ಒಳ ಮೀಸಲಾತಿ ನೀಡದೆ ಸರ್ಕಾರದಿಂದ ಅನ್ಯಾಯ

KannadaprabhaNewsNetwork |  
Published : Aug 02, 2025, 12:15 AM IST
ಕಾಂಗ್ರೆಸ್ ಸರ್ಕಾರದಿಂದ ಮಾದಿಗ ಸಮುದಾಯಕ್ಕೆ ಅನ್ಯಾಯ: ಉಮೇಶ ಕಾರಜೋಳ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಒಳಮೀಸಲಾತಿ ಜಾರಿಗೊಳಿಸುವಂತೆ ಸುಪ್ರೀಂ ಕೋರ್ಟ್ ಸಹ ಅನುಮತಿ ನೀಡಿದೆ. ಆದರೆ ರಾಜ್ಯದಲ್ಲಿರುವ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮಾತ್ರ ಇದಕ್ಕೆ ಬೆಲೆ ನೀಡುತ್ತಿಲ್ಲ. ಈ ಮೂಲಕ ಒಳಮೀಸಲಾತಿ ಕಲ್ಪಿಸದೇ ಮಾದಿಗ ಸಮುದಾಯಕ್ಕೆ ದೊಡ್ಡ ಮಟ್ಟದ ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ಮುಖಂಡ ಉಮೇಶ ಕಾರಜೋಳ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಒಳಮೀಸಲಾತಿ ಜಾರಿಗೊಳಿಸುವಂತೆ ಸುಪ್ರೀಂ ಕೋರ್ಟ್ ಸಹ ಅನುಮತಿ ನೀಡಿದೆ. ಆದರೆ ರಾಜ್ಯದಲ್ಲಿರುವ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮಾತ್ರ ಇದಕ್ಕೆ ಬೆಲೆ ನೀಡುತ್ತಿಲ್ಲ. ಈ ಮೂಲಕ ಒಳಮೀಸಲಾತಿ ಕಲ್ಪಿಸದೇ ಮಾದಿಗ ಸಮುದಾಯಕ್ಕೆ ದೊಡ್ಡ ಮಟ್ಟದ ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ಮುಖಂಡ ಉಮೇಶ ಕಾರಜೋಳ ಹೇಳಿದರು.

ಒಳಮೀಸಲಾತಿ ಜಾರಿಗೊಳಿಸಲು ಸರ್ಕಾರ ಶೀಘ್ರವೇ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಮಾದಿಗ ಸಂಘಟನೆಗಳ ಒಕ್ಕೂಟದಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ತಮ್ಮ ಹಕ್ಕೊತ್ತಾಯ ಮಂಡಿಸಿ ಅವರು ಮಾತನಾಡಿದರು. ಒಳಮೀಸಲಾತಿ ಎನ್ನುವುದು ಸಂವಿಧಾನ ಕರುಣಿಸಿರುವ ಹಕ್ಕು. ಶೋಷಿತ ಸಮುದಾಯಗಳಲ್ಲಿಯೇ ಅತೀ ಹಿಂದುಳಿದಿರುವ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸಲು ಸುಪ್ರೀಂ ಕೋರ್ಟ್ ಕಳೆದ ವರ್ಷ ಇದೇ ದಿನ ಐತಿಹಾಸಿಕ ತೀರ್ಪು ನೀಡಿದೆ. ಆದರೆ, ತೀರ್ಪು ನೀಡಿ ಒಂದು ವರ್ಷ ಕಳೆದರೂ ರಾಜ್ಯ ಕಾಂಗ್ರೆಸ್ ಸರ್ಕಾರ ಮಾದಿಗ ಸಮಾಜದ ಒಳಮೀಸಲಾತಿ ಜಾರಿಗೊಳಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈಗಾಗಲೇ ತೆಲಂಗಾಣ, ಆಂಧ್ರಪ್ರದೇಶ, ಪಂಜಾಬ್ ಮೊದಲಾದ ರಾಜ್ಯಗಳಲ್ಲಿ ಒಳಮೀಸಲಾತಿ ಜಾರಿಯಾಗಿದೆ. ಒಂದೆಡೆ ಅಹಿಂದ ನಾಯಕರು ಎಂದು ತಮ್ಮ ಬೆನ್ನು ತಟ್ಟಿಕೊಳ್ಳುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಒಳಮೀಸಲಾತಿ ಜಾರಿ ಏಕೆ ಮಾಡುತ್ತಿಲ್ಲ?. ಯಾವ ಶಕ್ತಿಗಳ ಒತ್ತಡಕ್ಕೆ ಮಣಿದಿದ್ದಾರೆ ಎಂದು ಕಾರಜೋಳ ಖಾರವಾಗಿ ಪ್ರಶ್ನಿಸಿದರು.

