ಶ್ರೀಶೈಲ ಮಠದ
ಕಾಂಗ್ರೆಸ್ ತೊರೆದು ಮರಳಿ ಬಿಜೆಪಿ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರ ರಾಜಕೀಯ ನಡೆ ಬೆಳಗಾವಿ ಕಮಲ ಪಾಳಯದಲ್ಲಿ ಟಿಕೆಟ್ ಆಕಾಂಕ್ಷಿಗಳಿಗೆ ಶಾಕ್ ಕೊಟ್ಟಿದೆ.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದಲೇ ಜಗದೀಶ ಶೆಟ್ಟರ್ ಸ್ಪರ್ಧಿಸುವ ಸಾಧ್ಯತೆಗಳಿವೆ ಎನ್ನುವ ಮಾತುಗಳು ಮೊದಲಿನಿಂದಲೂ ಕೇಳಿಬರುತ್ತಿದ್ದವು. ಇದಕ್ಕೆ ಪುಷ್ಟಿ ನೀಡುವಂತೆ ಇದೀಗ ಶೆಟ್ಟರ್ ಅವರು ಕಾಂಗ್ರೆಸ್ ತೊರೆದು ಮರಳಿ ಬಿಜೆಪಿ ಸೇರಿದ್ದಾರೆ. ಹಾಗೆ ನೋಡಿದರೆ ಬೆಳಗಾವಿ ಲೋಕಸಭಾ ಕ್ಷೇತ್ರ ಬಿಜೆಪಿ ಭದ್ರಕೋಟೆಯಾಗಿದೆ. ಈ ಕ್ಷೇತ್ರದಲ್ಲಿ ಬಿಜೆಪಿ ತನ್ನಕೋಟೆಯನ್ನು ಮತ್ತಷ್ಟು ಭದ್ರಗೊಳಿಸಲು ಸಿದ್ಧತೆ ನಡೆಸಿತ್ತು. ಪ್ರಬಲ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸಿತ್ತು. ಇದೀಗ ಮಾಜಿ ಸಿಎಂ ಜಗದೀಶ ಶೆಟ್ಟರ್ ಮರಳಿ ಬಿಜೆಪಿ ಸೇರ್ಪಡೆಯಾಗಿರುವುದು ಉತ್ತರ ಕರ್ನಾಟಕದಲ್ಲಿ ಬಿಜೆಪಿಗೆ ಶಕ್ತಿ ತುಂಬಿದಂತಾಗಿದೆ. ಮಾತ್ರವಲ್ಲ, ಬೆಳಗಾವಿಗೂ ಅದು ವರದಾನವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.ಕಳೆದ ವಿಧಾನಸಭೆ ಚುನಾವಣೆ ವೇಳೆ ಟಿಕೆಟ್ ನಿರೀಕ್ಷೆ ಹುಸಿಯಾಗಿರುವ ಹಿನ್ನೆಲೆಯಲ್ಲಿ ಜಗದೀಶ ಶೆಟ್ಟರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಕಾಂಗ್ರೆಸ್ನಿಂದ ಸ್ಪರ್ಧಿಸಿ, ಪರಾಭವಗೊಂಡಿದ್ದರು. ಆದರೂ ಕಾಂಗ್ರೆಸ್ ಪಕ್ಷ ಜಗದೀಶ ಶೆಟ್ಟರ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಿತ್ತು. ಆದರೆ, ರಾಜಕಾರಣದಲ್ಲಿ ನಡೆದ ಕ್ಷಿಪ್ರ ಬೆಳವಣಿಗೆಯೊಂದರಲ್ಲಿ ಶೆಟ್ಟರ್ ಕಾಂಗ್ರೆಸ್ ತೊರೆದು ಅಧಿಕೃತವಾಗಿ ಬಿಜೆಪಿಗೆ ಮರಳಿದ್ದಾರೆ. ಈ ಬೆಳವಣಿಗೆಯಿಂದ ಬೆಳಗಾವಿ ಜಿಲ್ಲಾ ರಾಜಕೀಯ ಲೆಕ್ಕಾಚಾರಗಳೆಲ್ಲವೂ ಬದಲಾಗುವ ಸಾಧ್ಯತೆಗಳಿವೆ.
ಆದರೆ, ಶೆಟ್ಟರ್ ಮರಳಿ ಬಿಜೆಪಿ ಸೇರ್ಪಡೆಯಾಗಿದ್ದರಿಂದ ಹಾಲಿ ಸಂಸದೆ ಮಂಗಲ ಅಂಗಡಿ ಅವರಿಗೆ ಮತ್ತೆ ಬಲ ಬಂದಂತಾಗಿದೆ. ಅಂಗಡಿ ಕುಟುಂಬ ಒಪ್ಪಿಗೆ ನೀಡಿದರೆ ಜಗದೀಶ ಶೆಟ್ಟರ್ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ. ಶೆಟ್ಟರ್ ಬೆಳಗಾವಿ ಚುನಾವಣಾ ಆಖಾಡಕ್ಕಿಳಿದರೆ ಆಗುವ ಲಾಭಗಳೇನು? ಹಾನಿಗಳೇನು? ಎನ್ನುವ ರಾಜಕೀಯ ಲೆಕ್ಕಾಚಾರಗಳು ಕೂಡ ಬಿಜೆಪಿಯಲ್ಲಿ ಶುರುವಾಗಿವೆ. ಏನೇ ಆಗಲಿ ಬೆಳಗಾವಿ ಕ್ಷೇತ್ರದಿಂದ ಅಂತಿಮವಾಗಿ ಯಾರಿಗೆ ಟಿಕೆಟ್ ಸಿಗುತ್ತದೆ ಎನ್ನುವುದನ್ನು ಕಾಯ್ದು ನೋಡಬೇಕು.
ಕೋಟ್.....
ಮಂಗಲ ಅಂಗಡಿ, ಸಂಸದೆ
ಮಾಜಿ ಸಿಎಂ ಜಗದೀಶ ಶೆಟ್ಟರ್ ಅರು ಬಿಜೆಪಿ ಸೇರಿರುವುದು ನಮ್ಮ ಕುಟುಂಬಕ್ಕೆ ಅಷ್ಟೇಯಲ್ಲ ಇಡೀ ಬಿಜೆಪಿ ಕಾರ್ಯಕರ್ತರಿಂಗ ಖುಷಿ ತಂದಿದೆ. ಈ ದಿನ ಉತ್ತರ ಕರ್ನಾಟಕ ಭಾಗಕ್ಕೆ ಶುಭ ದಿನ. ಸಂತೋಷದ ದಿನವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ ನನ್ನ ಸ್ಪರ್ಧೆ ಕುರಿತು ಚರ್ಚೆ ಮಾಡಿಲ್ಲ. ಬೇರೆಯವರಿಗೆ ಟಿಕೆಟ್ ಕೊಟ್ಟರೂ ನಾವು ಕೆಲಸ ಮಾಡುತ್ತೇವೆ. ಟಿಕೆಟ್ ಹಂಚಿಕೆ ವಿಚಾರದಲ್ಲಿ ಪಕ್ಷದ ಹೈಕಮಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ.