-ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವ ಪ್ರಿಯಾಂಕ್ ಖರ್ಗೆಗೆ ಕೈಗಾರಿಕಾ ಸಂಸ್ಥೆ (ಕೆಕೆಸಿಸಿಐ)ಯಿಂದ ಮನವಿ ಪತ್ರ
ಕನ್ನಡಪ್ರಭ ವಾರ್ತೆ ಕಲಬುರಗಿ
ಬೆಂಗಳೂರು ಹೊರತುಪಡಿಸಿ ರಾಜ್ಯದ ಐದು ನಗರಗಳನ್ನು ಕೈಗಾರಿಕಾ ಅಭಿವೃದ್ಧಿಗಾಗಿ ಗುರುತಿಸುವ ಯೋಜನೆಯಲ್ಲಿ ಕಲಬುರಗಿ ನಗರವನ್ನು ಕಡ್ಡಾಯವಾಗಿ ಸೇರಿಸಬೇಕು ಎಂದು ಒತ್ತಾಯಿಸಿ, ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಕೆಕೆಸಿಸಿಐ) ಯಿಂದ ಸಿಎಂ ಡಿಕೆ ಶಿವಕುಮಾರ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಪತ್ರ ಸಲ್ಲಿಸಲಾಗಿದೆ.ರಾಜ್ಯದ ವಿವಿಧ ಭಾಗಗಳಲ್ಲಿ ಕೈಗಾರಿಕೆಗಳನ್ನು ಬೆಳೆಸಲು, ಹೂಡಿಕೆದಾರರಿಗೆ ವಿಶೇಷ ಪ್ರೋತ್ಸಾಹ ಹಾಗೂ ಅಗತ್ಯ ಮೂಲಸೌಕರ್ಯ ಒದಗಿಸಲು ಮತ್ತು ಕೈಗಾರಿಕಾ ಅನುಮೋದನೆಗಳನ್ನು ನಿಗದಿತ ಅವಧಿಯಲ್ಲಿ ನೀಡಲು ಬೆಂಗಳೂರು ಹೊರತಾಗಿ ಐದು ನಗರಗಳನ್ನು ಗುರುತಿಸುವಂತೆ ಮುಖ್ಯಮಂತ್ರಿಗಳು ನೀಡಿರುವ ನಿರ್ದೇಶನವನ್ನು ಕೆಕೆಸಿಸಿಐ ಸ್ವಾಗತಿಸಿದೆ.
ಡಾ. ಡಿ. ಎಂ. ನಂಜುಂಡಪ್ಪ ಸಮಿತಿ ವರದಿಯಲ್ಲಿ ಕಲ್ಯಾಣ ಭಾಗದ ತಾಲೂಕುಗಳನ್ನು ಹಿಂದುಳಿದ, ಅತ್ಯಂತ ಹಿಂದುಳಿದ ತಾಲೂಕುಗಳೆಂದು ಗುರುತಿಸಲಾಗಿತ್ತು. ಅದೇ ರೀತಿ, ಪ್ರಾದೇಶಿಕ ಅಸಮತೋಲನದ ಕುರಿತು ಅಧ್ಯಯನ ನಡೆಸಿದ ಡಾ. ಎಂ. ಗೋವಿಂದರಾವ್ ಅವರ ಅಧ್ಯಕ್ಷತೆಯ ಉನ್ನತಾಧಿಕಾರ ಸಮಿತಿ ವರದಿಯಲ್ಲಿಯೂ, ಪ್ರಮುಖ ಅಭಿವೃದ್ಧಿ ಸೂಚ್ಯಂಕಗಳ ಆಧಾರದ ಮೇಲೆ ಜಿಲ್ಲೆ ರಾಜ್ಯದ ಅತ್ಯಂತ ಹಿಂದುಳಿದ ಜಿಲ್ಲೆಗಳಲ್ಲಿ ಒಂದಾಗಿದೆ ಎಂಬುದು ಮತ್ತೊಮ್ಮೆ ಸ್ಪಷ್ಟವಾಗಿದೆ.
ಹಿಂದಿನ ಮತ್ತು ಇತ್ತೀಚಿನ ಸಮಿತಿಗಳ ವರದಿಗಳು ಈ ಭಾಗದಲ್ಲಿನ ಪ್ರಾದೇಶಿಕ ಅಸಮತೋಲನ ಇನ್ನೂ ಸರಿಯಾಗಿಲ್ಲ ಎಂಬುದನ್ನು ಸ್ಪಷ್ಟಪಡಿಸಿವೆ. ಹೀಗಾಗಿ, ಐದು ನಗರಗಳ ಕೈಗಾರಿಕಾ ಅಭಿವೃದ್ಧಿ ಯೋಜನೆಯಲ್ಲಿ ಕಲಬುರಗಿಯನ್ನು ಸೇರಿಸುವುದು ಕೇವಲ ಕೈಗಾರಿಕಾ ಬೇಡಿಕೆಯಾಗಿರದೆ, ಪ್ರಾದೇಶಿಕ ಅಸಮತೋಲನ ಸರಿಪಡಿಸಲು ಕೈಗೊಳ್ಳಬೇಕಾದ ಅತ್ಯಗತ್ಯ ಕ್ರಮವಾಗಿದೆ.
