ಶಿವಮೊಗ್ಗ: ಮಹಾಕಾವ್ಯ ರಾಮಾಯಣದ ವೈಶಿಷ್ಟ್ಯತೆ ಮತ್ತು ಜನಪ್ರಿಯತೆಯಿಂದಾಗಿ ಕೃತಿಕಾರ ಮಹರ್ಷಿ ವಾಲ್ಮೀಕಿಯವರು ಕವಿಕುಲ ಸಾರ್ವಭೌಮರಾಗಿ ಸಾಹಿತ್ಯ ಲೋಕದಲ್ಲಿ ಆರಾಧಿಸಲ್ಪಟ್ಟಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ತತ್ವದಿಂದ ದೈವತ್ವಕ್ಕೆ ಏರಿದ ತಮ್ಮ ಕೃತಿಗಳಲ್ಲಿ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಸಾರಿದ ಮಹನೀಯ ವಾಲ್ಮೀಕಿ. ಅವರು ಆರಂಭದಲ್ಲಿ ಬೇಡರಾಗಿ ನಂತರ ಸಂತರಾಗಿ, ಅಹಿಂಸೆಯ ಪ್ರತಿಪಾದಕರಾಗಿ ಜಗತ್ತಿಗೆ ಸನ್ಮಾರ್ಗದ ಸಂದೇಶ ಸಾರಿದವರು ಎಂದು ಬಣ್ಣಿಸಿದರು.
ಪ್ರಪಂಚದ ವಿವಿಧ ಭಾಷೆಗಳಿಗೆ ಅನುವಾದಗೊಂಡು ಜಗತ್ತಿನ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ತತ್ವಜ್ಞಾನಿ ವಾಲ್ಮೀಕಿ ಅವರ ಕೃತಿಯನ್ನು ಓದುವ ಮೂಲಕ ಅವರ ಆದರ್ಶಗಳನ್ನು ಅನುಸರಿಸುತ್ತಿರುವುದು, ಅವರು ಹಾಕಿಕೊಟ್ಟ ಮೇಲ್ಪಂಕ್ತಿಯನ್ನು ಅನುಕರಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.ಶಾಸಕ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ವಾಲ್ಮೀಕಿ ಅವರು ಭಾರತಕ್ಕೆ ಮಾತ್ರ ಸೀಮಿತವಾಗಿಲ್ಲ. ಜಗತ್ತಿಗೆ ಪ್ರಭು ಶ್ರೀರಾಮನ ದರ್ಶನವನ್ನು ಪರಿಚಯಿಸಿದವರು. ಇಡೀ ಜಗತ್ತಿಗೆ ಭಾರತದ ಶಕ್ತಿಯನ್ನು ತೊರಿಸಿಕೊಟ್ಟವರು. ರಾಮನ ಬಗ್ಗೆ ಅನೇಕ ಸಂಗತಿಗಳ ಕುರಿತು ಸಂಕ್ಷಿಪ್ತವಾಗಿ ಅರ್ಥಪೂರ್ಣವಾಗಿ ವಾಲಲ್ಮೀಕಿ ರಾಮಾಯಣದಲ್ಲಿ ವಿವರಿಸಿದ್ದಾರೆ ಎಂದು ತಿಳಿಸಿದರು.
ಇದೇ ವೇಳೆ ಎಸ್ಸೆಸ್ಸೆಲ್ಸಿ ಮತ್ತು ಪಿ.ಯು.ಸಿ.ಯಲ್ಲಿ ಅತೀ ಹೆಚ್ಚಿನ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಗಣ್ಯರ ಸಮ್ಮುಖದಲ್ಲಿ ನಗದು ಪುರಸ್ಕಾರ ಮತ್ತು ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ರಾಜ್ಯ ಭೋವಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್, ಜಿಲ್ಲಾ ನಾಯಕ ವಾಲ್ಮೀಕಿ ಸಂಘದ ಅಧ್ಯಕ್ಷ ಎಚ್.ಟಿ.ಬಳಿಗಾರ್, ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಸಿಇಒ ಎನ್.ಹೇಮಂತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಧಿಕಾರಿ ಮಟ್ಟದ ಹಿರಿಯ ಅಧಿಕಾರಿಗಳು, ಸಮುದಾಯದ ಮುಖಂಡರು, ವಿದ್ಯಾರ್ಥಿ-ವಿದ್ಯಾರ್ಥಿನಿಯರು, ಸಾರ್ವಜನಿಕರು ಉಪಸ್ಥಿತರಿದ್ದರು.ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾಧಿಕಾರಿಗಳ ಕಚೇರಿಯಿಂದ ಕಲಾತಂಡಗಳೊಂದಿಗೆ ಹೊರಟ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಮೆರವಣಿಗೆಯು ಅಂತಿಮವಾಗಿ ಕುವೆಂಪು ರಂಗಮಂದಿರದಲ್ಲಿ ಸಂಪನ್ನಗೊಂಡಿತು. ಪ್ರಪಂಚಕ್ಕೆ ಅದ್ಭುತ ಗ್ರಂಥವನ್ನು ನೀಡಿದ ಶ್ರೇಷ್ಠ ವ್ಯಕ್ತಿ ಮಹರ್ಷಿ ವಾಲ್ಮೀಕಿ. ರಾಮ, ಲಕ್ಷ್ಮಣ, ಸೀತೆ ಹಾಗೂ ರಾವಣನಿಂದಲ್ಲೂ ಒಳ್ಳೆಯ ವಿಚಾರವನ್ನು ಕಲಿಯಬಹುದು ಎಂಬ ಸಂದೇಶವನ್ನು ವಾಲ್ಮೀಕಿ ರಾಮಾಯಣದಿಂದ ತಿಳಿಸಿದ್ದಾರೆ. ರಾಮಾಯಣ, ಮಹಾಭಾರತದ ಆದರ್ಶಗಳನ್ನು ನಮ್ಮ ಜೀವನಲ್ಲಿ ಅಳವಡಿಸಿಕೊಳ್ಳಬೇಕು ಆಗಮಾತ್ರ ನಮ್ಮ ಜೀವನ ಸಾರ್ಥಕವಾಗಲಿದೆ.
- ಡಾ.ಧನಂಜಯ್ ಸರ್ಜಿ, ವಿಧಾನ ಪರಿಷತ್ ಸದಸ್ಯ