- ತರೀಕೆರೆಯಲ್ಲಿ ಕನ್ನಡ ರಾಜ್ಯೋತ್ಸವ
ನೆಲ, ಜಲ ಮತ್ತು ಕನ್ನಡ ಭಾಷೆ ಉಳಿಸಿಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಉಪ ವಿಭಾಗಾಧಿಕಾರಿ ಎನ್.ವಿ.ನಟೇಶ್ ಹೇಳಿದ್ದಾರೆ.
ಶನಿವಾರ ತಾಲೂಕು ಅಡಳಿತ, ತಾಪಂ ಮತ್ತು ಪುರಸಭೆ ತರೀಕೆರೆ ಇವರ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಬಯಲು ರಂಗ ಮಂದಿರದಲ್ಲಿ ನಡೆದ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಕನ್ನಡ ರಾಜ್ಯೋತ್ಸವ ಸಂದೇಶ ನೀಡಿದರು.ಐತಿಹಾಸಿಕ, ಪ್ರಾಕೃತಿಕ ಸಂಪತ್ತಿನಿಂದ ಕೂಡಿದ ನಾಡು ಕರ್ನಾಟಕ ಶಾಂತಿ ಮತ್ತು ಸೌಹಾರ್ದತೆಯಿಂದ ಕೂಡಿದೆ. ಕರ್ನಾಟಕ ರಾಜ್ಯ ಗಣನೀಯ ಸಾಧನೆ ಮಾಡಿದೆ. ಹಿರಿಯ ಸಾಹಿತಿ ರೆಹಮತ್ ತರೀಕೆರೆ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ದೊರಕಿರುವುದು ಎಲ್ಲರಿಗೂ ಸಂತೋಷ ತಂದಿದೆ ಎಂದು ಹೇಳಿದರು.
ಕನ್ನಡ ಭಾಷೆ 2500 ವರ್ಷಗಳಷ್ಟು ಇತಿಹಾಸ ಹೊಂದಿದ್ದು, ಹಳೆಗನ್ನಡ, ನಡುಗನ್ನಡ ವೆಂದು ಗುರುತಿಸಲ್ಪಟ್ಟಿದೆ. ಎಂಟು ಜ್ಞಾನಪೀಠ ಪ್ರಶಸ್ತಿ ಪಡೆದಿರುವುದು ಹೆಮ್ಮೆಯ ವಿಚಾರ. ಮಕ್ಕಳಿಗೆ ಹತ್ತು ವರ್ಷದ ವರೆಗೆ ಕನ್ನಡ ಹೇಳಿಕೊಡಬೇಕು. ಕನ್ನಡ ಭಾಷೆಯನ್ನು ನಾವು ಬಳಸಬೇಕು ಎಂದ ಅವರು ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗಿದೆ. ತರೀಕೆರೆ ಪಟ್ಟಣದಲ್ಲಿ ರಸ್ತೆ ಅಭಿವೃದ್ಧಿಯಾಗುತ್ತಿದೆ. ಕೆ.ಎಸ್.ಆರ್.ಚಿ.ಸಿ.ಡಿಪೋ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿದ್ದು, ಪುರಸಭೆ ನೂತನ ಕಟ್ಟಡ ನಿರ್ಮಾಣ ಇತ್ಯಾದಿ ಅಭಿವೃದ್ದಿ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ತಹಸೀಲ್ದಾರ್ ವಿಶ್ವಜೀತ್ ಮೇಹತಾ, ಪುರಸಭೆ ಮುಖ್ಯಾಧಿಕಾರಿ ವಿಜಯಕುಮಾರ್ ಟಿ.ಒ. ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ.ಆರ್.ದೇವೇಂದ್ರಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಪರಶುರಾಮಪ್ಪ ಮತ್ತಿತರರು ಭಾಗವಹಿಸಿದ್ದರು.
1ಕೆಟಿಆರ್.ಕೆ.6ಃ