ಕನ್ನಡಪ್ರಭ ವಾರ್ತೆ ಮದ್ದೂರು
ರಸ್ತೆಗಳ ಅಭಿವೃದ್ಧಿ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡುವುದಾಗಿ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೋರಾಟದ ಹಾದಿ ಬಿಟ್ಟು ವಿಶ್ರಾಂತಿ ತೆಗೆದುಕೊಳ್ಳುವುದೇ ಲೇಸು ಎಂದು ಶಾಸಕ ಕೆ.ಎಂ.ಉದಯ್ ವ್ಯಂಗ್ಯವಾಡಿದರು.ತಾಲೂಕಿನ ಚನ್ನಸಂದ್ರ ಗ್ರಾಮದಲ್ಲಿ ಶನಿವಾರ ಕಾವೇರಿ ನೀರಾವರಿ ನಿಗಮದಿಂದ 25 ಲಕ್ಷ ರು. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ನಂತರ ಪ್ರತಿಕ್ರಿಯೆ ನೀಡಿದರು.
ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿತ್ತು. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದರೂ ಸಹ ಯಾವುದೇ ಅಭಿವೃದ್ಧಿ ಮಾಡದೆ ಅವರು ಸೇರಿದಂತೆ ಸಂಪುಟದ ಸಚಿವರು ಅಭಿವೃದ್ಧಿ ಹೆಸರಿನಲ್ಲಿ ರಾಜ್ಯದ ಬೊಕ್ಕಸವನ್ನು ಲೂಟಿ ಮಾಡಿದರು ಮತ್ತು ಅವರ ಸರ್ಕಾರದ ಕಮಿಷನ್ ಹಗರಣಗಳನ್ನು ರಾಜ್ಯದ ಜನ ಇನ್ನು ಮರೆತಿಲ್ಲ. ಇವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಯಾವ ಮುಖ ಇಟ್ಟುಕೊಂಡು ಬೀದಿಗಿಳಿದು ಹೋರಾಟ ಮಾಡುತ್ತಾರೆ ಎಂದು ಕಿಡಿಕಾರಿದರು.ಯಡಿಯೂರಪ್ಪನವರು ರಾಜ್ಯದ ಅಭಿವೃದ್ಧಿ ಬಗ್ಗೆ ಟೀಕೆ ಮಾಡುವ ಮೊದಲು ಮದ್ದೂರು ಕ್ಷೇತ್ರದ ಅಭಿವೃದ್ಧಿ ಬಗ್ಗೆ ಕೊಂಚ ಗಮನಹರಿಸಲಿ. ಆಗ ಯಾವ ಸರ್ಕಾರ ಅಭಿವೃದ್ಧಿ ಮಾಡಿದೆ ಎಂದು ಗೊತ್ತಾಗುತ್ತದೆ ಎಂದರು.
ಬಿಜೆಪಿ ನಾಯಕರು ಈಗಾಗಲೇ ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ಇಳಿದಿದ್ದಾರೆ. ನಾನು ಸಹ ಸರ್ಕಾರವನ್ನು ಕಿತ್ತೊಗೆಯಲು ರಾಜ್ಯ ಪ್ರವಾಸ ಮಾಡುವುದಾಗಿ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಈ ಇಳಿ ವಯಸ್ಸಿನಲ್ಲಿ ಹೋರಾಟದ ಚಿಂತೆ ಬಿಟ್ಟು ವಿಶ್ರಾಂತಿ ತೆಗೆದುಕೊಳ್ಳಲಿ ಎಂದರು.ನನ್ನ ಶಾಸಕ ಸ್ಥಾನದ ಎರಡು ವರ್ಷದ ಅವಧಿಯಲ್ಲಿ ಕ್ಷೇತ್ರದ ನೀರಾವರಿ ಮತ್ತು ರಸ್ತೆಗಳ ಅಭಿವೃದ್ಧಿಗೆ ವಿಶೇಷ ಪ್ರಾಧ್ಯಾನತೆ ನೀಡಿ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಅಭಿವೃದ್ಧಿ ಪಡಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ಸಹ ಕ್ಷೇತ್ರದ ಅಭಿವೃದ್ಧಿ ಬಗ್ಗೆ ವಿಶೇಷ ಕಾಳಜಿಯೊಂದಿಗೆ ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲು ಚಿಂತನೆ ನಡೆಸಿದ್ದೇನೆ ಎಂದು ಆಶ್ವಾಸನೆ ನೀಡಿದರು. ಕಾವೇರಿ ನೀರಾವರಿ ಈ ವೇಳೆ ನಿಗಮದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ನಾಗರಾಜು, ಮನ್ನುಲ್ ನಿರ್ದೇಶಕ ಹರೀಶ್ ಕುಮಾರ್, ಟಿಎಪಿಸಿಎಂಎಸ್ ಉಪಾಧ್ಯಕ್ಷ ಪಿ.ರಾಘವ, ಗ್ರಾಪಂ ಸದಸ್ಯ ಸ್ವರೂಪ್, ಜವನಮ್ಮ, ಮಾಜಿ ಸದಸ್ಯ ಸುರೇಶ್, ಎಪಿಎಂಸಿ ವರ್ತಕರ ಸಂಘದ ಉಪಾಧ್ಯಕ್ಷ ಸಿ.ಪಿ.ಯೋಗೇಶ್, ಮುಖಂಡರಾದ ಚೆಲುವರಾಜು, ಸೋಮು, ಪ್ರತಾಪ, ಕದಲೂರು ಗ್ರಾಮ ಅಧ್ಯಕ್ಷ ತಿಮ್ಮೇಗೌಡ ಮತ್ತಿತರರಿದ್ದರು.