ಇಂದಿರಾಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಶೀಘ್ರ ಸಾರ್ವಜನಿಕರಿಗೆ ಮುಕ್ತ

KannadaprabhaNewsNetwork |  
Published : Jul 09, 2025, 01:34 AM ISTUpdated : Jul 09, 2025, 08:50 AM IST
Indira Gandhi Institute of Child Health 4 | Kannada Prabha

ಸಾರಾಂಶ

ಮಕ್ಕಳಿಗಾಗಿ ಅಸ್ಥಿಮಜ್ಜೆ ಕಸಿ, ಅಂಗಾಂಗ ಕಸಿ ಶಸ್ತ್ರಚಿಕಿತ್ಸಾ ಘಟಕ ಸೇರಿ ಅತ್ಯಾಧುನಿಕ ಸೌಲಭ್ಯ ಇರುವ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯ (ಐಜಿಐಸಿಎಚ್‌) ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶೀಘ್ರ ಸೇವೆ ಲಭಿಸಲಿದೆ.

ಮಯೂರ್‌ ಹೆಗಡೆ

 ಬೆಂಗಳೂರು :  ಮಕ್ಕಳಿಗಾಗಿ ಅಸ್ಥಿಮಜ್ಜೆ ಕಸಿ, ಅಂಗಾಂಗ ಕಸಿ ಶಸ್ತ್ರಚಿಕಿತ್ಸಾ ಘಟಕ ಸೇರಿ ಅತ್ಯಾಧುನಿಕ ಸೌಲಭ್ಯ ಇರುವ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯ (ಐಜಿಐಸಿಎಚ್‌) ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶೀಘ್ರ ಸೇವೆ ಲಭಿಸಲಿದೆ.

ಪ್ರಸ್ತುತ ಆಸ್ಪತ್ರೆಯ ಹೊರ ರೋಗಿ ವಿಭಾಗದಲ್ಲಿ ರಾಜ್ಯ, ಹೊರರಾಜ್ಯದಿಂದ ಪ್ರತಿದಿನ ಸರಾಸರಿ 500ಕ್ಕೂ ಅಧಿಕ ಮಕ್ಕಳು ತಪಾಸಣೆಗೆ ಒಳಪಡುತ್ತಿದ್ದಾರೆ. ಒಳರೋಗಿಗಳಾಗಿ ಸರಾಸರಿ 80 ಮಕ್ಕಳು ಚಿಕಿತ್ಸೆಗೆ ದಾಖಲಾಗುತ್ತಾರೆ. ಆದರೆ, ಇಲ್ಲಿ ತುರ್ತು ಚಿಕಿತ್ಸಾ ವಿಭಾಗ ಸೇರಿ 450 ರಷ್ಟು ಹಾಸಿಗೆ ಮಾತ್ರ ಲಭ್ಯವಿದೆ. ಕೆಲ ವೇಳೆ ಹಾಸಿಗೆ ಕೊರತೆ ಕಾರಣಕ್ಕೆ ಒಂದೇ ಹಾಸಿಗೆಯಲ್ಲಿ ಎರಡು ಮಕ್ಕಳಿಗೆ ಚಿಕಿತ್ಸೆ ನೀಡಿದ ಉದಾಹರಣೆಗಳೂ ಇವೆ. ಚಿಕಿತ್ಸೆ ವಿಳಂಬವಾದ ದೂರುಗಳೂ ಬಂದಿವೆ.

ಇವೆಲ್ಲದರ ನಡುವೆ ಈಗ ಸೂಪರ್ ಸ್ಪಷಾಲಿಟಿ ಆಸ್ಪತ್ರೆ ತಲೆ ಎತ್ತಿದ್ದು, ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿರೀಕ್ಷೆಯಿದೆ.

ರಾಜ್ಯ ಸರ್ಕಾರ 2019ರಲ್ಲಿ ಸೂಪರ್‌ ಸ್ಪೆಷಾಲಿಟಿ ಬ್ಲಾಕ್ ನಿರ್ಮಾಣಕ್ಕಾಗಿ ಅನುದಾನ ನೀಡಿತ್ತು. 2021ರ ಸೆಪ್ಟೆಂಬರ್‌ನಲ್ಲಿ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿತು. ಆದರೆ, ಕೋವಿಡ್-ಲಾಕ್‌ಡೌನ್‌ನಿಂದಾಗಿ ಕಾಮಗಾರಿ ವಿಳಂಬವಾಯಿತು. ಇದೀಗ ಸುಮಾರು ₹100 ಕೋಟಿ ವೆಚ್ಚದಲ್ಲಿ ಸೂಪರ್‌ಸ್ಪೆಷಾಲಿಟಿ ಬ್ಲಾಕ್‌ನ ಕಾಮಗಾರಿ ಮುಗಿದಿದೆ. ಇನ್ನೊಂದು ತಿಂಗಳಲ್ಲಿ ಉದ್ಘಾಟನೆ ಆಗಲಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದರು.

