ರಾಮನಗರ: ಜಿಲ್ಲೆಯ ನಗರ ಮತ್ತು ಪಟ್ಟಣಗಳ ಸ್ವಚ್ಛತೆ ಕಾಪಾಡುವ ಪೌರ ಕಾರ್ಮಿಕರಿಗೆ ಆರೋಗ್ಯ ವಿಮೆ ಮತ್ತು ಜೀವವಿಮೆ ಮಾಡಿಸುವಂತೆ ನಗರ ಸ್ಥಳೀಯ ಸಂಸ್ಥೆಗಳಿಗೆ ರಾಮನಗರ ಉಪವಿಭಾಗದ ಉಪವಿಭಾಗಾಧಿಕಾರಿ ಬಿನೋಯ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಪೌರ ಕಾರ್ಮಿಕ ಮಕ್ಕಳಿಗೆ ನೇರ ಪ್ರವೇಶ ನೀಡಬೇಕೆಂಬ ನಿಯಮವಿದೆ. ಈ ಬಗ್ಗೆ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ಗಮನಕ್ಕೆ ತಂದು ಪೌರ ಕಾರ್ಮಿಕರಿಗೆ ಜಾಗೃತಿ ಮೂಡಿಸುವ ಮೂಲಕ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಪೌರ ಕಾರ್ಮಿಕ ಮಕ್ಕಳ ಪ್ರವೇಶಕ್ಕೆ ಆದ್ಯತೆ ನೀಡಬೇಕು ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ನೀಡಲಾಗುವ ಲ್ಯಾಪ್ಟಾಪ್ಗಳನ್ನು ಶೀಘ್ರವಾಗಿ ವಿತರಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಪೌರ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಕಾಯ್ದಿರಿಸಿರುವ ಶೇ. 24.10 ಅನುದಾನವನ್ನು ನಗರಸಭೆ ಹಾಗೂ ಪುರಸಭೆಗಳಲ್ಲಿ ಪೂರ್ಣಪ್ರಮಾಣದಲ್ಲಿ ಬಳಕೆ ಮಾಡಿ ವರದಿ ನೀಡಬೇಕೆಂದು ನಿರ್ದೇಶಿಸಿದ ಅವರು ಸ್ಥಳೀಯ ಸಂಸ್ಥೆಗಳು ಸ್ಥಳೀಯ ಸಂಸ್ಥೆಗಳು ಕಸ ಸಂಗ್ರಹಣೆಗೆ ಸೇರಿದಂತೆ ವಿವಿಧ ಉದ್ದೇಶಗಳಿಗೆ ಬಳಸುವ ವಾಹನಗಳಿಗೆ ವಿಮೆಯನ್ನು ಕಡ್ಡಾಯವಾಗಿ ಮಾಡಿಸಬೇಕು. ಸದೃಢತೆ ಪ್ರಮಾಣಪತ್ರ ಹೊಂದಿರಬೇಕು. ಇಲ್ಲದಿದ್ದರೆ ಅಪಘಾತ ಅದಾಗ ವಿಮೆ ಕ್ಲೆಮ್ಗೆ ತೊಂದರೆಯಾಗಲಿದೆ ಎಂದು ಸಲಹೆ ನೀಡಿದರು.ಸಭೆಯಲ್ಲಿ ಸಮಿತಿ ಸದಸ್ಯರಾದ ಆರ್.ನಾಗರಾಜು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಕುಮಾರ್, ಕನಕಪುರದ ಪ್ರಕಾಶ್, ಚನ್ನಪಟ್ಟಣದ ಪೌರಾಯುಕ್ತರಾದ ಮಹೇಂದ್ರ, ಜಿಲ್ಲಾಸ್ಪತ್ರೆಯ ಆರ್ಎಂಒ ಡಾ. ನಾರಾಯಣಸ್ವಾಮಿ, ಎಂಡಿಆರ್ಎಸ್ ಸಂಯೋಜಕ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.
ರಾಮನಗರದ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿ ಉಪವಿಭಾಗಾಧಿಕಾರಿ ಬಿನೋಯ್ ಅಧ್ಯಕ್ಷತೆಯಲ್ಲಿ ರಾಮನಗರ ಉಪ ವಿಭಾಗ ಮಟ್ಟದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು.