ಕಾತೂರ ಸಹಕಾರಿ ಸಂಘದಲ್ಲಿ ಅವ್ಯವಹಾರ: ಅಧ್ಯಕ್ಷರ ರಾಜೀನಾಮೆಗೆ ಒತ್ತಾಯ

KannadaprabhaNewsNetwork |  
Published : Sep 17, 2026, 02:15 AM IST
ಕಾತೂರ ಭಾಗದ ರೈತರು ಸಹಕಾರಿ ಸಂಘದ ಎದುರು ಬೃಹತ್ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ ಮಾತನಾಡಿ, ಸಂಘದ ಹಾಲಿ ಅಧ್ಯಕ್ಷ ಚಂದ್ರಕಾಂತ ಪಾಟೀಲ ಅವರು ಅಧಿಕಾರ ವಹಿಸಿಕೊಂಡ ನಂತರ ಗೊಬ್ಬರ, ಬಂಗಾರದ ಸಾಲ ಸೇರಿದಂತೆ ವಿವಿಧ ವಿಭಾಗದಲ್ಲಿ ಅವ್ಯವಹಾರ ನಡೆದಿದೆ ಎಂದರು.

ಮುಂಡಗೋಡ: ತಾಲೂಕಿನ ಕಾತೂರ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಭಾರಿ ಅವ್ಯವಹಾರ ನಡೆದಿದ್ದು, ತಕ್ಷಣ ಅಧ್ಯಕ್ಷರು ರಾಜೀನಾಮೆ ನೀಡಬೇಕು. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬುಧವಾರ ಕಾತೂರ ಭಾಗದ ರೈತರು ಸಹಕಾರಿ ಸಂಘದ ಎದುರು ಬೃಹತ್ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ ಮಾತನಾಡಿ, ಸಂಘದ ಹಾಲಿ ಅಧ್ಯಕ್ಷ ಚಂದ್ರಕಾಂತ ಪಾಟೀಲ ಅವರು ಅಧಿಕಾರ ವಹಿಸಿಕೊಂಡ ನಂತರ ಗೊಬ್ಬರ, ಬಂಗಾರದ ಸಾಲ ಸೇರಿದಂತೆ ವಿವಿಧ ವಿಭಾಗದಲ್ಲಿ ಅವ್ಯವಹಾರ ನಡೆದಿದೆ. ಅಲ್ಲದೇ ತಮ್ಮದೇ ಚಿನ್ನಾಭರಣವನ್ನಿಟ್ಟು ಬಳಿಕ ಕಾರ್ಯದರ್ಶಿಗಳ ಮೇಲೆ ಒತ್ತಡ ಹೇರಿ ಅಧಿಕಾರ ದುರುಪಯೋಗಪಡಿಸಿಕೊಂಡು ಹಣ ಮರುಪಾವತಿ ಮಾಡದೆ ಚಿನ್ನಾಭರಣಗಳನ್ನು ಮನೆಗೆ ತೆಗೆದುಕೊಂಡು ಅಧಿಕಾರ ದುರ್ಬಳಕೆ ಮಾಡಿಕೊಂಡಿರುವ ಆರೋಪಗಳಿವೆ. ಈ ನಡುವೆಯೂ ತುರ್ತು ಸಭೆ ನಡೆಸಲಾಗುತ್ತಿದೆ.

ಅಧ್ಯಕ್ಷರ ಮೇಲೆ ಸಾಕಷ್ಟು ಹಣ ದುರ್ಬಳಕೆ ಆರೋಪವಿರುವುದರಿಂದ ಅವರ ಅಧ್ಯಕ್ಷತೆಯಲ್ಲಿ ಸಭೆ ನಡಸಲು ಅವಕಾಶವಿಲ್ಲ. ಅವರಿಗೆ ನಾಚಿಕೆ ಮಾನ ಮರ್ಯಾದೆ ಇದ್ದರೆ ತಕ್ಷಣ ನೈತಿಕ ಹೊಣೆ ಹೊತ್ತು ಹಾಲಿ ಅಧ್ಯಕ್ಷ ಚಂದ್ರಕಾಂತ ಪಾಟೀಲ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಅವರು, ರೈತರ ಹಣ ನುಂಗಿದ ತಪ್ಪಿತಸ್ಥರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ ಜೈಲಿಗೆ ಕಳುಹಿಸಬೇಕು ಎಂದರು.

ಜಿಪಂ ಮಾಜಿ ಅಧ್ಯಕ್ಷ ರಾಮಕೃಷ್ಣ ಮೂಲಿಮನಿ ಮಾತನಾಡಿ, ಆಡಳಿತಾತ್ಮಕ ಅವ್ಯವಹಾರ ಕುರಿತು ಸಮಗ್ರ ತನಿಖೆ ನಡೆಸಿ ಬಂಗಾರ ಸಾಲ, ರಸಗೊಬ್ಬರ ವಿಭಾಗ ಸೇರಿದಂತೆ ವಿವಿಧ ಹಣಕಾಸು ವ್ಯವಹಾರದ ದಾಖಲೆಗಳ ಕುರಿತು ಪರಿಶೀಲಿಸಬೇಕು. ₹೩೩ ಲಕ್ಷಕ್ಕೂ ಅಧಿಕ ಮೊತ್ತದ ಅವ್ಯಹಾರದ ಬಗ್ಗೆ ದಾಖಲೆ ಬಹಿರಂಗಪಡಿಸಬೇಕು. ತನಿಖೆಯಲ್ಲಿ ಅಕ್ರಮ ಹಾಗೂ ಅವ್ಯವಹಾರ ನಡೆದ ಬಗ್ಗೆ ಸಾಬೀತಾದರೆ ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಸಂಘದ ಹಣ ಹಾಗೂ ಸರ್ವ ಸದಸ್ಯರ ಹಿತಾಸಕ್ತಿ ರಕ್ಷಿಸುವ ಆಡಳಿತಾತ್ಮಕ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಬಳಿಕ ಪ್ರತಿಭಟನಾ ಸ್ಥಳಕ್ಕಾಗಮಿಸಿದ ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಎಚ್.ಎಂ. ನಾಯ್ಕ, ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ ಈ ಬಗ್ಗೆ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ ಅಧ್ಯಕ್ಷರ ಗಮನಕ್ಕೆ ತಂದು ಸಮಗ್ರ ತನಿಖೆ ಸೂಕ್ತ ಕ್ರಮಕ್ಕೆ ಒತ್ತಾಯಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಪ್ರಕಾಶ ಬಾಳಮ್ಮನವರ ಹಾಗೂ ರೈತರು ಉಪಸ್ಥಿತರಿದ್ದರು. ಬಿಗುವಿನ ವಾತಾವರಣ ನಿರ್ಮಾಣವಾಗಿದ್ದರಿಂದ ಮುಂಡಗೋಡ ಸಿಪಿಐ ರಮೇಶ ಹನಾಪುರ, ಪಿಎಸ್ಐ ಮಂಜುನಾಥ ಗೌಡರ ಸಿಬ್ಬಂದಿ ಸೇರಿದಂತೆ ಕೆಎಸ್‌ಆರ್‌ಪಿ ಹಾಗೂ ಡಿಆರ್ ಪೊಲೀಸ್ ತುಕಡಿಗಳಿಂದ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೋಗ - ಮುಪ್ಪುಮೀರಲು ಉಷಃಪಾನ, ನಾಸಾಪಾನ ಸಹಕಾರಿ
ಗೌರಿ​ಗಣೇಶ ಹಬ್ಬಕ್ಕೆ ಮನಸೋತ ಜರ್ಮನ್ ಪ್ರಜೆ