ಬಳ್ಳಾರಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಜನಾಂಗಕ್ಕೆ ಮೀಸಲಿಟ್ಟಿದ್ದ ಹಣವನ್ನು ಜನಾಂಗದ ಪ್ರಗತಿಗೆ ಬಳಕೆ ಮಾಡದೆ ಎಲ್ಲ ರಾಜಕೀಯ ಪಕ್ಷಗಳು ಶೋಷಿತ ಸಮುದಾಯಗಳಿಗೆ ದ್ರೋಹ ಎಸಗಿವೆ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಜಿಲ್ಲಾಧ್ಯಕ್ಷ ಎಚ್.ಮುನಿಸ್ವಾಮಿ ಆಪಾದಿಸಿದರು.
ಪರಿಶಿಷ್ಟ ಸಮುದಾಯಗಳಿಗೆಂದೇ ಮೀಸಲಿರುವ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳುವುದರಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪೈಪೋಟಿಗೆ ಬಿದ್ದಂತೆ ಕಂಡು ಬಂದಿದೆ. ಶ್ರೀವಾಲ್ಮೀಕಿ ನಿಗಮದ ಹಗರಣ ಹೊರ ಬಿದ್ದ ಬೆನ್ನಲ್ಲೇ, ಸಿಎಂ ಸಿದ್ಧರಾಮಯ್ಯ ಅವರು ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಬಿಜೆಪಿ ಆಡಳಿತದಲ್ಲಿ ಭೋವಿ ಅಭಿವೃದ್ಧಿ ನಿಗಮ, ಅಂಬೇಡ್ಕರ್ ಅಭಿವೃದ್ಧಿ ನಿಗಮ, ಆದಿಜಾಂಬವ ಅಭಿವೃದ್ಧಿ ನಿಗಮ ಸೇರಿದಂತೆ ಅನೇಕ ಇಲಾಖೆಗಳಲ್ಲಿ ನಡೆದಿರುವ ಹಗರಣಗಳನ್ನು ಬಿಚ್ಚಿಟ್ಟಿದ್ದಾರೆ. ಇದೀಗ ಕಾಂಗ್ರೆಸ್ ಸರ್ಕಾರದಲ್ಲಿ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 189 ಕೋಟಿ ರು.ಗಳ ಹಗರಣ ಬಯಲಾಗಿದೆ ಎಂದು ಆರೋಪಿಸಿದ ಬಿಎಸ್ಪಿ ಜಿಲ್ಲಾಧ್ಯಕ್ಷ ಮುನಿಸ್ವಾಮಿ, ಎಸ್ಸಿಎಸ್ಪಿ/ಟಿಎಸ್ಪಿ ಮೀಸಲು ಅನುದಾನದ ಹಣವನ್ನು ಅನ್ಯ ಉದ್ಧೇಶಗಳಿಗೆ ಬಳಸಿರುವ ಕಾಂಗ್ರೆಸ್ ಸರ್ಕಾರದ ಧೋರಣೆ ಖಂಡಿಸಿ ಜುಲೈ 26 ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು. ಪಕ್ಷದ ರಾಜ್ಯ ಕಾರ್ಯದರ್ಶಿ ಮಹ್ಮದ್ ಅಲಿ, ಜಿಲ್ಲಾ ಸಂಯೋಜಕ ಉಮಾಪತಿ, ಉಪಾಧ್ಯಕ್ಷ ಬಾಬು, ಗೋವಿಂದಪ್ಪ, ಪ್ರಧಾನ ಕಾರ್ಯದರ್ಶಿ ಬೆಳಗಲ್ ಕೃಷ್ಣಪ್, ಸಾಮ್ರಾಟ್, ರಮೇಶ್, ಚಿದಾನಂದಪ್ಪ ಸುದ್ದಿಗೋಷ್ಠಿಯಲ್ಲಿದ್ದರು.