ಕನ್ನಡಪ್ರಭ ವಾರ್ತೆ ಮಂಡ್ಯ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರಾಜ್ಯದ ನೆಲ, ಜಲದ ರಕ್ಷಣೆ ಜೊತೆಗೆ ನಾಡಿನ ರೈತರ ದನಿಯಾಗಿ ಜೆಡಿಎಸ್ ಪಕ್ಷ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದು 25 ವರ್ಷ ಪೂರೈಸಿದ ಏಕೈಕ ಪ್ರಾದೇಶಿಕ ಪಕ್ಷವಾಗಿದೆ. ಬೆಂಗಳೂರಿನ ಜೆ.ಪಿ.ಭವನದಲ್ಲಿ ಬೆಳ್ಳಿ ಸಂಭ್ರಮವನ್ನು ಆಯೋಜಿಸಲಾಗಿದೆ ಎಂದರು.
ರಾಜ್ಯದ ಜನತೆ ಜೆಡಿಎಸ್ ಪಕ್ಷಕ್ಕೆ ಒಂದು ಬಾರಿ ಪ್ರಧಾನಿ ಹಾಗೂ ಮೂರು ಬಾರಿ ಮುಖ್ಯಮಂತ್ರಿ ಹುದ್ದೆಗಳನ್ನು ನೀಡಿದೆ. ದೇವೇಗೌಡರು 11 ತಿಂಗಳ ಪ್ರಧಾನಿ ಅವಧಿಯಲ್ಲಿ ದೇಶದ ರೈತರಿಗೆ ಹಾಗೂ ನೀರಾವರಿ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮೇಲ್ಸೇತುವೆ, ಐಟಿ- ಬಿಟಿ, ಮೆಟ್ರೋಗೆ ಕೊಡುಗೆ ನೀಡಿದ್ದಾರೆ. ಮುಖ್ಯಮಂತ್ರಿಗಳಾಗಿ ಕೆಲಸ ಮಾಡಿದ್ದಾರೆ ಎಂದು ಹೇಳಿದರು.ಎಚ್.ಡಿ.ಕುಮಾರಸ್ವಾಮಿ ಅವರು 2 ಬಾರಿ ಮುಖ್ಯಮಂತ್ರಿಗಳಾಗಿ ಗ್ರಾಮ ವಾಸ್ತವ್ಯದ ಮೂಲಕ ಜನಸಾಮಾನ್ಯರ ಸಮಸ್ಯೆ ಆಲಿಸಿ ಸ್ಥಳದಲ್ಲೇ ಪರಿಹರಿಸುವ ಮೂಲಕ ಇಡೀ ದೇಶದ ಗಮನ ಸೆಳೆದಿದ್ದರು. ನಿರಂತರವಾಗಿ ರಾಜ್ಯದಲ್ಲಿ ರೈತರ ಆತ್ಮಹತ್ಯೆಗೆ ಒಳಗಾದಾಗ ರಾಜ್ಯಾದ್ಯಂತ ಸಂಚರಿಸಿ ರೈತರಿಗೆ ಕುಟುಂಬಗಳಿಗೆ ಆತ್ಮಸ್ಥೈರ್ಯ ತುಂಬಿದ್ದಲ್ಲದೇ ತಾವು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದೊಡನೇ ರೈತ ಸಾಲಮನ್ನಾ ಮಾಡಿ ರೈತರಿಗೆ ಬೆನ್ನೆಲುಬಾಗಿ ನಿಂತರು ಎಂದು ಸ್ಮರಿಸಿದರು.
ನ.22 ರಂದು ಜಿಲ್ಲೆ ಎಲ್ಲ ವಿಧಾನಸಭಾ ಕ್ಷೇತ್ರಗಳಿಂದ ತಲಾ 250- 300 ಮಂದಿ ಗ್ರಾಪಂನಿಂದ ಎಲ್ಲ ಹಾಲಿ, ಮಾಜಿ ಅಧ್ಯಕ್ಷರು ಹಾಗೂ ಜನಪ್ರತಿನಿಧಿಗಳು ಬೆಂಗಳೂರಿನ ಜೆಡಿಎಸ್ ಕೇಂದ್ರ ಕಚೇರಿಗೆ ತೆರಳಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪ್ರಣಾಳಿಕೆಯಲ್ಲಿ ಶಿಕ್ಷಣ, ಆರೋಗ್ಯ, ಸ್ವಯಂ ಉದ್ಯೋಗ ಆಶಯದೊಂದಿಗೆ ಚುನಾವಣೆ ಎದುರಿಸಿತು. 100 ವರ್ಷಗಳನ್ನು ಪೂರೈಸಿದ ರಾಷ್ಟ್ರೀಯ ಪಕ್ಷ ತಾತ್ಕಾಲಿಕ ಆಮಿಷಗಳನ್ನು ನೀಡಿ ರಾಜಕೀಯ ಲಾಭ ಪಡೆದು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ ಎಂದು ಟೀಕಿಸಿದರು.
ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅನ್ನು ರಾಜ್ಯದ ಜನರು ಬೆಂಬಲಿಸುವ ನಿರೀಕ್ಷೆಯೊಂದಿಗೆ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರಾದೇಶಿಕ ಪಕ್ಷದ ಬಲವರ್ಧನೆಗೆ ಮುಂದಾಗುತ್ತಿದ್ದೇವೆ. ಪಕ್ಷಕ್ಕೆ ಭವಿಷ್ಯದಲ್ಲಿ ಉತ್ತಮ ಬುನಾದಿ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಾಜಿ ಶಾಸಕ ಕೆ.ಟಿ.ಶ್ರೀಕಂಠೇಗೌಡ ಮಾತನಾಡಿ, ದೇವರಾಜು ಅರಸು, ಬಿ.ಎಸ್.ಯಡಿಯೂರಪ್ಪ, ಕೆಂಗಲ್ ಹನುಮಂತಯ್ಯರಂತಹ ಪ್ರಭಾವಿ ನಾಯಕರಿಂದಲೂ ಮುನ್ನಡೆಸಲಾಗದ ಪ್ರಾದೇಶಿಕ ಪಕ್ಷವನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಯಶಸ್ವಿಯಾಗಿ ಮುನ್ನಡೆಸಿ ಬಲಗೊಳಿಸಿದ್ದಾರೆ ಎಂದರು.
ಸುದ್ಧಿಗೋಷ್ಠಿಯಲ್ಲಿ ಮಾಜಿ ಶಾಸಕರಾದ ಡಾ.ಕೆ.ಅನ್ನದಾನಿ, ಸುರೇಶ್ಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ಮುಖಂಡರಾದ ಬಿ.ಆರ್.ರಾಮಚಂದ್ರು, ದಶರಥ ಇದ್ದರು.