ಇಂಗ್ಲೀಶ್ ಮೇಲಿನ ವ್ಯಾಮೋಹದಿಂದಾಗಿ ಕನ್ನಡವನ್ನು ಮರೆಯುತ್ತಿರುವುದು ವಿಷಾದನೀಯ. ಪ್ರಾಚೀನ ಇತಿಹಾಸ ಹೊಂದಿರುವ ಕನ್ನಡ ಭಾಷೆಯನ್ನು ಮುಂದಿನ ತಲೆಮಾರಿಗೂ ಕೊಡುವ ಕಾರ್ಯ ಪ್ರತಿಯೊಬ್ಬ ಕನ್ನಡಿಗರ ಜವಾಬ್ದಾರಿ ಎಂದು ಶಾಸಕ ಎನ್.ವೈ.ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಜ್ಯೂನಿಯರ್ ಕಾಲೇಜು ಆವರಣದಲ್ಲಿ ಬುಧವಾರ ತಾಲೂಕು ಆಡಳಿತದಿಂದ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಗೋಪಾಲಕೃಷ್ಣ ಬೇಸರ ಕನ್ನಡಪ್ರಭ ವಾರ್ತೆ ಮೊಳಕಾಲ್ಮುರು ಇಂಗ್ಲೀಶ್ ಮೇಲಿನ ವ್ಯಾಮೋಹದಿಂದಾಗಿ ಕನ್ನಡವನ್ನು ಮರೆಯುತ್ತಿರುವುದು ವಿಷಾದನೀಯ. ಪ್ರಾಚೀನ ಇತಿಹಾಸ ಹೊಂದಿರುವ ಕನ್ನಡ ಭಾಷೆಯನ್ನು ಮುಂದಿನ ತಲೆಮಾರಿಗೂ ಕೊಡುವ ಕಾರ್ಯ ಪ್ರತಿಯೊಬ್ಬ ಕನ್ನಡಿಗರ ಜವಾಬ್ದಾರಿ ಎಂದು ಶಾಸಕ ಎನ್.ವೈ.ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಜ್ಯೂನಿಯರ್ ಕಾಲೇಜು ಆವರಣದಲ್ಲಿ ಬುಧವಾರ ತಾಲೂಕು ಆಡಳಿತದಿಂದ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ತಾಯಿ ಮಮತೆಯಂತಿರುವ ಕನ್ನಡವನ್ನು ಹೆತ್ತ ತಾಯಿಯಂತೆ ಗೌರವಿಸಬೇಕು. ಮಕ್ಕಳಿಗೆ ಮಾತೃ ಭಾಷಾ ವ್ಯಾಮೋಹವನ್ನು ಮೂಡಿಸಬೇಕು. ಮಾತೃ ಭಾಷೆಗೆ ಪ್ರಥಮ ಆದ್ಯತೆ ನೀಡುವ ಮೂಲಕ ಪ್ರಪಂಚದಲ್ಲಿ ವಿಶಿಷ್ಟ ಸ್ಥಾನ ಪಡೆದಿರುವ ನಾಡಿನ ಸಾಹಿತ್ಯ, ಕಲೆ, ಸಾಂಸ್ಕೃತಿಕ ಪರಂಪರೆ ಯನ್ನು ಮಕ್ಕಳಿಗೆ ಪರಿಚಯಿಸುವ ಕಾರ್ಯ ಪ್ರತಿಯೊಬ್ಬ ತಂದೆ ತಾಯಿಗಳು ಮಾಡಬೇಕು ಎಂದರು. ಪಕ್ಕದ ಆಂಧ್ರಪ್ರದೇಶದಲ್ಲಿ ಕನ್ನಡವನ್ನು ಪ್ರೀತಿಸುವಂತ ಜನರಿದ್ದಾರೆ. ಅಲ್ಲಿಯೂ ಸಹ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸು ತ್ತಿದ್ದಾರೆ. ಆದರೆ ಕನ್ನಡ ಮಣ್ಣಿನಲ್ಲಿ ಹುಟ್ಟಿರುವ ನಾವುಗಳು ರಾಜ್ಯೋತ್ಸವ ಸಂಭ್ರಮವನ್ನು ಮರೆಯುತ್ತಿದ್ದೇವೆ. ಸಂಭ್ರಮಿಸುವಂತ ದಿನಕ್ಕೆ ಹೆಚ್ಚಿನ ಜನರು ಆಗಮಿಸುತ್ತಿಲ್ಲ. ಮೆರವಣಿಗೆಗೆ ಬರುತ್ತಿಲ್ಲ. ಬಂದರೂ ಅವರ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮದ ನಂತರ ತೆರಳುತ್ತಿದ್ದಾರೆ ಎಂದು ತೀವ್ರ ಬೇಸರ ವ್ಯಕ್ತಪಡಿಸಿದ ಅವರು, ಬರುವ ದಿನಗಳಲ್ಲಿ ರಾಷ್ಟ್ರೀಯ ಹಬ್ಬಗಳನ್ನು ವಿಜೃಂಭಣೆಯಿಂದ ಆಚರಿಸುವಂತ ಗುಣಗಳನ್ನು ಬೆಳಸಿಕೊಳ್ಳಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ತಹಸಿಲ್ದಾರ್ ಎಂ.ವಿ.ರೂಪಾ ಮಾತನಾಡಿ, ಕನ್ನಡ ನಾಡು ನುಡಿಗಾಗಿ ಅನೇಕ ಮಹನೀಯರು ತಮ್ಮ ಜೀವನವನ್ನೇ ತ್ಯಾಗ ಮಾಡಿದ್ದಾರೆ. ಅವರ ಹೋರಾಟ ಫಲದಿಂದಾಗಿ ಕರ್ನಾಟಕ ರಾಜ್ಯ ಉದಯವಾಗಿದೆ. ನಾಡಿನ ಶ್ರೀಮಂತಿಕೆಯನ್ನು ಎಲ್ಲಾ ಕಾಲಕ್ಕೂ ಜೀವಂತಗೊಳಿಸುವ ಕಾರ್ಯವಾಗಬೇಕು. ಪ್ರತಿಯೊಬ್ಬರು ಕನ್ನಡದಲ್ಲಿಯೇ ಮಾತನಾಡುವ ಮೂಲಕ ಮಾತೃಭಾಷಾ ಪ್ರೇಮ ಬೆಳಸಿಕೊಳ್ಳಬೇಕು ಎಂದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ತಾಲೂಕಿನ ಸಾಧಕರನ್ನು ಸನ್ಮಾನಿಸಲಾಯಿತು. ಶಾಲಾ ವಿದ್ಯಾರ್ಥಿಗಳಿಂದ ನಾಡ ಭಕ್ತಿಯನ್ನು ಪ್ರತಿಬಿಂಬಿಸುವಂತ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರ ಗಮನ ಸೆಳೆದವು. ಈ ವೇಳೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಜಿಂಕಾ ಶ್ರೀನಿವಾಸ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಈರಣ್ಣ, ಪಟ್ಟಣ ಪಂಚಾಯಿತಿ ಸದಸ್ಯರಾದ ಅಬ್ದುಲ್, ಖಾದರ್, ಮಂಜಣ್ಣ ಹಾಗೂ ಜಿ.ಪ್ರಕಾಶ, ವಕೀಲ ರಾಜಶೇಖರ ನಾಯಕ, ಶ್ರೀರಾಮುಲು, ಜ್ಯೂನಿಯರ್ ಕಾಲೇಜು ಪ್ರಾಂಶುಪಾಲ ಗೋವಿಂದಪ್ಪ, ತಾಪಂ ಇ.ಒ.ಪ್ರಕಾಶ, ಬಿಇಒ ನಿರ್ಮಲಾ ದೇವಿ, ಸಿಡಿಪಿಒ,ನವೀನ್, ಟಿಎಚ್ಒ ಡಾ.ಮದುಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅಶೋಕ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.