ಜಿಲ್ಲಾಡಳಿತಕ್ಕೆ ಕಾಲೋಚಿತವಾಗಿ ವರದಿ ನೀಡಬೇಕು: ಜಿಲ್ಲಾಧಿಕಾರಿ ಜಿ.ಪ್ರಭು
ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆಗಳು, ಶಾಲೆಗಳು, ಅಂಗನವಾಡಿಗಳು, ರಸ್ತೆಗಳು, ಸಮುದಾಯ ಭವನಗಳು ಸೇರಿದಂತೆ ಇತರ ಸಾರ್ವಜನಿಕ ಕಚೇರಿಗಳನ್ನು ನಿರ್ಮಿಸುವ ಸಂಬಂಧ ಭೂ ಮಂಜೂರಾತಿ ಕುರಿತಂತೆ ಜಿಲ್ಲಾಧಿಕಾರಿ ಜಿ.ಪ್ರಭು ಅವರು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರೊಂದಿಗೆ ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ವೇಳೆ ಜಿಲ್ಲಾಧಿಕಾರಿ ಜಿ.ಪ್ರಭು ಮಾತನಾಡಿ, ಸಾರ್ವಜನಿಕ ಕಚೇರಿಗಳನ್ನು ನಿರ್ಮಿಸಲು ಅಗತ್ಯವಿರುವ ಭೂಮಿಯನ್ನು ಮಂಜೂರು ಮಾಡಲು ಸಂಬಂಧಪಟ್ಟ ಇಲಾಖೆಗೆ ಹಸ್ತಾಂತರಿಸಲು ಜಿಲ್ಲಾಡಳಿತ ಕ್ರಮವಹಿಸಲಿದೆ. ಯಾವ ಉದ್ದೇಶಕ್ಕೆ ಭೂ ಮಂಜೂರಾತಿ ಆಗಿರುತ್ತದೋ ಆ ಉದ್ದೇಶದ ರೀತ್ಯ ಭೂ ಮಂಜೂರಾತಿ ಆದ ಮೂರು ತಿಂಗಳ ಒಳಗಾಗಿ ಪ್ರಾರಂಭಿಕ ಕಾಮಗಾರಿ ಕ್ರಮಗಳನ್ನು ತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ಸಂಬಂಧಪಟ್ಟ ಭೂ ಮಂಜೂರಾತಿಯನ್ನು ಹಿಂಪಡೆಯಲು ಕ್ರಮವಹಿಸಲಾಗುತ್ತದೆ.ಈ ನಿಟ್ಟಿನಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ನಿಗಾ ವಹಿಸಿ ಜಿಲ್ಲಾಡಳಿತಕ್ಕೆ ಕಾಲೋಚಿತವಾಗಿ ವರದಿ ನೀಡಬೇಕು. ಮುಂದಿನ ಒಂದು ವಾರದ ಒಳಗಾಗಿ ಬಾಗೇಪಲ್ಲಿ ವಿಧಾನಸಭಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 17 ಆಯುಷ್ಮಾನ್ ಆಸ್ಪತ್ರೆಗಳನ್ನು ನಿರ್ಮಿಸಲು ಆಯಕಟ್ಟಿನ ಜನಸಂದಣಿ ಕೇಂದ್ರಿತ ಪ್ರದೇಶಗಳಲ್ಲಿ 60x40 ನಿವೇಶನಗಳನ್ನು ಗುರ್ತಿಸಿ ಮಂಜೂರು ಮಾಡಲು ಆಗತ್ಯ ಕ್ರಮ ಕೈಗೊಳ್ಳಬೇಕು. ಅದೇ ರೀತಿ ಜಿಲ್ಲೆಯ ಇತರ ತಾಲೂಕುಗಳಲ್ಲೂ ಜಾಗ ಗುರುತಿಸಲು ಮುಂದಾಗುವಂತೆ ಸೂಚನೆ ನೀಡಿದರು.ನಿವೇಶನ ಹಂಚಿಕೆ, ಕಂದಾಯ ಗ್ರಾಮ ಅನುಷ್ಠಾನ, ರಸ್ತೆ ನಿರ್ಮಾಣ ಸೇರಿದಂತೆ ಬಾಗೇಪಲ್ಲಿ ವಿಧಾನಸಭಾ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಶಾಸಕರು ನೀಡಿರುವ ಪಟ್ಟಿಯಲ್ಲಿನ ಎಲ್ಲಾ ವಿಷಯಗಳನ್ನು ಕುಲಂಕಷವಾಗಿ ಪರಿಶೀಲಿಸಿ ಕಾನೂನು ರೀತ್ಯ ಅನುಷ್ಠಾನಗೊಳಿಸಲಾಗುವುದು ಎಂದು ಭರವಸೆ ನೀಡಿದರು.ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮಾತನಾಡಿ, ಬಾಗೇಪಲ್ಲಿ, ಗುಡಿಬಂಡೆ ಮತ್ತು ಚೇಳೂರು ತಾಲೂಕುಗಳ ವ್ಯಾಪ್ತಿಯಲ್ಲಿ ಎತ್ತಿನಹೊಳೆ ಯೋಜನೆಯಡಿ ಲಭ್ಯವಾಗುವ ಕುಡಿಯುವ ನೀರನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಪೂರ್ವ ಸಿದ್ಧತಾ ಕಾಮಗಾರಿಗಳನ್ನು ಸಮರ್ಪಕ ನಿರ್ವಹಿಸಲು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು. ಬಾಗೇಪಲ್ಲಿ ವಿಧಾನಸಭಾ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಹಾಗೂ ಸಾರ್ವಜನಿಕ ಉದ್ದೇಶದ ಕಚೇರಿಗಳ ನಿರ್ಮಾಣಕ್ಕೆ ಭೂ ಮಂಜೂರಾತಿಗೆ ಸಂಬಂಧಪಟ್ಟಂತೆ ಹಲವು ಕಾರ್ಯಗಳ ಕುರಿತು ಪಟ್ಟಿಯನ್ನು ಜಿಲ್ಲಾಧಿಕಾರಿಗಳಿಗೆ ನೀಡಿ ಅಗತ್ಯ ಕ್ರಮವಹಿಸಲು ತಿಳಿಸಿದರು.ಈ ವೇಳೆ ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್, ಉಪವಿಭಾಗಾಧಿಕಾರಿ ಡಿ.ಎಚ್. ಅಶ್ವಿನ್ ಸೇರಿದಂತೆ ತಹಸೀಲ್ದಾರರು, ತಾಪಂ ಇಒ, ಸ್ಥಳೀಯಾಡಳಿತ ಸಂಸ್ಥೆಗಳ ಮುಖ್ಯಾಧಿಕಾರಿಗಳು ಇದ್ದರು. ಸಿಕೆಬಿ-6 ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಬಾಗೇಪಲ್ಲಿ ವಿಧಾನಸಭಾ ವ್ಯಾಪ್ತಿಯ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಪ್ರಭು ಮಾತನಾಡಿದರು