ಕನ್ನಡಪ್ರಭ ವಾರ್ತೆ ಬೆಂಗಳೂರು
ನನಗೂ ಈ ಕೆಟ್ಟ ಜಾತಿ ವ್ಯವಸ್ಥೆ, ನಿಂದನೆ, ಅಸಮಾನತೆ, ಹಸಿವು ಎಲ್ಲವುಗಳ ಅನುಭವವಿದೆ. ಹಾಗಾಗಿ ನಾನು ರಾಜಕೀಯದಲ್ಲಿ ಇರುವವರೆಗೂ, ನನ್ನ ಕೊನೆಯ ಉಸಿರಿರುವವರೆಗೂ ಸಾಮಾಜಿಕ ನ್ಯಾಯದ ಪರವಾಗಿ ಕೆಲಸ ಮಾಡುತ್ತೇನೆ. ಮೊದಲು ಮುಖ್ಯಮಂತ್ರಿ ಆಗಿದ್ದಾಗ ಪರಿಶಿಷ್ಟರು, ಹಿಂದುಳಿದವರು, ಬಡವರ ಕಲ್ಯಾಣಕ್ಕಾಗಿ ಅನೇಕ ಭಾಗ್ಯ ಯೋಜನೆಗಳನ್ನು ಕೊಟ್ಟಿದ್ದೆ. ಈಗ ಪಂಚ ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದೇನೆ. ಸಮಾನತೆಯ ಸಮಾಜ ನಿರ್ಮಾಣ ಆಗಬೇಕು. ಅದಕ್ಕಾಗಿ ನಾವೆಲ್ಲ ಪ್ರಯತ್ನ ಮಾಡೋಣ. ಈ ನಿಟ್ಟಿನಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ವರದಿ ಒಪ್ಪಿಕೊಂಡು ಜಾರಿಗೊಳಿಸಲು ನಮ್ಮ ಸರ್ಕಾರ ಸಿದ್ಧವಿದೆ. ಮೀಸಲಾತಿ ಪ್ರಮಾಣವನ್ನೂ ಶೇ.70-75ಕ್ಕೆ ಹೆಚ್ಚಿಸುವ ಆಲೋಚನೆಯೂ ಇದೆ. ಸರ್ಕಾರಿ ವ್ಯವಸ್ಥೆಯಲ್ಲಿ ಮಾತ್ರ ಮೀಸಲಾತಿ ಇದ್ದರೆ ಸಾಲದು, ಖಾಸಗಿ ವ್ಯವಸ್ಥೆಯಲ್ಲೂ ಮೀಸಲಾತಿ ಇರಬೇಕು ಎಂದು ಅವರು ಪ್ರತಿಪಾದಿಸಿದರು.
ಕಳೆದ ಚುನಾವಣೆ ವೇಳೆ ನಡೆಸಿದ ಪಾದಯಾತ್ರೆಯಿಂದ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಜಾತಿ ವ್ಯವಸ್ಥೆ ಬಗ್ಗೆ ಹೆಚ್ಚಿನ ತಿಳಿವಳಿಕೆ ಮೂಡಿತು. ಅವರಿಗೆ ಸ್ಪಷ್ಟತೆ ಇರುವುದರಿಂದಲೇ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ಜಾತಿ ಗಣತಿ ನಡೆಸುವಂತೆ ಮಾಡಿದ್ದಾರೆ. ಇತ್ತೀಚಿನ ಭೇಟಿ ವೇಳೆ ಅವರು ಕರ್ನಾಟಕದಲ್ಲಿ ನಡೆಯುತ್ತಿದ್ದ ಜಾತಿ ಸಮೀಕ್ಷೆ ಏನಾಯ್ತು? ಎಂದು ಕೇಳಿದರು. ಈ ತಿಂಗಳ ಕೊನೆಗೆ ಮುಗಿಯಬಹುದು ಎಂದು ಹೇಳಿದ್ದೇನೆ. ನಮ್ಮ ಸರ್ಕಾರ ಕೂಡ ಈ ಗಣತಿಯನ್ನು ಒಪ್ಪಿಕೊಂಡು ಜಾರಿಮಾಡಲು ಬದ್ಧವಾಗಿದೆ ಎಂದು ಸಿಎಂ ತಿಳಿಸಿದರು.