ದೊಡ್ಡಬಳ್ಳಾಪುರ: ಮಾದಕ ವಸ್ತುಗಳ ದುಶ್ಚಟದಿಂದ ದೂರವಿರಿಸುವ ಕೆಲಸ ಮೊದಲಿಗೆ ತಮ್ಮ ಮನೆಗಳಿಂದಲೇ ಆರಂಭವಾಗಬೇಕು, ಮಕ್ಕಳ ಬಳಿ ಮಾದಕ ವಸ್ತುಗಳನ್ನು ತರಿಸಿವುದು ಕಾನೂನು ಬಾಹಿರವಾಗಿದೆ ಹಾಗಾಗಿ ಹೆತ್ತವರು, ಶಿಕ್ಷಕರು ಮಾತ್ರವಲ್ಲದೆ ಸಮಾಜದ ಪ್ರತಿಯೊಬ್ಬರು ಕೂಡ ಮಾದಕ ವಸ್ತುಗಳ ದುಷ್ಪರಿಣಾಮ ಅರಿತು ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಎ.ಬಿ. ಬಸವರಾಜು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಮದ್ಯಪಾನ ಸಂಯಮ ಮಂಡಳಿವತಿಯಿಂದ ವಿಶ್ವನಾಥಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಸರ್.ಎಂ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಭವಿಷ್ಯಕ್ಕೆ ಮಾರಕವಾಗಿರುವ ಮಾದಕ ವಸ್ತುಗಳಿಂದ ದೂರವಿದ್ದು ಉನ್ನತ ಶಿಕ್ಷಣ ಹಾಗೂ ಸದೃಢ ಭವಿಷ್ಯದ ಕಡೆ ಒತ್ತು ನೀಡಬೇಕು. ವಿದ್ಯಾರ್ಥಿಗಳು, ಯುವ ಪೀಳಿಗೆ ಮಾದಕ ವಸ್ತುಗಳ ವ್ಯಸನದಿಂದ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ, ವ್ಯಸನಿಗಳಿಂದ ಆತನ ಕುಟುಂಬ ಹಾಗೂ ಸಮಾಜ ಕೂಡ ಸಮಸ್ಯೆ ಎದುರಿಸಬೇಕಾಗಿದೆ ಹಾಗಾಗಿ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಸಮಾಜಕ್ಕೆ ನೈಜ ಅರಿವು ಮೂಡಿಸುವುದು ಅವಶ್ಯಕ ಎಂದರು.
ಶಿಕ್ಷಣ ಇಲಾಖೆ ಉಪನಿರ್ದೇಶಕ ಬೈಲಾಂಜನಪ್ಪ ಮಾತನಾಡಿ, ವಿದ್ಯಾರ್ಥಿಗಳು ನಮ್ಮ ದೇಶದ ಭವಿಷ್ಯ ಅವರು ಮಾದಕ ವಸ್ತುಗಳಿಗೆ ಬಲಿಯಾಗದಂತೆ ಪ್ರಾರಂಭದಲ್ಲೇ ಮಾರ್ಗದರ್ಶನ ನೀಡಬೇಕು. ಮನಸ್ಸು ದುರ್ಬಲವಾದಾಗಲೇ ವ್ಯಕ್ತಿ ವ್ಯಸನದತ್ತ ಆಕರ್ಷಿತನಾಗುತ್ತಾನೆ ಹಾಗಾಗಿ ಸಕಾರಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು, ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವುದು, ಆಟಪಾಠ, ಕ್ರೀಡೆ, ಯೋಗ, ಸಂಸ್ಕೃತಿಕ ಚಟುವಟಿಕೆಗಳ ಮೂಲಕ ಮನಸ್ಸು ನಿರ್ದಿಷ್ಟಗೊಳಿಸುವುದು ಅತ್ಯವಶ್ಯಕ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮೋಹನ್ ಕುಮಾರ್ ಮಾತನಾಡಿ, ಕುಡಿತ ಸಂಸಾರವನ್ನು ಮಾತ್ರ ಹಾಳು ಮಾಡುವುದಿಲ್ಲ ದೇಹದ ಅತ್ಮವನ್ನೆ ಹಾಳುಮಾಡುತ್ತದೆ. ಇದರಿಂದ ವ್ಯಕ್ತಿಯನ್ನು ಮಾನಸಿಕವಾಗಿ ಮತ್ತು ದೈಹಿಕವಾಗಿ ಕುಗ್ಗಿಸುತ್ತದೆ, ದೇಶ ಅಭಿವೃದ್ಧಿ ಹೊಂದಲು ಕೇವಲ ಆರ್ಥಿಕವಾಗಿ ಮುಂದುವರೆದರೆ ಸಾಲದು, ಯುವಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ದಿಟ್ಟ ನಿರ್ಧಾರ ಕೈಗೊಳ್ಳಬೇಕಾಗಿದೆ ಎಂದರು.
