ಕನ್ನಡಪ್ರಭ ವಾರ್ತೆ ಬೆಂಗಳೂರು
ಸಚಿವ ಪ್ರಿಯಾಂಕ್ ಖರ್ಗೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕ ಜೈರಾಂ ರಮೇಶ್ ಅವರು ವಿಧಾನಸೌಧದ ಮೆಟ್ಟಿಲ ಮೇಲೆ ವೇದಿಕೆ ಸಿದ್ಧಗೊಳಿಸಲಿ. ಚುನಾವಣೆಯಲ್ಲಿ ಅಂಬೇಡ್ಕರ್ ಅವರನ್ನು ಸೋಲಿಸಿರುವವರು ಯಾರು ಎಂಬ ವಿಷಯದಲ್ಲಿ ಅವರೊಂದಿಗೆ ಸಂವಾದಕ್ಕೆ ಸಿದ್ಧನಿದ್ದೇನೆ ಎಂದೂ ತಿಳಿಸಿದ್ದಾರೆ.
ಮಂಗಳವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ಪುತ್ರ ಹೇಳಿದ್ದನ್ನು ಸಬೂಬಾಗಿ ಇಟ್ಟುಕೊಂಡು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಲಬುರಗಿಯಲ್ಲಿ ಅಂಬೇಡ್ಕರ್ ವಿಚಾರ ಪ್ರಸ್ತಾಪಿಸಿದ್ದಾರೆ. ಕಾಂಗ್ರೆಸ್ನವರ ಬಳಿ ಇರುವ ಪತ್ರಗಳೇ ನನ್ನ ಬಳಿಯೂ ಇವೆ. ಈ ಪತ್ರಗಳನ್ನು ತೆಗೆದುಕೊಂಡೇ ನಾನು ಬರುವೆ. ಅವರಿಗೆ ಬೇಕಾದವರನ್ನೆಲ್ಲ ಕರಿಯಲಿ. ಬೇಕಾದರೆ, ಇಂಗ್ಲಿಷ್ ವಿದ್ವಾಂಸರನ್ನೂ ಕರೆಯಲಿ. ಇದನ್ನು ಸಾಬೀತುಪಡಿಸಿದರೆ ನಾನು ರಾಜೀನಾಮೆ ಕೊಡುತ್ತೇನೆ. ಇಲ್ಲವಾದರೆ ಆ ನಾಲ್ಕು ಜನ ರಾಜೀನಾಮೆ ಕೊಡಬೇಕು ಎಂದು ಪ್ರತಿಸವಾಲು ಹಾಕಿದರು.ಪ್ರಿಯಾಂಕ್ ಖರ್ಗೆ ಮಾತು ಯಾರೂ ನಂಬುವುದಿಲ್ಲ, ಕೇಳುವುದೂ ಇಲ್ಲ. ಯಾಕೆಂದರೆ ಅದೊಂದು ಹಿಟ್ ಆ್ಯಂಡ್ ರನ್ ಕೇಸ್. ಅಂಬೇಡ್ಕರ್ ಸೋಲಿಗೆ ಸಾವರ್ಕರ್ ಕಾರಣ ಎಂಬ ಮುಖ್ಯಮಂತ್ರಿಗಳ ಮಾತಿಗೆ ಸವಾಲೆಸೆದೆ. ಅದೇನಾದರೂ ಸತ್ಯವಾದರೆ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದೆ. ಇಲ್ಲವಾದರೆ, ಮುಖ್ಯಮಂತ್ರಿ ಸ್ಥಾನಕ್ಕೆ ಅವರು ರಾಜೀನಾಮೆ ನೀಡುವರೇ ಎಂಬುದಾಗಿ ಕೇಳಿದ್ದೆ. ಸತ್ಯ ಗೊತ್ತಾಗಿ ಮುಖ್ಯಮಂತ್ರಿಗಳು ಬಾಯಿ ಮುಚ್ಚಿಕೊಂಡರು ಎಂದು ಕಿಡಿಕಾರಿದರು.
ಅವರ ಹೇಳಿಕೆಯನ್ನು ರುಜುವಾತುಪಡಿಸಿದರೆ ನಾನು ದುಡಿದ ಹಣದಲ್ಲಿ ಒಂದು ಲಕ್ಷದ ಒಂದು ರು. ಕೊಡುವುದಾಗಿ ಹೇಳಿದ್ದೇನೆ. ಆದರೆ, ಪ್ರಿಯಾಂಕ್ ಖರ್ಗೆ ಅವರು ನಾರಾಯಣಸ್ವಾಮಿ ಮಾತಿಗೆ ಬೆಲೆ ಇಲ್ಲ ಎಂದಿದ್ದಾರೆ. ಚುನಾವಣೆಯಲ್ಲಿ ಅಂಬೇಡ್ಕರ್ ಸೋಲಿಗೆ ಸಾವರ್ಕರ್ ಕಾರಣ ಎಂಬ ಮಾತನ್ನು ಕಾಂಗ್ರೆಸ್ಸಿಗರು ಹೇಳಿದ್ದರು. ಅದನ್ನು ಪ್ರಶ್ನಿಸಿದಾಗ ಉತ್ತರಿಸದೆ ಓಡಿ ಹೋದರು. ನಂತರ ಪ್ರಿಯಾಂಕ್ ಖರ್ಗೆ ರಾಜ್ಯದಲ್ಲಿಯೂ ಇದರ ಬಗ್ಗೆ ಸುಳ್ಳು ಹೇಳಲು ಪ್ರಾರಂಭಿಸಿದರು ಎಂದು ಟೀಕಿಸಿದರು.