ಜೆಟ್‌ಲ್ಯಾಗ್‌ ಬಾರ್‌ನ ಲೈಸೆನ್ಸ್‌25 ದಿನ ಅಮಾನತು

KannadaprabhaNewsNetwork |  
Published : Jan 17, 2024, 01:46 AM ISTUpdated : Jan 17, 2024, 05:41 PM IST
ಜೆಟ್‌ಲ್ಯಾಗ್‌ | Kannada Prabha

ಸಾರಾಂಶ

ಅವಧಿ ಮೀರಿ ಪಾರ್ಟಿ ಅಯೋಜಿಸಲು ಅವಕಾಶ ನೀಡಿದ ಬೆಂಗಳೂರಿನ ಜೆಟ್‌ಲ್ಯಾಗ್‌ ಬಾರ್‌ನ ಲೈಸೆನ್ಸ್‌ ಅನ್ನು 25 ದಿನ ಅಮಾನತು ಮಾಡಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಅದೇಶಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಯಶವಂತಪುರದ ಜೆಟ್‌ ಲ್ಯಾಗ್ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ನಲ್ಲಿ ‘ಕಾಟೇರ’ ಚಿತ್ರ ತಂಡವು ಅವಧಿ ಮೀರಿ ಪಾರ್ಟಿ ಮಾಡಿದ ಪ್ರಕರಣ ಸಂಬಂಧ ಅಬಕಾರಿ ಕಾಯ್ದೆ ನಿಯಮಗಳನ್ನು ಉಲ್ಲಂಘಿಸಿದ ಆರೋಪದಡಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ್‌ ಅವರು ಆ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ನ ಪರವಾನಗಿ(ಲೈಸೆನ್ಸ್‌)ಯನ್ನು 25 ದಿನಗಳ ಕಾಲ ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಜೆಟ್‌ಲ್ಯಾಗ್ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ನಲ್ಲಿ ಅವಧಿ ಮೀರಿ ಪಾರ್ಟಿ ಮಾಡಲು ಅವಕಾಶ ನೀಡಿದ ಹಾಗೂ ಅಬಕಾರಿ ನಿಯಮ ಉಲ್ಲಂಘಿಸಿದ ಸಂಬಂಧ ಅಬಕಾರಿ ಇಲಾಖೆ ಉಪ ಆಯುಕ್ತರು ವರದಿ ನೀಡಿದ್ದರು. ಈ ವರದಿ ಆಧರಿಸಿ ಜಿಲ್ಲಾಧಿಕಾರಿಗಳು ಪರವಾನಗಿ ಅಮಾನತುಗೊಳಿಸಿದ್ದಾರೆ.

ಕಾಟೇರ ಚಿತ್ರದ ಯಶಸ್ಸಿನ ಹಿನ್ನೆಲೆಯಲ್ಲಿ ಜ.3ರಂದು ಸೆಲಿಬ್ರಿಟಿ ಶೋ ಮುಗಿಸಿಕೊಂಡು ನಟ ದರ್ಶನ್‌, ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಸೇರಿದಂತೆ 8 ಮಂದಿ ಸೆಲಿಬ್ರಿಟಿಗಳು ಜೆಟ್‌ ಲ್ಯಾಗ್‌ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ಗೆ ತೆರಳಿದ್ದರು. 

ತಡರಾತ್ರಿ 3 ಗಂಟೆ ವರೆಗೂ ಪಾರ್ಟಿ ಮಾಡಿದ್ದರು ