ಭಾರತಪ್ರಪಂಚವಿಶೇಷರಾಜಕೀಯಮನರಂಜನೆಅಪರಾಧಕ್ರೀಡೆಕರ್ನಾಟಕಇ- ಪೇಪರ್

ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವುದು ಅಗತ್ಯ-ಜಿಲ್ಲಾಧಿಕಾರಿ

KannadaprabhaNewsNetwork | Published : Sep 25, 2024 12:50 AM

ದೇಶದಲ್ಲಿ ತಂಬಾಕು ಹಾಗೂ ಇತರೆ ಮಾದಕ ವಸ್ತುಗಳ ಸೇವನೆಯಿಂದ ಸಾವು ನೋವುಗಳು ಉಂಟಾಗುತ್ತಿದ್ದು, ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವುದು ಅತ್ಯಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಹೇಳಿದರು.

ಹಾವೇರಿ: ದೇಶದಲ್ಲಿ ತಂಬಾಕು ಹಾಗೂ ಇತರೆ ಮಾದಕ ವಸ್ತುಗಳ ಸೇವನೆಯಿಂದ ಸಾವು ನೋವುಗಳು ಉಂಟಾಗುತ್ತಿದ್ದು, ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವುದು ಅತ್ಯಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಹೇಳಿದರು. ನಗರದ ಮೈಲಾರ ಮಾಹಾದೇವಪ್ಪ ವೃತ್ತದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಪದವಿ ಪೂರ್ವ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಪೋಲಿಸ್ ಇಲಾಖೆ, ಇನ್ನರ ವೀಲ್ ಕ್ಲಬ್ ಸಹಯೋಗದಲ್ಲಿ ಆಯೋಜಿಸಲಾದ ತಂಬಾಕು ಮುಕ್ತ ಯುವ ಅಭಿಯಾನ-೨.೦ ಜಾಥಾಕ್ಕೆ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿ ಅವರು ಮಾತನಾಡಿದರು. ಸಿಗರೇಟ್ ಮತ್ತು ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಸಾಕಷ್ಟು ಪರಿಣಾಮಗಳು ಉಂಟಾಗುತ್ತವೆ ಎಂದರು.ಗ್ಲೋಬಲ್ ಅಡಲ್ಟ್ ಟೊಬ್ಯಾಕೋ ಸರ್ವೇ ಹಾಗೂ ನ್ಯಾಷನಲ್ ಫ್ಯಾಮಿಲಿ ಹೆಲ್ತ್ ಸರ್ವೇ ಪ್ರಕಾರ ೨೦೧೬ರಲ್ಲಿ ದೇಶದಲ್ಲಿ ಪ್ರತಿಶತ ೩೦ರಷ್ಟು ಜನರು ಸಿಗರೇಟ್ ಹಾಗೂ ಇನ್ನಿತರ ಮಾದಕ ವಸ್ತುಗಳ ಸೇವನೆ ಮಾಡುತ್ತಿದ್ದು, ಇದು ತುಂಬಾ ಅಪಾಯಕಾರಿ ಸೂಚನೆಯಾಗಿದೆ. ಜಗತ್ತಿನಲ್ಲಿ ಸುಮಾರು ೮೦ ಲಕ್ಷ ಜನ ಪ್ರತಿ ವರ್ಷ ತಂಬಾಕು ಉತ್ಪನ್ನಗಳ ಸೇವನೆಯಿಂದ ಮರಣಹೊಂದುತ್ತಿದ್ದಾರೆ. ತಂಬಾಕು ಉತ್ಪನ್ನಗಳ ಸೇವನೆ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ದೇಶದಲ್ಲಿ ತಂಬಾಕು ಮುಕ್ತ ದೇಶವನ್ನಾಗಿ ಮಾಡಲು ೨೦೦೩ ರಲ್ಲಿ ಕೋಟ್ಪಾ ಕಾಯ್ದೆ ಹಾಗೂ ನ್ಯಾಷನಲ್ ಟೊಬ್ಯಾಕೋ ಕಂಟ್ರೋಲ್ ಫ್ರೋಗ್ರಾಮ್ ಈ ಎರಡು ಕಾಯ್ದೆಗಳ ಮೂಲಕ ದೇಶದಲ್ಲಿ ತಂಬಾಕು ಸೇವನೆಯನ್ನು ನಿಯಂತ್ರಿಸಲು ಯೋಜನೆ ರೂಪಿಸಲಾಗಿದೆ ಎಂದರು.ಕೇವಲ ಕಾಯ್ದೆಗಳಿಂದ ಮಾದಕ ವಸ್ತುಗಳ ಸೇವನೆ ತಡೆಗಟ್ಟಲಾಗದು, ಜೊತೆಗೆ ಕಾಲ ಕಾಲಕ್ಕೆ ಮಾದಕ ವಸ್ತುಗಳ ಬಳಕೆಯ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಹೇಳಿದರು.ತಂಬಾಕು ಮುಕ್ತ ಯುವ ಅಭಿಯಾನದ ಜಾಥಾ ಮೈಲಾರ ಮಹದೇವಪ್ಪ ವೃತ್ತದಿಂದ ಸಾಗಿ ನಗರದ ಪ್ರಮುಖ ಬಿದಿಗಳಲ್ಲಿ ಸಂಚರಿಸಿ ಹೊಸಮನಿ ಸಿದ್ದಪ ವೃತ್ತದಲ್ಲಿ ಮಾನವ ಸರಪಳಿ ರಚನೆಯೊಂದಿಗೆ ಕೊನೆಗೊಂಡಿತು.ಜಿಪಂ ಉಪ ಕಾರ್ಯದರ್ಶಿ ಡಾ.ಎಸ್.ರಂಗಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ ಸುರಗಿಹಳ್ಳಿ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಹಾಗೂ ತಂಬಾಕು ನಿಯಂತ್ರಣಾಧಿಕಾರಿ ಡಾ.ಜಗದೀಶ ಪಾಟೀಲ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಉಮೇಶಪ್ಪ ಎಚ್., ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಹುಗ್ಗಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಲತಾ, ತಾಲೂಕಾ ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ ಹಾಗೂ ಇನ್ನ ವ್ಹೀಲ್ ಕ್ಲಬ್ ಅಧ್ಯಕ್ಷೆ ಪ್ರಭಾವತಿ ಹಾವನೂರ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಗಳು, ಪದವಿ ಪೂರ್ವ ಕಾಲೇಜು ಉಪನ್ಯಾಸಕರು, ಆಶಾ ಕಾರ್ಯಕರ್ತೆಯರು ಇತರರು ಉಪಸ್ಥಿತರಿದ್ದರು.