ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನೂತನ ಸದಸ್ಯರಾಗಿ ಆಯ್ಕೆಯಾಗಿ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡಿದ ಜಗನ್ನಾಥ ಹಲಮಡಗಿ ಅವರು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮಕ್ಕಳ ಶಿಕ್ಷಣದ ಹಕ್ಕು, ಆರೋಗ್ಯ, ಪೌಷ್ಠಿಕತೆ, ಬಾಲ್ಯವಿವಾಹ ತಡೆ, ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳ ತಡೆ ಹಾಗೂ ಸರ್ಕಾರದ ವಿವಿಧ ಮಕ್ಕಳ ಕಲ್ಯಾಣ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಸಮಾಲೋಚನೆ ನಡೆಸಿದರು. ಮಕ್ಕಳಿಗೆ ಸುರಕ್ಷಿತ ಹಾಗೂ ಹಕ್ಕು ಸಮ್ಮತ ವಾತಾವರಣ ಕಲ್ಪಿಸಲು ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದರು.
ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಿವಿಧ ವಸತಿ ನಿಲಯದ ಮಕ್ಕಳಿಗೆ ಗುಣಮಟ್ಟದ ಆಹಾರ ಪೂರೈಸುವ ನಿಟ್ಟಿನಲ್ಲಿ ಪ್ರತ್ಯೇಕ ಎಸ್ಓಪಿ ಮಾಡಲಾಗುವುದು. ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡುವಂತೆ ಅಧಿಕಾರಿಗಳು ಸೂಚಿಸಲಾಗಿದೆ. ಅಂಗನವಾಡಿ ದುರಸ್ಥಿಗಳು ಇದ್ದಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಕಾಮಗಾರಿ ಕೈಗೊಳ್ಳಲು ಅವಕಾಶವಿದ್ದು, ಅಗತ್ಯ ದುರಸ್ಥಿ ಮಾಡಿಕೊಳ್ಳಲು ತಿಳಿಸಿದರು. ಅಲ್ಲದೇ ಮಕ್ಕಳಿಗೆ ಮೊಟ್ಟೆ ಹಾಗೂ ಊಟದ ಮೆನುವಿನಲ್ಲಿ ಇಲ್ಲಿಯ ವಾತಾವರಣಕ್ಕೆ ತಕ್ಕಂತೆ ಆಹಾರ ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಭೇಟಿ ನೀಡಿ, ಮಕ್ಕಳ ಮೇಲಿನ ಅಪರಾಧಗಳ ತಡೆ, ಪೊಕ್ಸೋ ಕಾಯ್ದೆ ಪ್ರಕರಣಗಳ ತನಿಖೆ, ಕಾಣೆಯಾದ ಮಕ್ಕಳ ಪತ್ತೆ, ಬಾಲಸ್ನೇಹಿ ಪೊಲೀಸ್ ವ್ಯವಸ್ಥೆ ಹಾಗೂ ಮಕ್ಕಳ ಸುರಕ್ಷತೆಗೆ ಕೈಗೊಂಡಿರುವ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.