ಕನ್ನಡಪ್ರಭ ವಾರ್ತೆ ಕೋಲಾರ
ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಕೆ ಪ್ರಕರಣ ಸಂಬಂಧ ಕೋಲಾರ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸಲು ಗುರುವಾರ ಹೈಕೋರ್ಟ್ ನಿರಾಕರಿಸಿದ್ದು, ತನಿಖೆ ಪೂರ್ಣಗೊಳಿಸುವಂತೆ ಪೊಲೀಸರಿಗೆ ಸೂಚಿಸಿದೆ.ಪ್ರಕರಣ ಕುರಿತ ತಮ್ಮ ವಿರುದ್ಧದ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಶಾಸಕ ಜಿ. ಮಂಜುನಾಥ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಗುರುವಾರ ತೀರ್ಪು ನೀಡಿದೆ.
ಇದರಿಂದ ನಕಲಿ ಜಾತಿ ಪ್ರಮಾಣ ಪತ್ರ ಸಲ್ಲಿಕೆ ಪ್ರಕರಣದ ಕುರಿತ ಕಾನೂನು ಹೋರಾಟದಲ್ಲಿ ಮಂಜುನಾಥ್ಗೆ ಹಿನ್ನಡೆಯಾಗಿದೆ. ಅವರು ತನಿಖೆ ಎದುರಿಸಬೇಕಾದ ಅನಿವಾರ್ಯತೆ ಎದುರಾಗಿದೆ.ಏನಿದು ಪ್ರಕರಣ?:
ಮಂಜುನಾಥ್ 2013ರಲ್ಲಿ ಮುಳಬಾಗಿಲು ಮೀಸಲು ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ಜೆಡಿಎಸ್ ಪರಾಜಿತ ಅಭ್ಯರ್ಥಿ ಮುನಿನಂಜಪ್ಪ ಜಾತಿ ಪ್ರಮಾಣದ ಸಿಂಧುತ್ವ ಪ್ರಶ್ನಿಸಿದ್ದರು. ಹೈಕೋರ್ಟ್ 2018ರಲ್ಲಿ ಮಂಜುನಾಥ್ ಅವರನ್ನು ಅನರ್ಹಗೊಳಿಸಿತ್ತು. ಇದರ ವಿರುದ್ಧ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂಕೋರ್ಟ್ ಕೂಡ ಅವರ ಅರ್ಜಿ ವಜಾಗೊಳಿಸಿ, ಜಾತಿ ಪರಿಶೀಲನೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿತ್ತು.ನಂತರ ಜಿ. ಮಂಜುನಾಥ್ ಅವರು ಬುಡಗ ಜಂಗಮ ಜಾತಿಗೆ ಸೇರಿಲ್ಲ. ಅವರು ಬೈರಾಗಿ ಜಾತಿ ಸೇರಿದವರು ಎಂದು ಜಿಲ್ಲಾಧಿಕಾರಿಗಳ ನೇತೃತ್ವದ ಜಾತಿ ಪರಿಶೀಲನಾ ಸಮಿತಿ ವರದಿ ಸಲ್ಲಿಸಿತ್ತು. ಅದನ್ನು ಮಂಜುನಾಥ್ ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಆ ನಂತರ 2018ರಲ್ಲಿ ಮುಳಬಾಗಿಲು ಠಾಣೆಯಲ್ಲಿ ಮಂಜುನಾಥ್ ವಿರುದ್ಧ ನಕಲಿ, ವಂಚನೆ, ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅದನ್ನು ಪ್ರಶ್ನಿಸಿ ಅವರು ಮತ್ತೆ ಹೈಕೋರ್ಟ್ ಮೊರೆ ಹೋಗಿದ್ದರು.
ಅರ್ಜಿಗೆ ಆಕ್ಷೇಪಿಸಿದ್ದ ಸರ್ಕಾರದ ಪರ ವಕೀಲರು, ಅರ್ಜಿದಾರರು ನಕಲಿ ಜಾತಿ ಪ್ರಮಾಣಪತ್ರವನ್ನು ಸಲ್ಲಿಸುವ ಮೂಲಕ ಮೀಸಲು ಕ್ಷೇತ್ರವನ್ನು ಕಸಿದುಕೊಂಡಿದ್ದಾರೆ. ಹಾಗಾಗಿ ಅವರ ವಿರುದ್ಧ ತನಿಖೆ ಆಗಲೇಬೇಕು ಎಂದು ವಾದಿಸಿದ್ದರು. ಈ ವಾದ ಪರಿಗಣಿಸಿದ ನ್ಯಾಯಪೀಠ, ಶಾಸಕರ ಅರ್ಜಿ ವಜಾಗೊಳಿಸಿದೆ.