ಸಹಾಯಕ ನಿಬಂಧಕರ ವಜಾಗೆ ಆಗ್ರಹಿಸಿ ಜೆಡಿಎಸ್- ಬಿಜೆಪಿ ಪ್ರತಿಭಟನೆ

KannadaprabhaNewsNetwork | Published : May 7, 2025 12:49 AM
Follow Us

ಸಾರಾಂಶ

ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಡಿಕೆಶಿ ಕೂಡ ಕ್ಯಾಬಿನೆಟ್‌ನಲ್ಲಿ ಇದ್ದರು. 540 ಕೋಟಿ ವೆಚ್ಚದ ಸತ್ತೇಗಾಲ ಯೋಜನೆಗೆ ಕುಮಾರಸ್ವಾಮಿ ಅವರು ಅನುಮೋದನೆ ನೀಡಿದ್ದರು. ಇವಾಗ ಬಂದು ಡಿಕೆಶಿ ಟವಲ್ ಹಾಸುವ ಕೆಲಸ ಮಾಡ್ತಾ ಇದ್ದಾರೆ.

ಕನ್ನಡಪ್ರಭ ವಾರ್ತೆ ರಾಮನಗರ

ಚನ್ನಪಟ್ಟಣ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ಸೂಪರ್ ಸೀಡ್ ಮಾಡಲು ಹುನ್ನಾರ ನಡೆಸಿರುವ ಸಹಕಾರ ಸಂಘಗಳ ಸಹಾಯಕ ನಿಬಂಧಕ ವೈ.ವೆಂಕಟೇಶ್ ರನ್ನು ವಜಾ ಮಾಡುವಂತೆ ಆಗ್ರಹಿಸಿ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರು, ಜೆಡಿಎಸ್- ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಚನ್ನಪಟ್ಟಣ ತಾಲೂಕಿನ ಮುದುಗೆರೆ, ಕೋಮನಹಳ್ಳಿ, ತಗಚಗೆರೆ, ಕೂಡ್ಲೂರು, ಪಟ್ಲು, ಕದರ ಮಂಗಲ, ಹಾರೋಹಳ್ಳಿ, ಕನ್ನಮಂಗಲ, ಕುಕ್ಕೂರುದೊಡ್ಡಿ ಸೇರಿದಂತೆ ಹಲವು ಗ್ರಾಮಗಳ ಹಾಲು ಉತ್ಪಾದಕರ ಸಹಕಾರ ಸಂಘಗಳ ನೂರಾರು ಸದಸ್ಯರು ವಾಹನಗಳಲ್ಲಿ ರಾಮನಗರಕ್ಕೆ ಆಗಮಿಸಿ ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ನಡೆಸಿ ಅಧಿಕಾರ ದುರ್ಬಳಕೆ ಮಾಡಿಕೊಂಡಿರುವ ಸಹಕಾರ ನಿಬಂಧಕ ವೈ.ವೆಂಕಟೇಶ್ ಅವರನ್ನು ವಜಾಗೊಳಿಸುವ ಮೂಲಕ ನ್ಯಾಯ ಕೊಡಬೇಕೆಂದು ಆಗ್ರಹಿಸಿದರು.

ತಾಲೂಕಿನಾದ್ಯಂತ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಕಾರಣ ಕೇಳಿ ನೋಟಿಸ್ ನೀಡಿ ಹಾಗೂ ಆಡಳಿತ ಮಂಡಳಿಯನ್ನು ಸೂಪರ್ ಸೀಡ್ ಮಾಡಲು ಯತ್ನಿಸುತ್ತಿರುವುದನ್ನು ವಿರೋಧಿಸಿ ರಾಮನಗರ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಬೃಹತ್ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನಾ ಸ್ಥಳದಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿಭಟನಾಕಾರರೊಂದಿಗೆ ಮೆರವಣಿಗೆಯಲ್ಲಿ ಸಾಗಿ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಅವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಅಧಿಕಾರಿಗಳು ಯಾರ ಕೈಗೊಂಬೆಯಾಗಿ ಕೆಲಸ ಮಾಡಬೇಕಿಲ್ಲ. ಅವರು ಸ್ವತಂತ್ರವಾಗಿ ಸಂವಿಧಾನದ ಅಡಿಯಲ್ಲಿ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.

ರಾಜಕೀಯ ಪಕ್ಷಗಳು ಐದು ವರ್ಷ ಅಧಿಕಾರ ಮಾಡಬಹುದು, ಮತ್ತೆ ಬದಲಾವಣೆ ಪರ್ವ ಬರುತ್ತದೆ. ಬೇರೆ ರಾಜಕೀಯ ಪಕ್ಷಗಳು ಅಧಿಕಾರಕ್ಕೆ ಬರುತ್ತವೆ. ಕಾಂಗ್ರೆಸ್‌ನವರು ನಮಗೆ ದಾರಿ ಕಲಿಸಿ ಹೋಗಿದ್ದಾರೆ. 30 ವರ್ಷಗಳ ನಮ್ಮ ಅಧಿಕಾರ ಅವಧಿಯಲ್ಲಿ ಈ ರೀತಿ ಕೆಲಸ ಮಾಡಿಲ್ಲ. ಜಿಲ್ಲೆಯ ಜನರೇ ಇದಕ್ಕೆ ಮುಂದಿನ ದಿನಗಳಲ್ಲಿ ಉತ್ತರ ಕೊಡ್ತಾರೆ ಎಂದರು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೈಗೊಂಬೆಯಂತೆ ವರ್ತಿಸುತ್ತಿರುವ ರಾಮನಗರ ಸಹಕಾರ ಸಂಘದ ಪ್ರಭಾರ ಉಪ ನಿಬಂಧಕ, ಭ್ರಷ್ಟ ಅಧಿಕಾರಿ ವೈ. ವೆಂಕಟೇಶ್ ವಜಾಗೊಳಿಸಿ, ಈ ವಿಚಾರವಾಗಿ ಪಾರದರ್ಶಕ ಮತ್ತು ನ್ಯಾಯ ಸಮ್ಮತವಾಗಿ ಚುನಾವಣೆ ನಡೆಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಅವರು ಒತ್ತಾಯ ಮಾಡಿದರು.

