ಅಕ್ಕಿ ಮಾರಾಟ ಕಂಡು ಬಂದರೆ ನಿರ್ದಾಕ್ಷಿಣ್ಯ ಕ್ರಮ: ತಾಪಂ ಇಒ ಶ್ರೀನಿವಾಸ್ ಸೂಚನೆ

KannadaprabhaNewsNetwork |  
Published : Jun 13, 2025, 02:10 AM IST
12ಕೆಎಂಎನ್ ಡಿ12 | Kannada Prabha

ಸಾರಾಂಶ

ಸರ್ಕಾರದಿಂದ ಬಡವರ ಹಸಿವನ್ನು ನಿವಾರಿಸಲು ಅನ್ನಭಾಗ್ಯ ಯೋಜನೆ ನೀಡಲಾಗುತ್ತಿದೆ. ಅದನ್ನು ಕಾಳಸಂತೆಯಲ್ಲಿ ಮಾರಾಟವಾಗುವುದನ್ನು ಎಂದಿಗೂ ಸಹಿಸುವುದಿಲ್ಲ. ಇಂತಹ ಪ್ರಕರಣ ಕಂಡು ಬಂದರೇ ಕೂಡಲೇ ಪಡಿತರ ಚೀಟಿ ರದ್ದುಗೊಳಿಸಬೇಕು.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಅನ್ನಭಾಗ್ಯ ಯೋಜನೆಯ ‘ಅಕ್ಕಿ ಮಾರಾಟ’ ಮಾಡುವುದು ಕಂಡು ಬಂದರೇ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಆಹಾರ ಇಲಾಖೆ ಅಧಿಕಾರಿಗಳಿಗೆ ತಾಪಂ ಇಒ ಶ್ರೀನಿವಾಸ್ ಸೂಚಿಸಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಮಾದೇಶ್ ಅಧ್ಯಕ್ಷತೆಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಸರ್ಕಾರದಿಂದ ಬಡವರ ಹಸಿವನ್ನು ನಿವಾರಿಸಲು ಅನ್ನಭಾಗ್ಯ ಯೋಜನೆ ನೀಡಲಾಗುತ್ತಿದೆ. ಅದನ್ನು ಕಾಳಸಂತೆಯಲ್ಲಿ ಮಾರಾಟವಾಗುವುದನ್ನು ಎಂದಿಗೂ ಸಹಿಸುವುದಿಲ್ಲ. ಇಂತಹ ಪ್ರಕರಣ ಕಂಡು ಬಂದರೇ ಕೂಡಲೇ ಪಡಿತರ ಚೀಟಿ ರದ್ದುಗೊಳಿಸಬೇಕೆಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳು ಶೇ.100 ಫಲಾನುಭವಿಗಳಿಗೆ ದೊರೆಯಬೇಕು. ತಾಂತ್ರಿಕ ತೊಂದರೆ ಇರುವ ಅರ್ಜಿಗಳನ್ನು ಅಧಿಕಾರಿಗಳು ಸರಿಮಾಡಲು ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳಿಗೆ ಅಗತ್ಯ ಬಸ್ ಸೌಲಭ್ಯ ಕಲ್ಪಿಸಬೇಕು. ಯೋಜನೆಗಳ ಬಗ್ಗೆ ನಿರ್ಲಕ್ಷ್ಯವಾಗಿ ಮಾತನಾಡಿದ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗುತ್ತದೆ ಎಚ್ಚರಿಕೆ ನೀಡಿದರು.

ಕಾರ್ಮಿಕರು, ಚಾಲಕರು ಹಾಗೂ ವೃದ್ಧರಿಗೆ ಯಾವುದೇ ಮಿತಿ ಹಾಕದೇ ಅನ್ನಭಾಗ್ಯವನ್ನು ವಿತರಿಸಬೇಕು. ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಸಮರ್ಪಕವಾಗಿ ಜಾರಿ, ಶಕ್ತಿ ಯೋಜನೆ ಬಗ್ಗೆ ಇನ್ನಷ್ಟು ಪ್ರಚಾರ, ಯುವನಿಧಿ ಫಲಾನುಭವಿಗಳಿಗೆ ಹಣ ಸಂದಾಯವಾಗುವಂತೆ ನೋಡಿಕೊಳ್ಳಬೇಕು ಎಂದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಪಿ.ಮಾದೇಶ್ ಮಾತನಾಡಿ, ಗೃಹಲಕ್ಷ್ಮಿ ಯೋಜನೆಯಡಿ ತಾಂತ್ರಿಕ ಸಮಸ್ಯೆ ಇರುವ ಅರ್ಜಿಗಳನ್ನು ಕೂಡಲೇ ಬಗೆಹರಿಸಬೇಕು. ಬಾಕಿ ಉಳಿದಿರುವ ಅರ್ಜಿಗಳ ಮಾಹಿತಿಯನ್ನು ಸಮಿತಿ ಸದಸ್ಯರ ಗಮನಕ್ಕೆ ತರಬೇಕು, ಹೊಸ ರೇಷನ್ ಕಾರ್ಡ್ ಗಾ ಗಿ ಅರ್ಜಿ ಆಹ್ವಾನಿಸಲು ಅಧಿಕಾರಿಗಳು ಸರ್ಕಾರದ ಗಮನಕ್ಕೆ ತರಬೇಕು, ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.

ಆಹಾರ ಇಲಾಖೆ ಅಧಿಕಾರಿ ಅಶ್ವಥ್ ಮಾತನಾಡಿ, ಇವೈಸಿ ಆಗದ ಪಡಿತರ ಚೀಟಿ ರದ್ದುಪಡಿಸುವ ಸಾಧ್ಯತೆ ಇರುವುದರಿಂದ ಇವೈಸಿ ಮಾಡಿಸಲು ಸಾರ್ವಜನಿಕರಿಗೆ ತಿಳಿವಳಿಕೆ ಮೂಡಿಸಲು ಕ್ರಮ ಕೈಗೊಳ್ಳಬೇಕಿದೆ. ಅಕ್ರಮ ಅಕ್ಕಿ ಮಾರಾಟಕ್ಕೆ ಕಡಿವಾಣ ಹಾಕಲಾಗುತ್ತಿದೆ ಎಂದರು.

ಸಭೆಯಲ್ಲಿ ಗ್ಯಾರಂಟಿ ಅನುಷ್ಠಾನದ ತಾಲೂಕು ಸಮಿತಿ ಸದಸ್ಯರು, ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿ, ಚೆಸ್ಕಾಂ, ಸಾರಿಗೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