ಪಕ್ಷದ ಮುಖಂಡರಿಂದ ಎಸ್ಪಿ ಮಹಮ್ಮದ್ ಸುಜೀತಾಗೆ ಮನವಿ । ನಕಲಿ ವಿಡಿಯೋಗಳಿಗೆ ಕಡಿವಾಣ ಹಾಕಿ
ಪೆನ್ಡ್ರೈವ್ ಹಗರಣಕ್ಕೆ ಸಂಬಂಧಿಸಿದಂತೆ ಜಾಲತಾಣದಲ್ಲಿ ನಕಲಿ ಸುದ್ದಿ, ನಕಲಿ ಪೋಟೋಗಳನ್ನು ಅಪ್ಲೋಡ್ ಮಾಡುವ ಬಗ್ಗೆ ಹಾಗೂ ಮಹಿಳೆಯರಿಗೆ ಅಪಮಾನ ಆಗದಂತೆ ನಿಗಾ ವಹಿಸಲು ಸೂಕ್ತ ಕ್ರಮ ಕೈಗೊಳ್ಳಲು ಒತ್ತಾಯಿಸಿ ಜೆಡಿಎಸ್ ಮುಖಂಡರು ಎಸ್ಪಿ ಮಹಮ್ಮದ್ ಸುಜೀತಾ ಅವರಿಗೆ ಮನವಿ ಮಾಡಿದ್ದಾರೆ.
ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಸ್. ಲಿಂಗೇಶ್, ಶಾಸಕ ಸಿ.ಎನ್. ಬಾಲಕೃಷ್ಣ, ಎಚ್ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸೋಮನಹಳ್ಳಿ ನಾಗರಾಜು, ಮಾಧ್ಯಮ ವಕ್ತಾರ ಹೊಂಗೆರೆ ರಘು, ಬ್ಯಾಂಕ್ ನಿರ್ದೇಶಕ ನಾಗರಾಜು ಮನವಿ ಪತ್ರ ಸಲ್ಲಿಸಿ ಸೂಕ್ತ ಕ್ರಮಕ್ಕೆ ಒತ್ತಾಯಿಸಿದರು.ಚರ್ಚೆ ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ‘ಇತ್ತೀಚೆಗೆ ಪೆನ್ಡ್ರೈವ್ ಹಗರಣಕ್ಕೆ ಸಂಬಂಧಪಟ್ಟಂತೆ ಜಿಲ್ಲೆಯಲ್ಲಿ ಕೆಲವರು ಅವರದು, ಇವರದು ಇದೆ ಎನ್ನುವ ಅಭಿಪ್ರಾಯಗಳನ್ನು ಮಾತನಾಡಿಕೊಳ್ಳುತ್ತಿರುವುದು ತಿಳಿದು ಬಂದಿದೆ. ನಿಮ್ಮ ಇಂಟಲಿಜೆನ್ಸ್ ಪ್ರಕಾರ ಮಫ್ತಿಯಲ್ಲಿ ಬಂದು ಈ ಘಟನೆಯನ್ನು ಸೂಕ್ಷ್ಮವಾಗಿ ಗಮನಹರಿಸಬೇಕು. ಇದು ಜಿಲ್ಲೆಯಲ್ಲ. ಸಮಾಜದ ಗೌರವದ ಪ್ರಶ್ನೆಯಾಗಿದೆ’ ಎಂದು ಪತ್ರದಲ್ಲಿ ಹೇಳಿದ್ದಾರೆ.
ಪ್ರಕರಣದ ಬಗ್ಗೆ ಎಲ್ಲೆದಂದರಲ್ಲಿ ಇಲ್ಲಸಲ್ಲದ ಚರ್ಚೆ ಮಾಡದಂತೆ ಸೂಕ್ತ ನಿರ್ದೇಶನ ಕೊಡಬೇಕು ಎಂದು ಕೋರಿದ್ದೇವೆ. ಇದಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಪಂದಿಸಿದ್ದು, ಈ ವಿಚಾರವಾಗಿ ಸಹಾಯವಾಣಿ ತೆರೆಯಲಾಗಿದೆ. ದೂರುಗಳು ಇದ್ದರೆ ನೇರವಾಗಿ ಸಂಪರ್ಕಿಸಬಹುದು. ಘಟನೆ ತಿಳಿಸಿದರೆ ಕ್ರಮ ಜರುಗಿಸುವುದಾಗಿ ಹೇಳಿದ್ದಾರೆ ಎಂದು ತಿಳಿಸಿದರು.