ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ರಾಜ್ಯಕ್ಕೆ ಅನ್ಯಾಯ ಮಾಡುತ್ತಿರುವ ನರೇಂದ್ರ ಮೋದಿ ಅವರಿಗೆ ಮತ ಹಾಕಬೇಕೇ, ಅಥವಾ ನುಡಿದಂತೆ ನಡೆದು ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿರುವ ಕಾಂಗ್ರೆಸ್ ಪಕ್ಷ ಗೆಲ್ಲಿಸಬೇಕೇ ಎಂಬುದನ್ನು ಮತದಾರರು ಯೋಚಿಸಿ ನಿರ್ಧಾರ ಕೈಗೊಳ್ಳಬೇಕು ಎಂದು ಸಚಿವ ಡಾ.ಎಂ.ಸಿ.ಸುಧಾಕರ್ ಮತದಾರರಲ್ಲಿ ಮನವಿ ಮಾಡಿದರು.ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂ.ಎಸ್.ರಕ್ಷಾರಾಮಯ್ಯ ಬುಧವಾರ ನಾಮಪತ್ರ ಸಲ್ಲಿಸಲು ನಗರದಲ್ಲಿ ಏರ್ಪಡಿಸಿದ್ದ ಬೃಹತ್ ರೋಡ್ ಶೋ ನಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಮ್ಮ ತೆರಿಗೆ ಪಾಲನ್ನು ಕೊಡದೇ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತಳೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರಕ್ಕೆ ಪತ್ರ ಬರೆದು, ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಬರ ಪರಿಹಾರವಾಗಿ ಈವರೆಗೆ ಒಂದು ಪೈಸೆಯನ್ನೂ ಕೊಟ್ಟಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರಾಜ್ಯ ಸರ್ಕಾರದ ಸಾಧನೆಗಳು ಮತ್ತು ಗ್ಯಾರಂಟಿ ಯೋಜನೆಗಳಿಂದಾಗಿರುವ ಪ್ರಯೋಜನಗಳ ಬಗ್ಗೆ ತಿಳಿಸಿದರು. ಈ ಅಂಶಗಳನ್ನೇ ಮತದಾರರ ಮನೆ ಮನೆಗಳಿಗೆ ತಲುಪಿಸುವಂತೆ ಕಾರ್ಯಕರ್ತರು, ಮುಖಂಡರು ಹಾಗೂ ಜನಪ್ರತಿನಿಧಿಗಳಿಗೆ ಸೂಚಿಸಿದರು.ಸಚಿವ ಕೆ.ಎಚ್.ಮುನಿಯಪ್ಪ ಮಾತನಾಡಿ, ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವ ನೀಡಿದ ಭರವಸೆಗಳಂತೆ ಎಲ್ಲಾ ಐದು ಗ್ಯಾರಂಟಿಗಳನ್ನು ನೀಡಿ ನುಡಿದಂತೆ ನಡೆದಿದೆ. ರಾಜ್ಯದ ಏಳುವರೆ ಕೋಟಿ ಜನರಲ್ಲಿ ನಾಲ್ಕುವರೆ ಕೋಟಿ ಜನರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ಬಡ ಮತ್ತು ಮಧ್ಯಮ ವರ್ಗದ ಜನರ ಬದುಕನ್ನು ಹಸನಾಗಿಸಲು ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು. ನಮ್ಮ ಕಾರ್ಯಕ್ರಮಗಳ ಮೂಲಕ ಜನಸಾಮಾನ್ಯರ ಜೇಬಿಗೆ ಹಣ ಹಾಕಿ, ಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದ್ದೇವೆ. ಇದನ್ನು ವಿರೋಧಿಸುವ ಬಿಜೆಪಿಯ ಕಾರ್ಯಕರ್ತರು ಹಾಗೂ ಬೆಂಬಲಿಗರೂ ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿದ್ದಾರೆ ಎಂದರು.
ಶಾಸಕ ಪ್ರದೀಪ್ ಈಶ್ವರ್ ಮಾತನಾಡಿ, ರಕ್ಷಾರಾಮಯ್ಯ ಉತ್ತಮ ಅಭ್ಯರ್ಥಿ, ಆರೋಗ್ಯ ಮತ್ತು ಶಿಕ್ಷಣ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಒತ್ತು ಕೊಡುವ ಕುಟುಂಬದಿಂದ ಬಂದಿದ್ದಾರೆ. ಸಮಾಜಕ್ಕೆ ಉತ್ತಮ ಕೊಡುಗೆ ನೀಡಿದ ಕುಟುಂಬವೂ ಆಗಿದೆ. ಅಭ್ಯರ್ಥಿ ರಕ್ಷಾ ರಾಮಯ್ಯ ಮೂರು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ಭವಿಷ್ಯ ನುಡಿದರು. ರಕ್ಷಾರಾಮಯ್ಯ ಮೂರು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಬೇಕಾದರೆ ಕಾರ್ಯಕರ್ತರು ಕಟ್ಟಾಳುಗಳಾಗಿ, ಪಕ್ಷದ ತತ್ವ, ಸಿದ್ಧಾಂತಗಳಿಗೆ ಬದ್ಧರಾಗಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕೆಂದು ಕರೆ ನೀಡಿದರು.ನಗರದ ವಕ್ಕಲಿಗರ ಕಲ್ಯಾಣ ಮಂಟಪದಿಂದ ಅಂಬೆಡ್ಕರ್ ವೃತ್ತದವರೆಗೆ ಬೃಹತ್ ರೋಡ್ ಶೋ ನಡೆಸಿದರು.
