ಕನ್ನಡಪ್ರಭ ವಾರ್ತೆ ತುಮಕೂರುಜಿಲ್ಲೆಯಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನು ಶೀಘ್ರದಲ್ಲೇ ಪರಿಹರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ. ಅಶ್ವಿಜ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತಿ ವಿಡಿಯೋ ಸಂವಾದ ಕೇಂದ್ರದಲ್ಲಿ ಬುಧವಾರ ಮಹತ್ವದ ಸಭೆ ನಡೆಸಿ ಅವರು ಮಾತನಾಡಿದರು. ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಿಗೆ ತಕ್ಷಣ ಭೇಟಿ ನೀಡಿ ಕ್ರಮ ಕೈಗೊಳ್ಳಬೇಕು. ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳಲ್ಲಿ ವಿಶೇಷ ಸಭೆ ನಡೆಸಬೇಕು. ಗ್ರಾಮಗಳಲ್ಲಿನ ಎಲ್ಲ ಕಾಮಗಾರಿಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಿ ಜನರಿಗೆ ನಿರಂತರವಾಗಿ ಶುದ್ಧ ಕುಡಿಯುವ ನೀರು ಒದಗಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.
ಖಾಸಗಿ ಟ್ಯಾಂಕರ್ಗಳು ಮತ್ತು ಖಾಸಗಿ ಬೋರ್ವೆಲ್ಗಳಿಗೆ ಸಂಬಂಧಿಸಿದ ಪಾವತಿಗಳಲ್ಲಿ ಯಾವುದಾದರೂ ಬಾಕಿ ಇರುವುದರ ಬಗ್ಗೆ ಚರ್ಚಿಸಲಾಯಿತು. ಇಂದಿನವರೆಗೆ ಟಾಸ್ಕ್ ಫೋರ್ಸ್ ಸಭೆಗಳು ನಡೆದಿರುವ ಮಾಹಿತಿ ಹಾಗೂ ಕಳುಹಿಸಿದ ಬೋರ್ವೆಲ್ ಪ್ರಸ್ತಾವನೆಗಳ ವಿವರಗಳನ್ನು ಪರಿಶೀಲಿಸಿದರು. ಎಲ್ಲಾ ತಾಲೂಕುಗಳಲ್ಲಿ ಇಂದಿನವರೆಗೆ ಓವರ್ಹೆಡ್ ಟ್ಯಾಂಕ್ಗಳ ಸ್ವಚ್ಛತೆಗೆ ಸಂಬಂಧಿಸಿದ ವಿವರವನ್ನು ಪರಿಶೀಲಿಸಿದರು. ಖಾಸಗಿ ಸಂಸ್ಥೆಗಳ ಮೂಲಕ ನಿರ್ವಹಿಸಲಾಗುತ್ತಿರುವ ಪ್ಲಾಂಟ್ಗಳಲ್ಲಿ ಎಷ್ಟು ಕಾರ್ಯನಿರ್ವಹಿಸುತ್ತಿವೆ ಹಾಗೂ ಎಷ್ಟು ಕಾರ್ಯನಿರ್ವಹಿಸದ ಸ್ಥಿತಿಯಲ್ಲಿವೆ ಎಂಬುದನ್ನು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸಭೆಯಲ್ಲಿ ವಿವಿಧ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ಗಳು, ಸಹಾಯಕ ಕಾರ್ಯಪಾಲಕ ಎಂಜಿನಿಯರ್ಗಳು ಹಾಗೂ ವಿವಿಧ ವಿಭಾಗ ಮಟ್ಟದ ಅಧಿಕಾರಿಗಳು ಹಾಜರಿದ್ದರು. ವಿಡಿಯೋ ಕಾನ್ಪರೆನ್ಸ್ ಮೂಲಕ ಎಲ್ಲಾ ತಾಲೂಕು ಪಂಚಾಯತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಸಹಾಯಕ ಕಾರ್ಯಪಾಲಕ ಇಂಜಿನಿಯರ್ಗಳು ಭಾಗವಹಿಸಿದ್ದರು.