ಶಿವಮೊಗ್ಗ: ಪ್ರತಿ ಮನೆ ಮನೆಗೆ ತೆರಳಿ ನಿಗದಿತ ಸಮಯದೊಳಗೆ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತಾದ ಸಮೀಕ್ಷೆಯನ್ನು ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸಮೀಕ್ಷೆದಾರರಿಗೆ ಸೂಚನೆ ನೀಡಿದರು.
ಶಿವಮೊಗ್ಗ: ಪ್ರತಿ ಮನೆ ಮನೆಗೆ ತೆರಳಿ ನಿಗದಿತ ಸಮಯದೊಳಗೆ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತಾದ ಸಮೀಕ್ಷೆಯನ್ನು ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸಮೀಕ್ಷೆದಾರರಿಗೆ ಸೂಚನೆ ನೀಡಿದರು.
ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ಶಿವಮೊಗ್ಗ ಇವರ ಸಹಯೋಗದಲ್ಲಿ ಸೋಮವಾರ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ದಾಸ್ ರವರ ಏಕಸದಸ್ಯ ವಿಚಾರಣಾ ಆಯೋಗದ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ಸಮೀಕ್ಷೆ ನಡೆಸುವ ಕಾರ್ಯಕ್ಕೆ ತಾಲೂಕು ಮಟ್ಟದ ಮಾಸ್ಟರ್ ಟ್ರೈನರ್ಗಳಿಗೆ ಏರ್ಪಡಿಸಲಾಗಿದ್ದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.
ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಕುರಿತಾದ ಸಮೀಕ್ಷೆ ಸರ್ಕಾರದ ಆದ್ಯತೆಯ ಸಮೀಕ್ಷೆಯಾಗಿದ್ದು, ಸಮೀಕ್ಷೆದಾರರು ಇದನ್ನು ಗಂಭೀರವಾಗಿ ಪರಿಗಣಿಸಿ ನಿಗದಿತ ವೇಳೆಗೆ ಸಮೀಕ್ಷೆಯನ್ನು ಪೂರೈಸಬೇಕು ಎಂದರು.
ಪರಿಶಿಷ್ಟ ಜಾತಿಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ವಿಶ್ಲೇಷಣೆ ಮಾಡಿ ಒಳ ಮೀಸಲಾತಿ ವರ್ಗೀಕರಣ ಮಾಡಿ ಸರ್ಕಾರಕ್ಕೆ ಶಿಫಾರಸು ಮಾಡುವ ಜವಾಬ್ದಾರಿಯನ್ನು ಆಯೋಗವು ಹೊಂದಿದ್ದು, ಈ ಉದ್ದೇಶಕ್ಕಾಗಿ ಸರ್ಕಾರ ಪರಿಶಿಷ್ಟ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸಮಾಜ ಕಲ್ಯಾಣ ಇಲಾಖೆಯ ಮೂಲಕ ಕೈಗೊಳ್ಳುತ್ತಿದೆ ಎಂದು ತಿಳಿಸಿದರು.
ಈ ಸಮೀಕ್ಷೆಯು ಸೂಕ್ಷ್ಮತೆಯಿಂದ ಕೂಡಿದ್ದು, ಒಂದೊಂದು ತಾಲೂಕಿನಲ್ಲಿಯೂ ಸಮೀಕ್ಷೆ ಅನುಭವ ಭಿನ್ನವಾಗಿರಬಹುದು. ಯಾವುದೇ ಸಮಸ್ಯೆಗಳಿಗೆ ಎಡೆ ಮಾಡದಂತೆ ಸಮೀಕ್ಷೆ ನಡೆಸಬೇಕು. ತೀರ್ಥಹಳ್ಳಿ, ಹೊಸನಗರ ತಾಲೂಕು ಹೊರತುಪಡಿಸಿ ಉಳಿದ ತಾಲೂಕುಗಳಲ್ಲಿ ಪರಿಶಿಷ್ಟ ಜಾತಿ ಸಮುದಾಯದವರ ಜನಸಂಖ್ಯೆ ಹೆಚ್ಚಿದ್ದು, ಎಲ್ಲ ಮನೆ ಮನೆಗಳಿಗೆ ಭೇಟಿ ನೀಡಿ ನಿಗದಿತ ನಮೂನೆಯಲ್ಲಿ ಕೇಳಲಾದ ಮಾಹಿತಿಯನ್ನು ಸಂಗ್ರಹಿಸಬೇಕು ಎಂದು ಹೇಳಿದರು.
ಇನ್ನೊಂದು ಹಂತದ ತರಬೇತಿ ಹಾಗೂ ಮಾಕ್ ಟ್ರಯಲ್ ಇದ್ದು, ಅಲ್ಲಿ ಸಮೀಕ್ಷೆದಾರರು ಯಾವುದೇ ರೀತಿಯ ಸಂದೇಹಗಳಿದ್ದರೆ ಬಗೆಹರಿಸಿಕೊಳ್ಳಬಹುದು. ಯಾವುದೇ ಕಾರಣಕ್ಕೂ ಈ ಕಾರ್ಯದಲ್ಲಿ ನಿರ್ಲಕ್ಷ್ಯ ತೋರದೆ ಗಂಭೀರವಾಗಿ ಈ ಕಾರ್ಯ ಕೈಗೊಂಡು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದರು. ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಎಂ.ಅಶೋಕ್ ಪಾಟೀಲ್ ಅವರು ಪಿಪಿಟಿ ಪ್ರದರ್ಶನದ ಮೂಲಕ ಸಮೀಕ್ಷೆ ನಡೆಸುವ ಬಗೆಯನ್ನು ವಿವರಿಸಿ, ಸಮೀಕ್ಷೆದಾರರು ಯಾವುದೇ ಮನೆಯನ್ನು ಬಿಡದಂತೆ ಸಮೀಕ್ಷೆ ನಡೆಸಬೇಕು. ಮೂರು ಹಂತದ ಸಮೀಕ್ಷೆ ಇದಾಗಿದ್ದು, ಮೇ 5 ರಿಂದ 17ರವರೆಗೆ ಮನೆ ಮನೆ ಭೇಟಿ ಮಾಡಿ ಪ್ರಶ್ನಾವಳಿಯನ್ನು ತುಂಬುವ ಪ್ರಕ್ರಿಯೆ ಆರಂಭವಾಗಲಿದೆ ಎಂದು ತಿಳಿಸಿದರು.ಕಾರ್ಯಾಗಾರದಲ್ಲಿ ಪಾಲಿಕೆ ಆಯುಕ್ತರಾದ ಡಾ.ಕವಿತಾ ಯೋಗಪ್ಪನವರ್, ಉಪ ವಿಭಾಗಾಧಿಕಾರಿ ಸತ್ಯನಾರಾಯಣ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಲ್ಲೇಶಪ್ಪ ಸೇರಿದಂತೆ ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.