಗಬೇಕಿದೆ. ಸ್ಥಳೀಯ ಜನಪ್ರತಿನಿಧಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ಬಗ್ಗೆ ಗಮನಹರಿಸಿ, ಗದಗ ನಗರದಲ್ಲಿ ಶೀಘ್ರವಾಗಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕಿದೆ. ಇದು ನಗರದ ಸಾವಿರಾರು ಬಡವರು ಮತ್ತು ಕಾರ್ಮಿಕರಿಗೆ ದೈನಂದಿನ ಜೀವನದಲ್ಲಿ ದೊಡ್ಡ ನೆರವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎನ್ನುತ್ತಾರೆ ಸಾರ್ವಜನಿಕರು.

ಶೀಘ್ರ ಕಾಮಗಾರಿ ಆರಂಭ: ಗದಗ ನಗರದಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪಿಸುವಂತೆ ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವರಿಗೆ, ಸರ್ಕಾರಕ್ಕೆ ಪತ್ರ ಬರೆಯಲಾಗಿತ್ತು. ಈಗಾಗಲೇ ಸಚಿವರ ಸೂಚನೆ ಹಿನ್ನೆಲೆಯಲ್ಲಿ ಗದಗ ನಗರದ ಹಳೆಯ ಬಸ್ ನಿಲ್ದಾಣದ ಆವರಣದ ಉತ್ತರ ಭಾಗದಲ್ಲಿರುವ 3 ಸಾವಿರ ಚದರ ಅಡಿ ವಿಸ್ತೀರ್ಣದ (ಕೆಎಸ್‌ಆರ್‌ಟಿಸಿ) ಜಾಗವನ್ನು ಇಂದಿರಾ ಕ್ಯಾಂಟೀನ್ ಸ್ಥಾಪನೆಗಾಗಿ ಹಸ್ತಾಂತರಿಸುವಂತೆ ನಗರಸಭೆಯ ಅಧಿಕಾರಿಗಳು ಮನವಿ ಮಾಡಿದ್ದಾರೆ. ಶೀಘ್ರವೇ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಗದಗ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