ಪಂಚ ಗ್ಯಾರಂಟಿ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಸೂಚನೆ

KannadaprabhaNewsNetwork |  
Published : Jul 02, 2026, 02:15 AM IST
ಹಾವೇರಿ ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಭೆ ಅಧ್ಯಕ್ಷತೆ ವಹಿಸಿ ಎಸ್.ಆರ್. ಪಾಟೀಲ ಮಾತನಾಡಿದರು. | Kannada Prabha

ಸಾರಾಂಶ

ಹಾವೇರಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಭೆ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಅಧ್ಯಕ್ಷತೆಯಲ್ಲಿ ನಡೆಯಿತು.

ಹಾವೇರಿ: ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಗೊಳಿಸಬೇಕು. ಗೃಹಲಕ್ಷ್ಮಿ ಯೋಜನೆ ಹಣವು, ಮರಣ ಹೊಂದಿದವರ ಹಾಗೂ ಅನರ್ಹ ಫಲಾನುಭವಿಗಳಿಗೆ ಜಮೆಯಾಗುತ್ತಿರುವ ಕುರಿತು ದೂರುಗಳಿವೆ. ಈ ಕುರಿತು ಪರಿಶೀಲನೆ ನಡೆಸಬೇಕು ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಸೂಚನೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯೋಜನೆಗಳ ಆರಂಭದಲ್ಲಿ ಸಣ್ಣಪುಟ್ಟ ನ್ಯೂನತೆಗಳು ಸಾಮಾನ್ಯ. ಜಿಲ್ಲೆಯಲ್ಲಿ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ ಹಾಗೂ ಯುವನಿಧಿ ಯೋಜನೆಗಳ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ದೊರೆಯುವ ನಿಟ್ಟಿನಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಹೇಳಿದರು.

ಮುಖ್ಯಮಂತ್ರಿಗಳು ಪಂಚ ಗ್ಯಾರಂಟಿಗಳ ಜತೆಗೆ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ಸಹ ಘೋಷಣೆ ಮಾಡಿದ್ದಾರೆ. ಈ ಎಲ್ಲ ಯೋಜನೆಗಳ ಸೌಲಭ್ಯಗಳು ನಿರ್ಗತಿಕರಿಗೆ ಹಾಗೂ ಕೆಳಹಂತದ ಜನರಿಗೆ ತಲುಪಬೇಕು ಎನ್ನುವುದು ಸರ್ಕಾರದ ಉದ್ದೇಶವಾಗಿದೆ. ಪಂಚ ಗ್ಯಾರಂಟಿ ಸೌಲಭ್ಯ ಪಡೆದ ಫಲಾನುಭವಿಗಳ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಪ್ರಗತಿ ಕುರಿತು ತಿಳಿದುಕೊಳ್ಳಬೇಕು. ಅವರ ಯಶೋಗಾಥೆಗಳ ಬಗ್ಗೆ ಬೆಳಕು ಚೆಲ್ಲಬೇಕು. ಗ್ಯಾರಂಟಿ ಅನುಷ್ಠಾನ ಸಮಿತಿಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಲ್ಲಿ ಮರಣ ಹೊಂದಿದ ಫಲಾನುಭವಿಗಳ ಹಾಗೂ ಅನರ್ಹ ಫಲಾನುಭವಿಗಳ ಹಾಗೂ ಬೇರೆ ರಾಜ್ಯದವರು ಗೃಹ ಜ್ಯೋತಿ ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳ ಕುರಿತು ಅಂಕಿ-ಸಂಖ್ಯೆ ಬಗ್ಗೆ ಆಯಾ ಇಲಾಖೆ ಅಧಿಕಾರಿಗಳನ್ನು ಪ್ರಶ್ನಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ರೇವತಿ ಹೊಸಮಠ ಮಾತನಾಡಿ, ಜಿಲ್ಲೆಯಲ್ಲಿ 4,00,702 ಫಲಾನುಭವಿಗಳು ಗೃಹಲಕ್ಷ್ಮಿ ಸೌಲಭ್ಯಕ್ಕೆ ನೋಂದಾಯಿಸಿಕೊಂಡಿದ್ದಾರೆ. ಬಹು ಬ್ಯಾಂಕ್ ಖಾತೆ ಹೊಂದಿದ 28,430 ಫಲಾನುಭವಿಗಳ ಕುರಿತು ಕೇಂದ್ರ ಕಚೇರಿಯಿಂದ ಮಾಹಿತಿ ಬಂದಿದ್ದು, ಈ ಕುರಿತು 193 ಖಾತೆಗಳನ್ನು ಪರಿಶೀಲಿಸಲಾಗಿದೆ. ಯಾವುದೇ ಹಣದ ದುರುಪಯೋಗವಾಗಿಲ್ಲ. ಮರಣಹೊಂದಿದ ಫಲಾನುಭವಿಗಳ ಕುರಿತು ಪಡಿತರ ಚೀಟಿಯಲ್ಲಿ ಹೆಸರು ಕಡಿಮೆಯಾಗದ ಸಮಯದಲ್ಲಿ ಅಂತಹ ವ್ಯಕ್ತಿಗಳಿಗೆ ಹಣ ಜಮೆಯಾಗಿರುವುದು ಕಂಡುಬಂದಿದೆ. ಗೃಹಜ್ಯೋತಿ ಫಲಾನುಭವಿಗಳ ಮನೆ ಮನೆ ಭೇಟಿ ನೀಡಿ ಫಲಾನುಭವಿಗಳ ಪರಿಶೀಲನೆಗೆ ಅಂಗನವಾಡಿ ಕಾರ್ಯಕರ್ತೆಯರಿಗೆ ಸೂಚನೆ ನೀಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಗೃಹ ಜ್ಯೋತಿ ಫಲಾನುಭವಿಗಳ ಬಗ್ಗೆ ಜು. 1ರಿಂದ ಸರ್ವೇ ನಡೆಸಲಾಗುತ್ತಿದೆ. ಈ ಕಾರ್ಯಕ್ಕೆ 700 ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಹೆಸ್ಕಾಂ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ವ್ಯಕ್ತಿಯ ಮರಣಗೊಂಡ 15 ದಿನಗಳಲ್ಲಿ ಮರಣ ಪ್ರಮಾಣಪತ್ರ ನೀಡುವಂತೆ ಪಿಡಿಒಗಳಿಗೆ ಸೂಚನೆ ನೀಡಲು ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಉಪಾಧ್ಯಕ್ಷರು ನಿರ್ದೇಶನ ನೀಡಿದರು.

ತಿಳಿವಳಿಕೆ ನೀಡಿ: ಸೌಲಭ್ಯ ಪಡೆಯುವ ಫಲಾನುಭವಿ ಮರಣಹೊಂದಿದಲ್ಲಿ ನಂತರ ಬರುವ ಮಹಿಳೆಯನ್ನು ಪಡಿತರ ಚೀಟಿಯಲ್ಲಿ ಸೇರಿಸಲಾಗುವುದು. ಆದರೆ ಯಾವುದೇ ಕಾರಣಕ್ಕೂ ಗ್ಯಾರಂಟಿ ಸೌಲಭ್ಯಗಳು ಸ್ಥಗಿತಗೊಳ್ಳುವುದಿಲ್ಲ. ಎರಡು ತಿಂಗಳಲ್ಲಿ ಪುನಃ ಸೌಲಭ್ಯಗಳು ದೊರೆಯುತ್ತವೆ. ಹಾಗಾಗಿ ಸಾರ್ವಜನಿಕರು ವ್ಯಕ್ತಿಗಳ ಮರಣದ ಕುರಿತು ಮಾಹಿತಿ ನೀಡುವಂತೆ ತಿಳಿವಳಿಕೆ ನೀಡಬೇಕು ಎಂದು ಸಮಿತಿಗಳ ಪದಾಧಿಕಾರಿಗಳಿಗೆ ಹಾಗೂ ಅಧಿಕಾರಿಗಳಿಗೆ ಸಲಹೆ ನೀಡಿದರು.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹನುಮಂತಪ್ಪ ಮರಗಡಿ, ಉಪಾಧ್ಯಕ್ಷ ಗುಡ್ಡಪ್ಪ ಜಲದಿ, ವಸಂತ ಲಮಾಣಿ, ರಮೇಶ ಮಡಿವಾಳರ, ಲಲಿತಾ ಹುಗ್ಗಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಲ್ಜಿತ್‌ಕುಮಾರ, ಉಪ ಕಾರ್ಯದರ್ಶಿ ಡಾ. ಪುನೀತ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾಲಿನ್ಯ ನಿಯಂತ್ರಣ ಇಲಾಖೆ ಕಣ್ಣಿದ್ದೂ ಕುರುಡು
ವಾರದೊಳಗೆ ಚುನಾವಣಾ ಪ್ರಕ್ರಿಯೆ ಮುಗಿಸಲು ಆದೇಶ: ಎನ್.ಕೆ. ಭಟ್ಟ