ಈ ಅಧಿವೇಶನದ ಒಳಗಾಗಿ ಒಳ ಮೀಸಲಾತಿಯಯನ್ನು ಜಾರಿಗೊಳಿಸಿ ಮಾದಿಗ ಸಮುದಾಯಕ್ಕೆ ನ್ಯಾಯ ಒದಗಿಸಬೇಕು. ಇಲ್ಲವಾದರೆ ಹೋರಾಟದ ಸ್ವರೂಪವನ್ನು ತೀವ್ರಗೊಳಿಸಲಾಗುವುದು. ಈ ನಿರ್ಧಾರಕ್ಕೆ ಸರ್ಕಾರ ಬದ್ಧವಾಗದೇ ಹೋದರೆ ಅಸಹಕಾರ ಮಾದರಿಯಲ್ಲಿ ಬೃಹತ್ ರೂಪದ ಹೋರಾಟ ಕೈಗೆತ್ತಿಕೊಳ್ಳಬೇಕಾಗುತ್ತದೆ. ಕಾಂಗ್ರೆಸ್ ಶಾಸಕರು ಮತ್ತು ಸಚಿವರಿಗೆ ಸರ್ಕಾರಿ ಕಚೇರಿಗಳಿಗೆ ತೆರಳಲು ಬಿಡುವುದಿಲ್ಲ. ಅವರ ಕಾರ್ಯ ಚಟುವಟಿಕೆಗಳಿಗೆ ಅಡ್ಡಿಪಡಿಸಿ ನಮ್ಮ ಹೋರಾಟವನ್ನು ತೀವ್ರಗೊಳಿಸಲು ಸಹ ನಾವು ಹಿಂದೇಟು ಹಾಕುವುದಿಲ್ಲ ಎಂದು ಎಚ್ಚರಿಸಿದರು.

ಡಾ.ಬಿ.ಆರ್.ಅಂಬೇಡ್ಕರ ವೃತ್ತದಿಂದ ವಿವಿಧ ಪ್ರಮುಖ ಮಾರ್ಗಗಳಲ್ಲಿ ಪ್ರತಿಭಟನಾ ಮೆರವಣಗೆ ಸಂಚರಿಸಿತು. ಈ ವೇಳೆ ರ‍್ಯಾಲಿಯಲ್ಲಿ ಕೆಲವರು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು. ಒಕ್ಕೂಟದ ನೂರಾರು ಮುಖಂಡರು, ಯುವಕರು ಒಳಮೀಸಲಾತಿ ಜಾರಿಗೊಳಸಲೇಬೇಕು ಎಂಬ ಘೋಷಣೆಗಳನ್ನು ಕೂಗುತ್ತಾ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಿ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು.

ಮಾದಿಗ ಸಂಘಟನೆಗೆ ಒಕ್ಕೂಟದ ಜಿಲ್ಲಾಧ್ಯಕ್ಷ ಶ್ರೀಶೈಲ ರತ್ನಾಕರ, ವಿವಿಧ ಸಂಘಟನೆಗಳ ಪ್ರಮುಖರಾದ ಎಸ್.ಎಸ್.ಲೋಟಗೇರಿ, ಭೀಮು ಮೇಲಿನಮನಿ, ಸದಾನಂದ ಗುನ್ನಾಪುರ, ಪ್ರಶಾಂತ ದೊಡ್ಮನಿ, ಸಿದ್ದು ಪೂಜಾರಿ, ಯಲ್ಲು ಇಂಗಳಗಿ, ಅಶೋಕ ಕರೆಕಲ್, ಸಂತೋಷ ತಳಕೇರಿ, ಸಾಯಬಣ್ಣ ಪುರದಾಳ, ಶಿವು ಬಗಲಿ, ಆಕಾಶ ಮನಗೂಳಿ, ಸಾಗರ ಪೂಜಾರಿ, ಪರಸರಾಮ ನಾಟೀಕಾರ, ಸಿದಗೊಂಡ ವಾಲಿಕಾರ, ಶ್ರೀನಾಥ ಬೈರವಾಡಗಿ, ಸುರೇಶ ಗಚ್ಚಿನಮನಿ, ಎಮ್.ಆರ್.ದೊಡಮನಿ, ಸುನೀಲ ಸಂದಿಮನಿ, ಪರಸುರಾಮ ರೋಣಿಹಾಳ, ವಿಠ್ಠಲ ಆಸಂಗಿ, ದತ್ತು ಬಂಡೆನ್ನವರ, ವಿಠ್ಠಲ ನಡುವಿನಕೇರಿ ಮೊದಲಾದವರು ಪಾಲ್ಗೊಂಡಿದ್ದರು.

---

ಕೋಟ್‌

ಮೊದಲ ಸಚಿವ ಸಂಪುಟದಲ್ಲಿಯೇ ಒಳಮೀಸಲಾತಿ ಜಾರಿಗೊಳಿಸುವುದಾಗಿ ಕಾಂಗ್ರೆಸ್ ನಾಯಕರು ಮಾತು ನೀಡಿದ್ದರು. ಪ್ರಣಾಳಿಕೆಯಲ್ಲೂ ಘೋಷಿಸಿದ್ದರು. ಆದರೆ, ಸರ್ಕಾರ ಅಧಿಕಾರಕ್ಕೆ ಬಂದ ನಂತರ ತಮ್ಮ ಮಾತು ತಪ್ಪಿ ಕಾಲಹರಣಕ್ಕಾಗಿ ನ್ಯಾ.ನಾಗಮೋಹನ್‌ದಾಸ್ ಆಯೋಗ ರಚಿಸಿತು. ನಂತರ 40 ದಿನಗಳಲ್ಲಿ ವರದಿ ಪಡೆಯುವುದಾಗಿ ಹೇಳಿತು. ಆದರೆ, ಆರು ತಿಂಗಳು ಉರುಳಿವೆ, ಅತ್ತ ಸುಪ್ರೀಂಕೋರ್ಟ್ ಒಳಮೀಸಲಾತಿ ತೀರ್ಪು ಪ್ರಕಟಿಸಿ ವರ್ಷ ಕಳೆದು ಆದರೂ ನಮ್ಮ ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಾಗಿಲ್ಲ.

ಉಮೇಶ ಕಾರಜೋಳ, ಬಿಜೆಪಿ ಮುಖಂಡ

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