ಸಂಪನ್ಮೂಲ ವ್ಯಕ್ತಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಜಯಲಕ್ಷ್ಮಿ, ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರ ಕುರಿತು ವಿಚಾರ ಸಂಕಿರಣ ನಡೆಸಿ ಮಾತಾನಾಡಿ ವ್ಯಕ್ತಿಯ ಆಲೋಚನೆಗಳನ್ನು ಬದಲಾಯಿಸುವ ಶಕ್ತಿ ಮೆದುಳಿಗಿರುತ್ತದೆ. ಮಾದಕ ವಸ್ತು ಬಳಕೆಯಿಂದ ಮಿದುಳಿನಲ್ಲಿ ಉತ್ಪಾದನೆಯಾಗುವ ನೈಸರ್ಗಿಕವಾದ ರಾಸಾಯನಿಕಗಳ ಪ್ರಮಾಣ ಕುಗ್ಗುತ್ತದೆ. ನಿರಂತರ ಮಾದಕ ವಸ್ತುಗಳ ಸೇವನೆ ಮಿದುಳಿನ ಕಾರ್ಯ ವಿಧಾನವನ್ನು ಬದಲಾಯಿಸುತ್ತದೆ. ಯುವಜನತೆ ಸಂತೋಷಕ್ಕೆ, ಗೆಳೆಯರ ಒತ್ತಡ, ನೋವು ನಿವಾರಣೆ ನೆಪ, ಆಧುನಿಕ ಜೀವನ ಶೈಲಿ ಅನುಕರುಣೆ ಮಾಡಲು ವ್ಯಸನಕ್ಕೆ ತುತ್ತಾಗುತ್ತಿದ್ದಾರೆ ಇದರಿಂದ ,ಉದ್ಯೋಗದಲ್ಲಿ ತೊಂದರೆ, ಕೌಟುಂಬಿಕ ಸಮಸ್ಯೆಗಳು, ಆತ್ಮಹತ್ಯೆ, ಕಾನೂನು ಬಾಹಿರ ಕೃತ್ಯಗಳು, ದೈಹಿಕ, ಮಾನಸಿಕ ಕಾಯಿಲೆಗಳು, ರಸ್ತೆ ಅಪಘಾತಗಳು ಸಂಭವಿಸುತ್ತವೆ. ಹೀಗಾಗಿ ಯುವಕರು ಇಂಥ ವಸ್ತುಗಳಿಂದ ದೂರವಿರಬೇಕು ಎಂದರು.ಕಾರ್ಯಕ್ರಮದಲ್ಲಿ ಮಾದಕ ವಸ್ತು ವಿರೋಧಿ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು ಮತ್ತು ವಿದ್ಯಾರ್ಥಿಗಳಿಂದ ವ್ಯಸನ ಮುಕ್ತ ಸಮಾಜ ನಿರ್ಮಾಣದ ಕುರಿತು ಜಾಥ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಅಶೋಕ್ ಕುಮಾರ್ ಡಿ, ಶಾಲಾ ಹಾಗೂ ಕಾಲೇಜು ಶಿಕ್ಷಕರು, ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿರುವರು.1ಕೆಡಿಬಿಪಿ4- ಬೆಂ.ಗ್ರಾ ಜಿಲ್ಲಾ ಮಟ್ಟದ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಚಾಲನೆ ನೀಡಿದರು.