ಹರಪನಹಳ್ಳಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಜ.9ರಂದು ಸಂವಿಧಾನ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ವಿಜಯನಗರ ಜಿಲ್ಲೆ ಬಂದ್ಗೆ ಕರೆ ನೀಡಲಾಗಿದೆ ಎಂದು ಸಮಿತಿಯ ಜಿಲ್ಲಾ ಮುಖಂಡ ಜಂಬಯ್ಯ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಅಂಬೇಡ್ಕರ್ ಬಗ್ಗೆ ಅಗೌರವದಿಂದ ಮಾತನಾಡುವ ಮೂಲಕ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆಅಪಮಾನ ಮಾಡಿದ್ದಾರೆ. ಹಾಗಾಗಿ ಶಾ ಅವರು ಕೂಡಲೇ ರಾಜೀನಾಮೆ ಕೊಡಬೇಕು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಅಮಿತ್ ಶಾ ಅವರ ಹೇಳಿಕೆಯನ್ನು ಬಿಜೆಪಿಯವರು ಸಮರ್ಥಿಸಿಕೊಳ್ಳುತ್ತಿದ್ದು, ಈ ಬಗ್ಗೆ ನಾವೆಲ್ಲರೂ ಜಾಗೃತರಾಗಬೇಕು. ಸಂವಿಧಾನ ಉಳಿವಿಗಾಗಿ ಹೋರಾಟಕ್ಕೆ ಮುಂದಾಗಬೇಕು ಎಂದರು.
ಅಂದಿನ ಪ್ರತಿಭಟನೆಯಲ್ಲಿ ಬಿಜೆಪಿ ಹೊರತುಪಡಿಸಿ ಇತರೆ ಎಲ್ಲ ಪ್ರಗತಿಪರ ಸಂಘಟನೆಗಳು, ಇತರೆ ಪಕ್ಷದ ರಾಜಕೀಯ ಮುಖಂಡರು ಭಾಗವಹಿಸಬೇಕು. ಅಂದು ಬೆಳಗ್ಗೆ 6ರಿಂದ ಸಂಜೆ 6ಗಂಟೆವರೆಗೆ ಬಂದ್ ಇರುತ್ತದೆ ಎಂದರು.
ಮುಖಂಡ ಸೋಮಶೇಖರ್ ಬಣ್ಣದಮನೆ ಮಾತನಾಡಿ, ಅಮಿತ್ ಶಾ ಅಂಬೆಡ್ಕರ್ ಬಗ್ಗೆ ಅವಿವೇಕದ ಮಾತುಗಳನ್ನು ಹಾಡಿದ್ದಾರೆ. ಅವರಿಗೆ ಸಂವಿಧಾನದ ಬಗ್ಗೆ ನಂಬಿಕೆ ಇಲ್ಲ. ಸಂವಿಧಾನ ಉಳಿವಿಗಾಗಿ ನಾವು ಒಗ್ಗೂಡಿ ಹೋರಾಟ ಮಾಡಬೇಕು ಎಂದರು.
ಹರಪನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ. ಅಂಜಿನಪ್ಪ ಮಾತನಾಡಿ, ಸಂವಿಧಾನ ಬದಲಾಯಿಸುವುದೇ ಬಿಜೆಪಿ, ಆರ್ಎಸ್ಎಸ್ನವರು ಹಿಡನ್ ಅಜೆಂಡಾವಾಗಿದೆ. ಹೀಗಾಗಿ ಸಂವಿಧಾನಕ್ಕೆ ಭಯ ಬಿದ್ದು ಅಮಿತ್ ಇಂತಹ ಹೇಳಿಕೆ ನೀಡಿದ್ದಾರೆ. ಸಂವಿಧಾನ ಕಾಪಾಡಲು ನಾವೆಲ್ಲರೂ ಮುಂದಾಗಬೇಕು. ಹರಪನಹಳ್ಳಿ ತಾಲೂಕನ್ನು ಸಂಪೂರ್ಣ ಬಂದ್ ಮಾಡಲಾಗವುದು ಎಂದರು.
ವಕೀಲ ಬಂಡ್ರಿ ಗೋಣಿ ಬಸಪ್ಪ ಮಾತನಾಡಿ, ಅಂಬೇಡ್ಕರ್ ಬಗ್ಗೆ ಮಾತನಾಡಲು ಅಮಿತ್ ಶಾಗೆ ಅರ್ಹತೆ ಇಲ್ಲ. ದೇಶದಲ್ಲಿ ಮನುವಾದ ತರಲು ಅವರು ಪ್ರಯತ್ನ ಮಾಡುತ್ತಿದ್ದಾರೆ. ಸಂವಿಧಾನ ಟಚ್ ಮಾಡಿದರೆ ದೇಶದಲ್ಲಿ ಘನಘೋರ ಘಟನೆ ನಡೆಯುತ್ತದೆ ಎಂದು ಎಚ್ಚರಿಸಿದರು.
ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ವೆಂಕಟೇಶ ಮಾತನಾಡಿ, ಅಂಬೇಡ್ಕರ್ ಅವರು ಜೀವನ ತ್ಯಾಗ ಮಾಡಿ ಸಂವಿಧಾನ ರಚಿಸಿದ್ದಾರೆ. ಅದರ ಅಡಿಯಲ್ಲಿ ಅಮಿತ್ ಶಾ ಕೇಂದ್ರ ಮಂತ್ರಿಯಾಗಿ ಇಂತಹ ಹೇಳಿಕೆ ನೀಡಿರುವುದು ದುರಂತ ಎಂದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.