8 ಮಹಡಿ ಸೂಪರ್ ಸ್ಪೆಷಾಲಿಟಿಯ ಈ ಬ್ಲಾಕ್ 450 ಹಾಸಿಗೆ ಸಾಮರ್ಥ್ಯ ಹೊಂದಿದೆ. 8ನೇ ಮಹಡಿಯಲ್ಲಿ ಅಸ್ಥಿಮಜ್ಜೆ ಕಸಿ (ಬಿಎಂಟಿ) ವಿಭಾಗ, 7ನೇ ಮಹಡಿ ಅಂಗಾಂಗ ಕಸಿ ವಿಭಾಗ ಇರಲಿದೆ. 6ನೇ ಮಹಡಿ ಸೇವಾ ವಲಯವಾಗಿ ಬಳಕೆಯಾದರೆ 5ನೇ ಮಹಡಿಯಲ್ಲಿ 50 ಹಾಸಿಗೆಗಳ ನವಜಾತ ತುರ್ತು ಚಿಕಿತ್ಸಾ ಘಟಕ, 4, 3, 2ನೇ ಮಹಡಿಯಲ್ಲಿ ವಾರ್ಡ್‌ಗಳು ಇರಲಿವೆ. ಇನ್ನು, 1ನೇ ಮಹಡಿಯಲ್ಲಿ ಹೊರ ರೋಗಿಗಳ ಚಿಕಿತ್ಸಾ ವಿಭಾಗ, ಎಂಆರ್‌ಐ, ಸಿಟಿ ಸೇರಿ ಪ್ರಯೋಗಾಲಯ ಪರೀಕ್ಷಾ ವಿಭಾಗ ಇರಲಿದೆ.

ತಳಮಹಡಿ ಪಾರ್ಕಿಂಗ್‌ಗೆ ಬಳಕೆ ಆಗಲಿದೆ ಎಂದು ಆಸ್ಪತ್ರೆ ತಿಳಿಸಿದೆ.

ಮಕ್ಕಳಿಗೆ ಅಸ್ಥಿಮಜ್ಜೆ ಕಸಿ ಘಟಕ:

ವಿಶೇಷವಾಗಿ ಅಸ್ತಿಮಜ್ಜೆ ಕಸಿ ಕೇಂದ್ರ ಸರ್ಕಾರಿ ಸ್ವಾಮ್ಯದ ರಾಜ್ಯದ 2ನೇ ಅಸ್ಥಿಮಜ್ಜೆ ಕಸಿ ಘಟಕ ಎಂಬ ಹೆಗ್ಗಳಿಕೆ ಪಾತ್ರವಾಗಲಿದೆ. ಜತೆಗೆ ಇದು ಮಕ್ಕಳಿಗೆ ಮಾತ್ರ ಸೇವೆ ನೀಡಲಿರುವುದು ವಿಶೇಷ. ಅದರಂತೆ ಅಂಗಾಂಗ ಕಸಿ ಶಸ್ತ್ರಚಿಕಿತ್ಸಾ ಘಟಕವು ಮಕ್ಕಳ ಜೀವ ಉಳಿಸುವಲ್ಲಿ ಹೆಚ್ಚು ನೆರವಾಗುವುದಲ್ಲದೆ ಬಡವರಿಗೆ ಅನುಕೂಲ ಆಗಲಿದೆ.

ಖಾಸಗಿಯಲ್ಲಿ ಇವೆರಡು ಚಿಕಿತ್ಸೆಗೆ ಲಕ್ಷಾಂತರ ರುಪಾಯಿ ಖರ್ಚಾಗುತ್ತದೆ. ಆದರೆ ಸಂಸ್ಥೆಯಲ್ಲಿ ಅತ್ಯಂತ ಕಡಿಮೆ ವೆಚ್ಚದಲ್ಲಿ ಈ ಚಿಕಿತ್ಸೆ ಪಡೆಯಲು ಸಾಧ್ಯವಾಗಲಿದೆ. ಇನ್ನು ಗರ್ಭಾವಸ್ಥೆಯಲ್ಲೇ ಶಿಶುಗಳ ಆರೋಗ್ಯ ಸಮಸ್ಯೆ ಪತ್ತೆ ಮಾಡಿ ಆಗಲೇ ಚಿಕಿತ್ಸೆ ಒದಗಿಸುವ ಫೀಟಲ್‌ ಸೌಲಭ್ಯ, ಪ್ರಯೋಗಾಲಯ ನೂತನ ಕಟ್ಟಡಕ್ಕೆ ಸ್ಥಳಾಂತರ ಆಗಲಿದೆ. 2ನೇ ಹಂತದಲ್ಲಿ ಇಲ್ಲಿ ರೊಬಾಟಿಕ್ ಸೇವೆ ಆರಂಭಿಸುವ ಯೋಜನೆ ಇದೆ ಎಂದು ಸಂಸ್ಥೆ ನಿರ್ದೇಶಕ ಡಾ.ಕೆ.ಎಸ್.ಸಂಜಯ್ ತಿಳಿಸಿದರು.

ಸೂಪರ್ ಸ್ಪೆಷಾಲಿಟಿ ಬ್ಲಾಕ್‌ನ ಕಟ್ಟಡ ಕಾಮಗಾರಿ ಮುಗಿದಿದೆ. ವೈದ್ಯಕೀಯ ಉಪಕರಣ, ಸಿಬ್ಬಂದಿ ನೇಮಕಕ್ಕೆ ಅನುಮತಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇನ್ನೊಂದು ತಿಂಗಳಲ್ಲಿ ಈ ಪ್ರಕ್ರಿಯೆ ಮುಗಿದು ಶೀಘ್ರ ಆಸ್ಪತ್ರೆ ಉದ್ಘಾಟನೆ ಆಗಲಿದೆ.

- ಡಾ.ಕೆ.ಎಸ್. ಸಂಜಯ್, ನಿರ್ದೇಶಕರು, ಐಜಿಐಸಿಎಚ್‌

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು