ಹೊಸಪೇಟೆ: ಮೇ ಅಂತ್ಯದೊಳಗೆ ತುಂಗಭದ್ರಾ ಜಲಾಶಯದ ಎಲ್ಲಾ 33 ನೂತನ ಕ್ರಸ್ಟ್ ಗೇಟ್ಗಳ ಅಳವಡಿಕೆ ಕಾಮಗಾರಿ ಪೂರ್ಣಗೊಳ್ಳುವ ಭರವಸೆ ಇದೆ. ಕಾಮಗಾರಿಯು ನಿರೀಕ್ಷಿತ ಸಮಯಕ್ಕಿಂತ ವೇಗವಾಗಿ ಸಾಗುತ್ತಿದೆ ಎಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಹೇಳಿದರು.
ಈಗಾಗಲೇ ತುಂಗಭದ್ರಾ ಜಲಾಶಯದ18 ನೂತನ ಕ್ರಸ್ಟ್ ಗೇಟ್ಗಳ ಅಳವಡಿಕೆ ಕಾರ್ಯ ಪೂರ್ಣಗೊಂಡಿದ್ದು, 5 ಕ್ರಸ್ಟ್ ಗೇಟ್ಗಳ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದೆ. ಮಾರ್ಚ್ ಅಂತ್ಯದ ವೇಳೆಗೆ ಒಟ್ಟು 23 ಗೇಟ್ಗಳ ಕೆಲಸ ಮುಗಿಯುವ ನಿರೀಕ್ಷೆಯಿದೆ. ಎಕ್ಸ್ಪರ್ಟ್ ಟೀಮ್ ಮತ್ತು ಚೀಫ್ ಎಂಜಿನಿಯರ್ಗಳ ಪ್ರಕಾರ, ಗೇಟ್ ಬದಲಾವಣೆಯ ಸಮಯದಲ್ಲಿ ಹಳೆಯ ಅಣೆಕಟ್ಟಿನ ರಚನೆಗೆ ಯಾವುದೇ ತೊಂದರೆಯಾಗಿಲ್ಲ. ಏಪ್ರಿಲ್ ತಿಂಗಳಿನಲ್ಲಿ ಉಳಿದ 10 ಗೇಟ್ಗಳನ್ನು ಅಳವಡಿಸಿ, ಮೇ ಅಂತ್ಯದೊಳಗೆ ಎಲ್ಲಾ 33 ನೂತನ ಕ್ರಸ್ಟ್ ಗೇಟ್ಗಳ ಅಳವಡಿಕೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಅವರು ಹೇಳಿದರು.
ಜಲಾಶಯದ ಗೇಟ್ಗಳಿಗೆ ನೂತನ ಚೈನ್ ಅಳವಡಿಕೆಯ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಚಿವರು, ಚೈನ್ಗಳಿಗಾಗಿ ₹5.6 ಕೋಟಿ ವೆಚ್ಚದಲ್ಲಿ ಟೆಂಡರ್ ಕರೆಯಲಾಗಿದ್ದು. ಪ್ರತಿ ಗೇಟ್ಗೆ ಎರಡು ಚೈನಿನಂತೆ 33 ಗೇಟ್ಗಳಿಗೆ 66 ಚೈನ್ ಅಳವಡಿಸಲಾಗುವುದು. ಜಲಾಶಯದ ಎಲ್ಲ 33 ನೂತನ ಗೇಟ್ ಅಳವಡಿಕೆ ನಂತರ ಜಲಾಶಯದ ಗೇಟ್ಗಳಿಗೆ ಚೈನ್ ಅಳವಡಿಕೆ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದರು.ತುಂಗಭದ್ರಾ ಜಲಾಶಯದ ಗೇಟ್ ಅಳವಡಿಕೆಗೆ ₹ 48 ಕೋಟಿ ಟೆಂಡರ್ ಕರೆಯಲಾಗಿದ್ದು, ಇದುವರೆಗೆ ₹35 ಕೋಟಿ ಹಣ ವೆಚ್ಚ ಮಾಡಲಾಗಿದೆ ಎಂದರು.
ಈ ಬಗ್ಗೆ ನಮ್ಮ ರಾಜ್ಯದ ವಿವಿಧ ಚುನಾಯಿತ ಪ್ರತಿನಿಧಿಗಳ ನಿಯೋಗವು ನವದೆಹಲಿಯಲ್ಲಿ ಜಲಶಕ್ತಿ ಸಚಿವಾಲಯದ ಅಧಿಕಾರಿಗಳು ಮತ್ತು ವಿವಿಧ ರಾಜ್ಯಗಳ ಸಂಸದರೊಂದಿಗೆ ಮಹತ್ವದ ಚರ್ಚೆ ನಡೆಸಲಾಗಿದೆ. ಕೇಂದ್ರ ಸಚಿವರು ಮತ್ತು ಅಧಿಕಾರಿಗಳು ಕರ್ನಾಟಕದ ನೀರಾವರಿ ಯೋಜನೆಗಳ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಚುನಾವಣಾ ನೀತಿ ಸಂಹಿತೆಯ ಪ್ರಕ್ರಿಯೆಗಳ ನಂತರ ಮತ್ತೊಂದು ಸುತ್ತಿನ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಅಧ್ಯಕ್ಷ ಹಾಗೂ ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ, ಕೊಪ್ಪಳ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ್, ಕೊಪ್ಪಳ ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಆರ್.ಹೇಮಂತ್ ಕುಮಾರ್, ಟಿಬಿ ಬೋರ್ಡ್ ಹಾಗೂ ಕೆ.ಎನ್.ಎನ್.ಎಲ್. ಅಧಿಕಾರಿಗಳಾದ ಮುಖ್ಯ ಇಂಜಿನಿಯರ್ ಶ್ರೀನಿವಾಸ ಮಲ್ಲಿಗಿವಾಡ, ಎಇಇ ಧರ್ಮರಾಜ್ ಹಾಗೂ ಜ್ಞಾನೇಶ್ವರ, ಸೆಕ್ಷನ್ ಅಧಿಕಾರಿಗಳಾದ ಜಿ. ಕಿರಣ, ಪಂಪಾಪತಿ ಡಿ.ಕೆ. ಮತ್ತು ಹುಲಿರಾಜ್ ಸೇರಿದಂತೆ ಇತರೆ ಜನಪ್ರತಿನಿಧಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.