ಚನ್ನಪಟ್ಟಣ ತಾಲೂಕಿನ ಎಂಟು ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಏಕಾಎಕಿ ನೋಟಿಸ್ ಜಾರಿ ಮಾಡಿದ್ದು, ಇದು ಗ್ರಾಮಗಳಲ್ಲಿ ಗೊಂದಲ ಸೃಷ್ಟಿಸಿ ಶಾಂತಿ ಕದಡುವ ಕೃತ್ಯವಾಗಿದೆ. ಕಾಂಗ್ರೆಸ್ ನಾಯಕರ ಒತ್ತಾಯಕ್ಕೆ ಮಣಿದು ಉದ್ದೇಶ ಪೂರ್ವಕವಾಗಿ ನೋಟಿಸ್ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್ ಕಾರ್ಯಕತನ ಮೇಲೆ ಹಲ್ಲೆ ವಿಚಾರ ಮಾತನಾಡಿದ ಪ್ರತಿಕ್ರಿಯಿಸಿ ಅವರು, ರಾಹುಲ್ ಗಾಂಧಿಯವರು ಸಂವಿಧಾನದ ಪುಸ್ತಕ ಹಿಡಿದು ಲೋಕಸಭೆಯಲ್ಲಿ ಗಂಟೆ ಅಲ್ಲಾಡಿಸುವ ಹಾಗೆ ಅಲ್ಲಾಡಿಸ್ತಾರೆ. ದಲಿತರ ಪರ ನಾವಿದ್ದೇವೆ ಅಂತ ಕಾಂಗ್ರೆಸ್‌ನವರು ಪದೇ ಪದೇ ಹೇಳ್ತಾರೆ. ಆದರೆ ಸಾಮಾಜಿಕ ಜಾಲತಾಣಗಳ ಮೂಲಕ ನಮ್ಮ ಕಾರ್ಯಕರ್ತರಿಗೆ ಹೊಡೆಯುತ್ತೇನೆ ಅಂತಾ ಬೆದರಿಕೆ ಹಾಕ್ತಾರೆ ಎಂದು ಕಿಡಿಕಾರಿದರು.

ಸತ್ತೇಗಾಲ ಯೋಜನೆ ವಿಚಾರವಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆಸಿದ ಅವರು, ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಡಿಕೆಶಿ ಕೂಡ ಕ್ಯಾಬಿನೆಟ್‌ನಲ್ಲಿ ಇದ್ದರು. 540 ಕೋಟಿ ವೆಚ್ಚದ ಸತ್ತೇಗಾಲ ಯೋಜನೆಗೆ ಕುಮಾರಸ್ವಾಮಿ ಅವರು ಅನುಮೋದನೆ ನೀಡಿದ್ದರು. ಇವಾಗ ಬಂದು ಡಿಕೆಶಿ ಟವಲ್ ಹಾಸುವ ಕೆಲಸ ಮಾಡ್ತಾ ಇದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ಗೆ ಟಾಂಗ್ ಕೊಟ್ಟರು.

ಸತ್ತೇಗಾಲ ಯೋಜನೆಯ ಬಗ್ಗೆ ಜಿಲ್ಲೆಯ ಜನರಿಗೆ ಗೊತ್ತಿದೆ. ಕುಮಾರಸ್ವಾಮಿ ಅವರು ವಿಶ್ರಾಂತಿ ಪಡೆಯುವ ಪ್ರಶ್ನೆಯೇ ಇಲ್ಲ. ಕುಮಾರಸ್ವಾಮಿ ಅವರು ಬದುಕಿರುವುದೇ ಜನರಿಗೋಸ್ಕರ, ಜನರ ಅಭಿವೃದ್ಧಿಗೋಸ್ಕರ. ವ್ಯವಹಾರದ ವಿಶ್ರಾಂತಿ ಪಡೆಯುವ ಅವಶ್ಯಕತೆ ಡಿಕೆಶಿಗೆ ಇರಬಹುದು, ನಮಗಲ್ಲ ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ನಿಖಿಲ್ ಕುಮಾರಸ್ವಾಮಿ, ದುಷ್ಕರ್ಮಿಗಳಿಂದ ಹಲ್ಲೆಗೊಳಗಾಗಿ ರಾಮನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದಲಿತ ಸಂಘಟನೆ ಮುಖಂಡರಾದ ಕೊತ್ತಿಪುರ ಗೋವಿಂದರಾಜು ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿ ವೈದ್ಯರಿಂದ ಮಾಹಿತಿ ಪಡೆದರು.

ಮಾಜಿ ಶಾಸಕ ಎ. ಮಂಜುನಾಥ್, ಜೆಡಿಎಸ್ ತಾಲೂಕು ಜೆಡಿಎಸ್ ಅಧ್ಯಕ್ಷರಾದ ಜಯಮುತ್ತು, ಸಬ್ಬಕೆರೆ ಶಿವಲಿಂಗಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಎನ್. ಆನಂದಸ್ವಾಮಿ ಇತರರು ಇದ್ದರು.