ಗದಗ: ನಿಗದಿತ ವೇಳೆ ಬಸ್ ಬಾರದ ಹಿನ್ನೆಲೆಯಲ್ಲಿ ತಾಲೂಕಿನ ಲಕ್ಕುಂಡಿ ಗ್ರಾಮದ ವಿದ್ಯಾರ್ಥಿಗಳು ವಾಯವ್ಯ ಸಾರಿಗೆ ಸಂಸ್ಥೆಯ ವಿರುದ್ಧ ಶುಕ್ರವಾರ ಪ್ರತಿಭಟನೆ ನಡೆಸಿದರು.
ಬಸ್ ನಿಲ್ದಾಣದಲ್ಲಿ 10ಕ್ಕೂ ಹೆಚ್ಚು ಬಸ್ಗಳನ್ನು ತಡೆದು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಪಾಲಕರು ಹಾಗೂ ಕೂಲಿ ಕಾರ್ಮಿಕರು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿರುದ್ಧ ಘೋಷಣಿ ಕೂಗಿದರು. 2 ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆದಿದ್ದರಿಂದ ಗದಗ, ಹುಬ್ಬಳ್ಳಿ, ಕೊಪ್ಪಳ, ವಿಜಯನಗರ, ರಾಯಚೂರು, ಬೆಳಗಾವಿ, ಹಾವೇರಿ, ಬಳ್ಳಾರಿ ಹೋಗುವ ಪ್ರಯಾಣಿಕರು ತೊಂದರೆ ಅನುಭವಿಸಬೇಕಾಯಿತು.
ಬೆಳಗ್ಗೆ 8ರಿಂದ 10ರ ವರೆಗೂ ಗದಗ ನಗರ ಹಾಗೂ ಹುಬ್ಬಳ್ಳಿಗೆ ಶಾಲಾ-ಕಾಲೇಜಿಗೆ ಹೋಗುತ್ತೇವೆ. ಈ ಸಮಯದಲ್ಲಿ ಸಮರ್ಪಕ ಬಸ್ ಇಲ್ಲದೇ ಗೋಳಾಡುತ್ತ, ಬಸ್ ಕಾಯುತ್ತಾ ನಿಲ್ಲುತ್ತೇವೆ. ಈ ಕುರಿತು ಹಲವಾರು ಸಲ ಸಾರಿಗೆ ಸಂಸ್ಥೆಯ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರೂ ಯಾವುದೇ ಕ್ರಮ ವಹಿಸಿಲ್ಲ. ಹೀಗಾಗಿ ಸಮರ್ಪಕ ಬಸ್ ಒದಗಿಸುವ ಭರವಸೆ ನೀಡುವ ವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ವಿದ್ಯಾರ್ಥಿಗಳು ಹಾಗೂ ಪಾಲಕರು ಪಟ್ಟು ಹಿಡಿದರು.ಪ್ರತಿಭಟನಾ ಸ್ಥಳಕ್ಕೆ ಅಗಮಿಸಿದ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಗದಗ ಬಸ್ ನಿಲ್ದಾಣದ ನಿಯಂತ್ರಣ ಅಧಿಕಾರಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳು, ಮತ್ತು ಪಾಲಕರು ತೀವ್ರ ತರಾಟೆಗೆ ತೆಗೆದುಕೊಂಡರು. ಸಮಯಕ್ಕೆ ಸರಿಯಾಗಿ ಬಸ್ ಬಿಡುತ್ತಿಲ್ಲ ಎಂದು ಮನವಿ ಸಲ್ಲಿಸಿದರೂ ಕ್ಯಾರೆ ಅನ್ನುತ್ತಿಲ್ಲ. ಗದಗ ಸಾರಿಗೆ ಸಂಸ್ಥೆಯ ಅಧಿಕಾರಿಗಳ ವಿರುದ್ಧ ಸಾರಿಗೆ ಸಚಿವರಿಗೆ ಹಾಗೂ ಮುಖ್ಯಮಂತ್ರಿಗಳಿಗೆ ದೂರು ಸಲ್ಲಿಸಲಾಗುವುದು ಎಂದು ತರಾಟೆಗೆ ತೆಗೆದುಕೊಂಡರು. ಈ ಸಂದರ್ಭದಲ್ಲಿ ಗೊಂದಲಮಯ ವಾತಾವರಣ ಸೃಷ್ಠಿಯಾಯಿತು.
ವಿದ್ಯಾರ್ಥಿ ಪರಿಷತ್ ಮುಖಂಡ ಬಸವರಾಜ ಮುಳ್ಳಾಳ, ಬಸನಗೌಡ ಬಿರಾದಾರ, ಮರಿಯಪ್ಪ ವಡ್ಡರ, ವೀರೇಶ ಮುಸ್ಕಿನಭಾವಿ, ಬಸವರಾಜ ಕವಲೂರು, ಮಲ್ಲೇಶ ದಂಡಿನ, ಪರಸಪ್ಪ ಕರಿಯಲ್ಲಪ್ಪನವರ, ವಿನಾಯಕ ಡಿಗ್ಗಾವಿ ಇದ್ದರು.