ಶಾಸಕರಾದ ಕೆ.ಎಚ್.ಪುಟ್ಟಸ್ವಾಮಿಗೌಡ, ಶರತ್ ಬಚ್ಚೇಗೌಡ, ಸುಬ್ಬಾರೆಡ್ಡಿ, ನಾಗರಾಜ್,ಎಂಎಲ್ ಸಿಗಳಾದ ಎಂ.ಆರ್.ಸೀತಾರಾಂ, ರವಿ, ಮಾಜಿ ಶಾಸಕರಾದ ಎನ್.ಸಂಪಂಗಿ,ವೆಂಕಟರಮಣಯ್ಯ, ಕೆ.ಪಿ.ಬಚ್ಚೇಗೌಡ,ಎಂ.ಶಿವಾನಂದ್, ಎಸ್.ಎಂ.ಮುನಿಯಪ್ಪ, ಕಾಂಗ್ರೆಸ್ ಮುಖಂಡರಾದ ನಂದಿ.ಎಂ. ಆಂಜಿನಪ್ಪ, ಯಲುವಳ್ಳಿ ರಮೇಶ್, ಕೇಶವರಾಜಣ್ಣ, ಪುರದಗಡ್ಡೆ ಕೃಷ್ಣಪ್ಪ, ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಜಯರಾಂ, ಡಿವಿಆರ್ ರಾಜೇಶ್, ಜಿಲ್ಲಾ ಕಾರ್ಯದರ್ಶಿ ಶ್ರೀನಿವಾಸ್, ಯುವ ಮುಖಂಡರಾದ ಕುಬೇರ್ ಅಚ್ಚು,ವಿನಯ್ ಬಂಗಾರಿ, ಅಲ್ಲು ಅನಿಲ್, ಕುಪೇಂದ್ರ,ಷಾಹಿದ್, ಮತ್ತಿತರ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಇದ್ದರು.ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವೆ, ಮತ ನೀಡಿ: ರಕ್ಷಾ ರಾಮಯ್ಯ:ಅಭ್ಯರ್ಥಿ ಎಂ.ಎಸ್.ರಕ್ಷಾರಾಮಯ್ಯ ಮಾತನಾಡಿ, ಕಾಂಗ್ರೆಸ್ ಹೈಕಮಾಂಡ್ ಈ ಬಾರಿ ಯುವಕರಿಗೆ ಅವಕಾಶ ಕೊಟ್ಟಿದ್ದು, ರಾಜ್ಯದಲ್ಲಿ 9 ಮಂದಿ ಯುವಕರಿಗೆ ಲೋಕಸಭೆಯ ಟಿಕೆಟ್ ನೀಡಿದೆ. ಸ್ಥಳೀಯವಾಗಿ ಯುವ ಕಾಂಗ್ರೆಸ್ ಹಾಗೂ ಎಲ್ಲಾ ಕಾಂಗ್ರೆಸ್ ಮುಖಂಡರಿಂದ ನನಗೆ ಸಾಕಷ್ಟು ಬೆಂಬಲ ಸಿಗುತ್ತಿದೆ. ಕ್ಷೇತ್ರದ ಜನತೆ ಈ ಭಾಗದಲ್ಲಿ ಅಧಿಕ ಮತಗಳನ್ನು ನೀಡಿ ನನಗೆ ಅವಕಾಶ ನೀಡಬೇಕೆಂದು ಮತದಾರರಲ್ಲಿ ಮನವಿ ಮಾಡಿಕೊಂಡರು. ಚಿಕ್ಕಬಳ್ಳಾಪುರ ಕ್ಷೇತ್ರ ಯಾವುದಕ್ಕೂ ಕಡಿಮೆಯಿಲ್ಲಾ. ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಸಾಕಷ್ಟು ಅಭಿವೃದ್ಧಿ ಮಾಡಬೇಕೆಂದು ಸ್ಥಳೀಯ ಸಚಿವರು, ಶಾಸಕರು ಮುಂದಾಗುತ್ತಿದ್ದಾರೆ. ಅದರಂತೆ ಮುಂದೆ ಶ್ರಮವಹಿಸಲಾಗುವುದು. ದೇಶದಲ್ಲಿ ಮತ್ತು ರಾಜ್ಯದಲ್ಲಿ ಶೇ 55 ರಿಂದ 60 ರಷ್ಟು ಯುವಕರಿದ್ದು, ಅವರನ್ನು ನಿರುದ್ಯೋಗ ಸಮಸ್ಯೆ ಕಾಡುತ್ತಿದೆ. ಭಾರತದಲ್ಲಿನ ನಿರುದ್ಯೋಗ ಸಮಸ್ಯೆ ಬಗ್ಗೆ ಆತಂಕ ಮೂಡಿಸುತ್ತಿದೆ. ಕ್ಷೇತ್ರದಲ್ಲಿ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕೈಗಾರಿಕೆಗಳ ಸ್ಥಾಪನೆಗೆ ಒತ್ತು ನೀಡುತ್ತೇನೆ. ಆದ್ಧರಿಂದ ನಮಗೆ ಬರಬೇಕಾದ ಎಲ್ಲವನ್ನೂ ಪಡೆದುಕೊಳ್ಳಬೇಕಾದರೆ ಕಾಂಗ್ರೆಸ್ ಗೆ ಮತ ನೀಡಬೇಕೆಂದು ಮನವಿ ಮಾಡಿಕೊಂಡರು.