ಕನ್ನಡಪ್ರಭ ವಾರ್ತೆ ಕುಶಾಲನಗರ
ಕೆರೆ ನದಿ ಜಲಮೂಲಗಳ ಅಸ್ತಿತ್ವ ಉಳಿಸಿ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂದು ಕುಶಾಲನಗರ ತಾಲೂಕು ತಹಸೀಲ್ದಾರ್ ಕಿರಣ್ ಗೌರಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ವಿಶ್ವ ಜಲ ದಿನಾಚರಣೆ ಅಂಗವಾಗಿ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಆಶ್ರಯದಲ್ಲಿ ಕುಶಾಲನಗರ ಪುರಸಭೆ ಸಹಕಾರದೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡ ಹಾಗೂ ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಮತ್ತು ಮಹಾತ್ಮ ಗಾಂಧಿ ಮೆಮೋರಿಯಲ್ ಪದವಿ ಕಾಲೇಜಿನ ಎನ್ಎಸ್ಎಸ್ ತಂಡಗಳ ಸಹಯೋಗದೊಂದಿಗೆ ನಡೆದ ತಾವರೆಕೆರೆ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರಸಕ್ತ ದಿನಗಳಲ್ಲಿ ಹಲವು ಕಾರಣಗಳಿಂದ ಕೆರೆಗಳ ನಾಶ ಉಂಟಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ಸಾರ್ವಜನಿಕರು ಇಂತಹ ಕಾರ್ಯಕ್ರಮಗಳ ಮೂಲಕ ತಮ್ಮನ್ನು ಸಮಾಜದಲ್ಲಿ ತೊಡಗಿಸಿಕೊಳ್ಳಬೇಕು ಎಂದರು.ಚುನಾವಣೆ ಪ್ರಕ್ರಿಯೆ ನಂತರ ಪಟ್ಟಣ ವ್ಯಾಪ್ತಿಯ ಕೆರೆಗಳ ಅಭಿವೃದ್ಧಿ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ಅವರು ಹೇಳಿದರು.
ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ .ಸತೀಶ್ ಕುಮಾರ್, ಜಲ ದಿನಾಚರಣೆಯ ಬಗ್ಗೆ ಹಾಗೂ ನೀರಿನ ಮಹತ್ವದ ಬಗ್ಗೆ ಮಾಹಿತಿ ಒದಗಿಸಿದರು.ತಾವರೆಕೆರೆ ಸುತ್ತಮುತ್ತ ಬೆಳೆದು ನಿಂತಿದ್ದ ಪೊದೆ, ಕುರುಚಲು ಗಿಡಗಳನ್ನು ಹಾಗೂ ತ್ಯಾಜ್ಯ ತೆರವುಗೊಳಿಸುವ ಕೆಲಸ ನಡೆಯಿತು.
ಸಮೀಪದ ವಾಣಿಜ್ಯ ಕಟ್ಟಡಗಳಿಂದ ಕೆರೆಗೆ ನೇರವಾಗಿ ಹರಿಯುತ್ತಿದ್ದ ಕಲುಷಿತ ನೀರಿನ ಹರಿವು ತಡೆಗೆ ಪುರಸಭೆ ಅಧಿಕಾರಿಗಳು ಕ್ರಮ ಕೈಗೊಂಡರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ, ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲ ಲಿಖಿತ, ಆಡಳಿತ ಅಧಿಕಾರಿ ಮಹೇಶ್, ಎನ್ಎಸ್ಎಸ್ ಅಧಿಕಾರಿ ಮಂಜೇಶ್, ಎಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಶ್ರೀನಾಥ್, ಪುರಸಭೆಯ ಆರೋಗ್ಯ ಅಧಿಕಾರಿ ಉದಯಕುಮಾರ್, ದಫೆದಾರ್ ಮೋಹನ್ ಕುಮಾರ್, ಕಾವೇರಿ ನದಿ ಸ್ವಚ್ಛತಾ ಅಭಿಯಾನದ ಪ್ರಮುಖ ಚಂದ್ರಮೋಹನ್, ಮಂಡೆಪಂಡ ಬೋಸ್ ಮೊಣ್ಣಪ್ಪ, ಕೊಡಗನ ಹರ್ಷ, ಡಿ.ಆರ್. ಸೋಮಶೇಖರ್, ವನಿತಾ ಚಂದ್ರಮೋಹನ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಪೂರ್ಣಿಮಾ, ಶೌರ್ಯ ತಂಡದ ಕಾರ್ಯಕರ್ತರು, ಕಾಲೇಜುಗಳ ಎನ್ಎಸ್ಎಸ್ ವಿದ್ಯಾರ್ಥಿಗಳ ತಂಡ ಕೆರೆ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.