ಮುಂಡಗೋಡ: ಸಾಧನೆ ಎಂಬುದು ಯಾರ ಸ್ವತ್ತೂ ಅಲ್ಲ. ಪ್ರತಿಭೆ ಪ್ರತಿಯೊಬ್ಬರಲ್ಲಿ ಇರುತ್ತದೆ. ಅದನ್ನು ಹೊರಹಾಕಲು ಹಿಂದೇಟು ಹಾಕುತ್ತಾರೆ. ಕೊಂಕಣಿ, ಮರಾಠಿ, ತೆಲುಗು ಸೇರಿದಂತೆ ಅನೇಕ ಮಾತೃಭಾಷಿಕರು ಕನ್ನಡದಲ್ಲಿ ಸಾಕಷ್ಟು ಸಾಧನೆ ಮಾಡಿದ್ದಾರೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್. ವಾಸರೆ ತಿಳಿಸಿದರು.
ಸರ್ಕಾರ ಮಾಡಬೇಕಾದ ಕನ್ನಡ ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತು ಮಾಡುತ್ತಿರುವುದು ಹೆಮ್ಮೆ ಇದೆ. ಕನ್ನಡಕ್ಕೆ ಗೌರವ ಸಲ್ಲಿಸುವ ಕಾರ್ಯಕ್ರಮ ಇದಾಗಿದ್ದು, ಮುಂದೆಯೂ ಹೆಚ್ಚೆಚ್ಚು ಅಂಕ ಗಳಿಸಿ ಉನ್ನತ ಸ್ಥಾನ ಪಡೆದುಕೊಂಡರೆ ಈ ಕಾರ್ಯಕ್ರಮಕ್ಕೆ ಗೌರವ ನೀಡಿದಂತಾಗುತ್ತದೆ ಎಂದರು.
ಎಸ್ಎಸ್ಎಲ್ಸಿಯಿಂದ ಹಿಡಿದು ಪದವಿವರೆಗಿನ ಶಿಕ್ಷಣದಲ್ಲಿ ಒಳ್ಳೆಯ ಸ್ನೇಹಿತರನ್ನು ಹೊಂದಿದರೆ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ. ತಂದೆ- ತಾಯಂದಿರು ಮಕ್ಕಳ ಬಗ್ಗೆ ಕಂಡ ಕನಸು ನನಸಾಗಬೇಕಾದರೆ ಸನ್ನಡತೆಯಿಂದ ನಡೆದರೆ ಮಾತ್ರ ಸಾಧ್ಯವಾಗುತ್ತದೆ ಎಂದರು.ಬಸವರಾಜ ಓಶಿಮಠ ಉದ್ಘಾಟಿಸಿ ಮಾತನಾಡಿ, ಕನ್ನಡ ಮತ್ತು ಸಾಹಿತ್ಯಕ್ಕೆ ನಿಕಟವಾದ ಸಂಬಂಧವಿದೆ. ಕನ್ನಡ ವ್ಯಾಕರಣದ ಬಗ್ಗೆ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಅಂಕಲ್, ಆಂಟಿ, ಪಪ್ಪಾ, ಮಮ್ಮಿ ಎಂಬುದನ್ನು ಬಿಟ್ಟು ಅಪ್ಪ, ಅಮ್ಮ ಎಂಬ ಪದಗಳನ್ನು ಬಳಸಬೇಕಲ್ಲದೇ ಹಿರಿಯರಿಗೆ ಗೌರವಿಸುವ ಮನೋಭಾವ ಬೆಳೆಸಿಕೊಳ್ಳುವುದರಿಂದ ಸಂಸ್ಕೃತಿ, ಸಂಸ್ಕಾರ ಮತ್ತು ನಮ್ಮ ಭಾಷೆ ನೆಲ ಜಲದ ಬಗ್ಗೆ ಅರಿವು ಹೆಚ್ಚುತ್ತದೆ ಎಂದರು.