ಚಿತ್ರದುರ್ಗ: ಮಧ್ಯ ಕರ್ನಾಟಕದ ದಸರಾವೆಂದೇ ಖ್ಯಾತಿ ಪಡೆದ ಬಸವಕೇಂದ್ರ ಮುರುಘಾಮಠದ ಶರಣ ಸಂಸ್ಕೃತಿ ಉತ್ಸವಕ್ಕೆ ಭಾನುವಾರ ಸಂಭ್ರಮದ ತೆರೆ ಬಿದ್ದಿತು.
ಎಸ್ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಅಧ್ಯಕ್ಷ ಶಿವಯೋಗಿ ಸಿ.ಕಳಸದ್, ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿಗಳ ನೇತೃತ್ವದಲ್ಲಿ ಶೂನ್ಯ ಪೀಠಾರೋಹಣ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾದಾರ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಬಸವಪ್ರಭು ಸ್ವಾಮೀಜಿ, ಡಾ.ಬಸವಕುಮಾರ ಸ್ವಾಮೀಜಿ ಸೇರಿದಂತೆ ನಾಡಿನ ವಿವಿಧ ಮಠಾಧೀಶರು, ಹರಗುರು ಚರಮೂರ್ತಿಗಳು, ಸಾಧಕರು, ಭಕ್ತರು, ಎಸ್ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯರು, ಶಾಲಾ-ಕಾಲೇಜುಗಳ ಮುಖ್ಯಸ್ಥರುಗಳು, ನೌಕರ ವರ್ಗದವರು ಹಾಗೂ ಜನ ಸಮೂಹದ ಜಯಘೋಷಣೆಗಳೊಂದಿಗೆ ಶ್ರೀ ಮಠದಲ್ಲಿ ಶೂನ್ಯ ಪೀಠಾರೋಹಣವನ್ನು ಸಾಕ್ಷೀಕರಿಸಿದರು. ವಿವಿಧ ಕಲಾತಂಡಗಳು ಶ್ರೀಮಠದ ರಾಜಾಂಗಣದಲ್ಲಿ ತಮ್ಮ ಕಲೆಯನ್ನು ಪ್ರದರ್ಶಿಸಿದವು. ನಂತರ ಶ್ರೀಮಠದ ಪ್ರಾಂಗಣದಲ್ಲಿ ನಡೆದ ಧರ್ಮಗುರು ಬಸವಣ್ಣನವರ ಮತ್ತು ಅಲ್ಲಮ ಪ್ರಭುದೇವರ ಭಾವಚಿತ್ರ ಮತ್ತು ಪ್ರಾಚೀನ ಹಸ್ತ ಪ್ರತಿಗಳ ಮೆರವಣಿಗೆಗೆ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ಎಸ್ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಅಧ್ಯಕ್ಷ ಶ್ರೀ ಶಿವಯೋಗಿ.ಸಿ ಕಳಸದ್ ಚಾಲನೆ ನೀಡಿದರು.