ಮೊಗವೀರ ಕುಲಗುರು ಮಾಧವಮಂಗಲ ಪೂಜಾರ್‍ಯರ ಪುತ್ಥಳಿ ಸ್ಥಾಪನೆ

KannadaprabhaNewsNetwork |  
Published : Mar 01, 2026, 03:15 AM IST
27ಶಂಕರ್ | Kannada Prabha

ಸಾರಾಂಶ

ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್‍ಯರ ಕಂಚಿನ ಪ್ರತಿಮೆಯನ್ನು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳ ಆವರಣದಲ್ಲಿ ಸ್ಥಾಪಿಸಲುದ್ದೇಶಿಸಲಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ಮಾ.1ರಂದು ಸಾಮೂಹಿಕ ಗುರು ಪಾದಕಾಣಿಕೆ ಸಮರ್ಪಣೆ, ಬೃಹತ್ ಸಮಾವೇಶ ಹಾಗೂ ಬೈಕ್ ರ್‍ಯಾಲಿ ಆಯೋಜಿಸಲಾಗಿದೆ ಎಂದು ದೇವಳದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಡಾ. ಜಿ. ಶಂಕರ್ ಹೇಳಿದರು.

ಕಾಪು: ಒಂದು ಸಾವಿರ ವರ್ಷಗಳಿಗೂ ಅಧಿಕ ಇತಿಹಾಸವಿರುವ ಮೊಗವೀರ ಸಮಾಜದ ಗುರು ಪರಂಪರೆಯ 9ನೇ ಹಾಗೂ ಕೊನೆಯ ಗುರುಗಳಾದ ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್‍ಯರ ಕಂಚಿನ ಪ್ರತಿಮೆಯನ್ನು ಮೊಗವೀರ ಸಮಾಜದ ಶ್ರದ್ಧಾ ಕೇಂದ್ರವಾದ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಳ ಆವರಣದಲ್ಲಿ ಸುಮಾರು 3 ಕೋಟಿ ರು. ವೆಚ್ಚದಲ್ಲಿ ಸ್ಥಾಪಿಸಲುದ್ದೇಶಿಸಲಾಗಿದೆ.

ಇದಕ್ಕೆ ಪೂರ್ವಭಾವಿಯಾಗಿ ಮಾ.1ರಂದು ಸಾಮೂಹಿಕ ಗುರು ಪಾದಕಾಣಿಕೆ ಸಮರ್ಪಣೆ, ಬೃಹತ್ ಸಮಾವೇಶ ಹಾಗೂ ಬೈಕ್ ರ್‍ಯಾಲಿ ಆಯೋಜಿಸಲಾಗಿದೆ ಎಂದು ದೇವಳದ ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ, ಕಾರ್‍ಯಕ್ರಮದ ರೂವಾರಿ ಹಾಗೂ ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್ ಹೇಳಿದರು.

ಶುಕ್ರವಾರ ದೇವಳದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಉಚ್ಚಿಲ ಶ್ರೀಕ್ಷೇತ್ರದ ಜೀರ್ಣೋದ್ಧಾರ ಸಂದರ್ಭ ಅಷ್ಟಮಂಗಲ ಪ್ರಶ್ನೆಯಲ್ಲಿ ಕಂಡುಬಂದಂತೆ ಶ್ರೀ ಮಾಧವ ಮಂಗಲ ಪೂಜಾರ್ಯರ ಪುತ್ಥಳಿ ಸ್ಥಾಪಿಸಲಾಗುತ್ತಿದೆ. ಸಮಾಜ ಬಾಂಧವರ ಸಹಕಾರದಿಂದ ನಿರ್ಮಿಸುವ ಪುತ್ಥಳಿ ಪ್ರತಿಷ್ಠಾಪನೆ ಸಮಾಜದ ಏಕತೆ, ಸ್ವಾಭಿಮಾನ ಹಾಗೂ ಗುರುಭಕ್ತಿಯ ಸಂಕೇತವಾಗಲಿದೆ ಎಂದರು.

ಈ ಪುಣ್ಯ ಕಾರ್ಯದಲ್ಲಿ ಮೊಗವೀರ ಸಮಾಜ ಬಾಂಧವರು ಶಕ್ತ್ಯಾನುಸಾರ ಕಾಣಿಕೆ ನೀಡುವ ಉದ್ದೇಶದಿಂದ ಸಾಮೂಹಿಕ ಗುರು ಪಾದಕಾಣಿಕೆ ಸಮರ್ಪಣೆ ಕಾರ್ಯಕ್ರಮ ಮಾ. 1ರಂದು ಬೆಳಗ್ಗೆ 9.30ರಿಂದ ಉಚ್ಚಿಲ ಶ್ರೀಮತಿ ಶಾಲಿನಿ ಡಾ. ಜಿ. ಶಂಕರ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. 10.30ರಿಂದ ಸಭಾ ಕಾರ್‍ಯಕ್ರಮ ನಡೆಯಲಿದೆ. ದೇವಸ್ಥಾನದ ಮುಂಭಾಗದಲ್ಲಿ ಗುರುಗಳ ಪುತ್ಥಳಿ ನಿರ್ಮಿಸಲುದ್ದೇಶಿಸಿದ್ದು, ಗುರುಗಳ ಸ್ವರ್ಣಲೇಪಿತ ಪಾದುಕೆಗಳನ್ನಿಡಲು ಉದ್ದೇಶಿಸಲಾಗಿದೆ. ಅದೇ ಜಾಗದಲ್ಲಿ ಗುರು ಪಾದಕಾಣಿಕೆ ಸಮರ್ಪಿಸಲು ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.

ಕೇರಳದ ಉಪ್ಪಳದಿಂದ ಬೈಂದೂರು ತಾಲೂಕಿನ ಶೀರೂರುವರೆಗಿನ ಒಟ್ಟು 336 ಮೊಗವೀರ ಗ್ರಾಮಸಭೆ ಹಾಗೂ ಕೂಡುಕಟ್ಟು ಸೇರಿದಂತೆ ದೇಶ ವಿದೇಶಗಳಲ್ಲಿರುವ ಮೊಗವೀರ ಸಂಘಟನೆಗಳ ಸುಮಾರು 10 ಸಾವಿರಕ್ಕಿಂತಲೂ ಅಧಿಕ ಸಂಖ್ಯೆಯಲ್ಲಿ ಸಮಾಜ ಭಾಂಧವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಬೆಳಗ್ಗೆ 9.30ಕ್ಕೆ ಮೊಗವೀರ ಸಮಾಜದ ಯುವಕರಿಂದ ದ್ವಿಚಕ್ರ ವಾಹನ ರ್‍ಯಾಲಿಯನ್ನು ಆಯೋಜಿಸಲಾಗಿದ್ದು, ರ್‍ಯಾಲಿಯು ಉತ್ತರದಿಂದ ಪಾಂಗಾಳ ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನದಿಂದ ಹಾಗೂ ದಕ್ಷಿಣದಿಂದ ಹೆಜಮಾಡಿ ಟೋಲ್ ಗೇಟ್‌ನಿಂದ ಆರಂಭಗೊಂಡು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ತಲುಪಲಿದೆ. ಸುಮಾರು 2 ಸಾವಿರ ದ್ವಿಚಕ್ರ ವಾಹನಗಳು ಭಾಗವಹಿಸುವ ನಿರೀಕ್ಷೆ ಇದ್ದು ಶಿಸ್ತುಬದ್ಧವಾಗಿ ಮತ್ತು ಸಂಚಾರ ನಿಯಮ ಪಾಲಿಸಿ ವಾಹನ ಜಾಥಾ ನಡೆಸಲಾಗುವುದು ಎಂದರು.

ಸಮಾರಂಭದಲ್ಲಿ 500ಕ್ಕಿಂತ ಅಧಿಕ ಯುವಕರಿಂದ ಅಂಗಾಂಗ ದಾನ ನೋಂದಣಿ ಆಯೋಜಿಸಲಾಗಿದ್ದು, ಮುಂದಿನ ದಿನಗಳಲ್ಲಿ ಬೃಹತ್ ರಕ್ತದಾನ ಶಿಬಿರದ ಆಯೋಜಿಸಲಾಗುವುದು ಎಂದು ಡಾ.ಜಿ. ಶಂಕರ್ ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ದ.ಕ. ಮೊಗವೀರ ಮಹಾಜನ ಸಂಘ ಅಧ್ಯಕ್ಷ ಜಯ ಸಿ. ಕೋಟ್ಯಾನ್, ಉಪಾಧ್ಯಕ್ಷ ಮೋಹನ ಬೆಂಗ್ರೆ, ಉಚ್ಚಿಲ ಕ್ಷೇತ್ರಾಧ್ಯಕ್ಷ ಗಿರಿಧರ್ ಸುವರ್ಣ, ಪುತ್ಥಳಿ ನಿರ್ಮಾಣ ಸಮಿತಿ ಕಾರ್‍ಯಾಧ್ಯಕ್ಷ ಮನೋಜ್ ಸಾಲ್ಯಾನ್, ಮೊಗವೀರ ಮಹಾಜನ ಸಂಘ ಪ್ರಧಾನ ಕಾರ್‍ಯದರ್ಶಿ ಶರಣ್ ಕುಮಾರ್ ಮಟ್ಟು ಮೊದಲಾದವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಂಸ್ಕೃತಿಕ ಸಂಘಟನೆಗೆ ಮತ್ತೊಂದು ಹೆಸರು ಸುಮನಸಾ: ಡಾ. ತಲ್ಲೂರು
ಬ್ರಹ್ಮರ ಕೂಟ್ಲು ಟೋಲ್ ವಿರುದ್ಧ 3ರಂದು ಬೃಹತ್ ಪ್ರತಿಭಟನೆ