ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಿಪಂ ನೂತನ ಸಭಾ ಭವನದಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿವಿಧ ಕಾಮಗಾರಿಗಳು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಕ್ರಮವಹಿಸಬೇಕು. ಫಲಾನುಭವಿಗಳ ಆಯ್ಕೆಯಿದ್ದಲ್ಲಿ ಶೀಘ್ರವಾಗಿ ಅಂತಿಮ ಪಟ್ಟಿ ತಯಾರಿಸಿ ಫಲಾನುಭವಿಗಳು ಯೋಜನೆ ಲಾಭ ಪಡೆಯುವಂತೆ ಮಾಡಬೇಕು. ಇನ್ನು ಕೆಲವು ಟೆಂಡರ್ ಪ್ರಕ್ರಿಯೆ ಹಂತದಲ್ಲಿದ್ದರೆ, ಇನ್ನು ಕೆಲವು ಕ್ರೀಯಾಯೋಜನೆತಯಾರಿಸಲು ಬಾಕಿ ಉಳಿದಿವೆ. ಇವೆಲ್ಲವುಗಳ ಕಾರ್ಯ ಬೇಗನೆ ಪೂರ್ಣಗೊಂಡು ಯೋಜನೆಗಳು ಸಫಲಗೊಳ್ಳುವಂತೆ ಮಾಡಬೇಕೆಂದು ಸೂಚನೆ ನೀಡಿದರು.
ಜಿಲ್ಲಾ, ರಾಜ್ಯ ಹಾಗೂ ಕೇಂದ್ರ ವಲಯದಡಿ ಕೃಷಿ ಇಲಾಖೆಗೆ ಬಿಡುಗಡೆಯಾದ ₹76.11 ಕೋಟಿ ಪೈಕಿ ₹59.83 ಕೋಟಿ ಖರ್ಚು ಮಾಡುವ ಮೂಲಕ ಶೇ.78ರಷ್ಟು, ತೋಟಗಾರಿಕೆ ಶೇ.91ರಷ್ಟು, ಅರಣ್ಯ ಇಲಾಖೆ ಶೇ.100ರಷ್ಟು, ರೆಷ್ಮೆ ಇಲಾಖೆ ಶೇ.69ರಷ್ಟು ಪ್ರಗತಿ ಸಾಧಿಸಿವೆ. ನರೇಗಾ ಯೋಜನೆಯಡಿ ಮಾನವ ದಿನಗಳ ಸೃಜನೆಯಲ್ಲಿ ಶೇ.86ರಷ್ಟು ಪ್ರಗತಿ ಸಾಧಿಸಿದ್ದು, ಮೂರು ತಿಂಗಳಲ್ಲಿ ಸಂಪೂರ್ಣ ಅನುದಾನ ಖರ್ಚು ಮಾಡಬೇಕೆಂದು ಸೂಚಿಸಿದರು.ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಕೈಗೊಂಡ ಕಾಮಗಾರಿಗಳು ತುರ್ತಾಗಿ ಪೂರ್ಣಗೊಳಿಸಬೇಕು. ಕೆಲವೊಂದು ಕಡೆಗಳಲ್ಲಿ ಓವರ್ ನೀರಿನ ಟ್ಯಾಂಕ್ ನಿರ್ಮಿಸಲು ಅರಣ್ಯಇಲಾಖೆಯಿಂದ ಎನ್.ಓ.ಸಿ ವಿಳಂಬದಿಂದ ಕಾಮಗಾರಿಯಲ್ಲಿ ವಿಳಂಬವಾಗಿರುವುದಾಗಿ ಸಭೆಗೆ ತಿಳಿಸಿದಾಗ ಸಂಬಂಧಿಸಿದ ಉಪ ಅರಣ್ಯ ಸಂರಕ್ಷಣಾಧಿಕಾರಿ ರೂಪಾ ಈ ಬಗ್ಗೆ ಮೇಲಾಧಿಕಾರಿಗಳ ಮೂಲಕ ಬೇಗನೆ ಎನ್.ಓ.ಸಿ ನೀಡಲು ಕ್ರಮವಹಿಸಲು ಸೂಚಿಸಿದರು. ಆರೋಗ್ಯಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ನಮ್ಮ ಕ್ಲಿನಿಕ್ನಲ್ಲಿ ವೈದ್ಯಾಧಿಕಾರಿಗಳ ಕೊರತೆಯಿದ್ದು ಭರ್ತಿಗೆ ಕ್ರಮಕೈಗೊಳ್ಳಲು ತಿಳಿಸಿದರು.
ವಿವಿಧ ನಿಗಮಗಳಲ್ಲಿರುವ ವಿವಿಧ ಯೋಜನೆಗಳ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಿ ಅನುಮೋದನೆ ಕಳುಹಿಸುವ ಕೆಲಸವಾಗಬೇಕು. ಗಂಗಾ ಕಲ್ಯಾಣಯೊಜನೆಯಡಿ ವಿದ್ಯುದೀಕರಣಕ್ಕೆ 383 ಪೈಕಿ 313 ಪ್ರಗತಿ ಸಾಧಿಸಿದ್ದು, ಬಾಕಿ ವಿದ್ಯುದೀಕರಣಕ್ಕೆ ಕ್ರಮಕೈಗೊಳ್ಳಲು ಸೂಚಿಸಿದರು. ನಿಗದಿತ ವೇಳೆಯಲ್ಲಿ ಹಾಲಿನ ಪುಡಿ ಶಾಲೆಗಳಿಗೆ ವಿತರಣೆಯಾಗದ ಕುರಿತು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ವಿವೇಕಾನಂದ ಸಭೆಗೆ ತಿಳಿಸಿದಾಗ ಸಂಬಂಧಿಸಿದ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧಿಕಾರಿಗಳಿಗೆ ಯಾವುದೇ ಸಬೂಬು ಹೇಳದೇ ನಿಗಿದಿತ ಅವಧಿಯಲ್ಲಿ ಹಾಲಿನ ಪುಡಿ ವಿತರಣೆಗೆ ಕ್ರಮವಹಿಸಲು ಸೂಚಿಸಿದರು. ಜಿಲ್ಲಾ ಮಟ್ಟದ ಇತರೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎನ್.ವೈ.ಬಸರಿಗಿಡದ, ಮುಖ್ಯಯೋಜನಾಧಿಕಾರಿ ಪುನಿತ್ ಆರ್, ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮೇಶ್ವರ ಉಕ್ಕಲಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.