ಈ ಹಿನ್ನೆಲೆಯಲ್ಲಿ, ಪ್ರಸ್ತಾಪಿತ ‘ಎರಡನೇ ಬೆಂಗಳೂರು’ ಪರಿಕಲ್ಪನೆಯಡಿ ಕಲಬುರಗಿಯನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಗಂಭೀರ ಪರಿಗಣಿಸಬೇಕು ಎಂದು ಸಂಸ್ಥೆ ಒತ್ತಾಯಿಸಿದೆ.
ಕಲಬುರಗಿಯನ್ನು ಕೈಗಾರಿಕಾ ಅಭಿವೃದ್ಧಿಗೆ ಆಯ್ಕೆ ಮಾಡಲಾಗುವ ಐದು ನಗರಗಳಲ್ಲಿ ಒಂದಾಗಿ ಅಧಿಕೃತವಾಗಿ ಗುರುತಿಸಿ ಅಧಿಸೂಚನೆ ಹೊರಡಿಸಬೇಕು. ಕಲಬುರಗಿಗಾಗಿ ಸಮಗ್ರ ಕೈಗಾರಿಕಾ ಅಭಿವೃದ್ಧಿ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿ, ಕಲಬುರಗಿ ಹಾಗೂ ಕಲ್ಯಾಣ ಭಾಗದಲ್ಲಿ ಹೂಡಿಕೆ ಮಾಡುವ ಕೈಗಾರಿಕೆಗಳಿಗೆ ವಿಶೇಷ ಪ್ರೋತ್ಸಾಹಕ ಪ್ಯಾಕೇಜ್ ಘೋಷಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಕೈಗಾರಿಕೆಗಳಿಗೆ ಅಗತ್ಯವಿರುವ ವಿದ್ಯುತ್, ನೀರು, ರಸ್ತೆ, ರೈಲು ಮತ್ತು ವಿಮಾನ ಸಂಪರ್ಕವನ್ನು ಬಲಪಡಿಸುವುದರ ಜೊತೆಗೆ, ಶಹಾಬಾದ್ನಲ್ಲಿರುವ ಜಿಇ ಪವರ್ ಇಂಡಿಯಾ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಿ, ಬೃಹತ್ ಎಂಜಿನಿಯರಿಂಗ್, ಏರೋಸ್ಪೇಸ್, ರಕ್ಷಣಾ ಉತ್ಪಾದನೆ ಅಥವಾ ಇತರೆ ಆಧುನಿಕ ಕೈಗಾರಿಕೆಗಳಿಗೆ ಬಳಸಿಕೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಕೆಕೆಸಿಸಿಐ ಒತ್ತಾಯಿಸಿದೆ.
ನಂಜುಂಡಪ್ಪ ಸಮಿತಿ ಹಾಗೂ ಇತ್ತೀಚಿನ ಡಾ. ಎಂ. ಗೋವಿಂದರಾವ್ ಸಮಿತಿ ವರದಿಗಳಲ್ಲಿನ ಅಂಶಗಳನ್ನು ಪರಿಗಣಿಸಿ, ಕಲಬುರಗಿಯನ್ನು ಐದು ನಗರಗಳ ಕೈಗಾರಿಕಾ ಅಭಿವೃದ್ಧಿ ಯೋಜನೆಯಲ್ಲಿ ಸೇರಿಸುವುದರ ಜೊತೆಗೆ ‘ಎರಡನೇ ಬೆಂಗಳೂರು’ ಪರಿಕಲ್ಪನೆಯಡಿಯೂ ಪರಿಗಣಿಸಬೇಕು. ಇದು ದೀರ್ಘಕಾಲದ ಪ್ರಾದೇಶಿಕ ಅಸಮತೋಲನ ಸರಿಪಡಿಸುವ ಐತಿಹಾಸಿಕ ಹೆಜ್ಜೆಯಾಗಲಿದೆ.
ಕಲಬುರಗಿಯ ಸಮಗ್ರ ಅಭಿವೃದ್ಧಿಯಿಂದ ಇಡೀ ಕಲ್ಯಾಣ ಭಾಗಕ್ಕೆ ಅನುಕೂಲವಾಗುವುದರ ಜೊತೆಗೆ, ಸಂವಿಧಾನದ 371(ಜೆ)ನೇ ಕಲಂನ ಆಶಯಕ್ಕೂ ನಿಜವಾದ ಅರ್ಥ ದೊರೆಯಲಿದೆ ಎಂದು ಕೆಕೆಸಿಸಿಐ ಅಧ್ಯಕ್ಷ ಶರಣಬಸಪ್ಪ ಎಂ. ಪಪ್ಪಾ ಹಾಗೂ ಗೌ.ಕಾ ಶಿವರಾಜ ವಿ. ಇಂಗಿನಶೆಟ್ಟಿ ತಿಳಿಸಿದ್ದಾರೆ.ಫೋಟೋ
ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಕೆಕೆಸಿಸಿಐ) ಯಿಂದ ಸಿಎಂ ಡಿಕೆ ಶಿವಕುಮಾರ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಮನವಿ ಪತ್ರ.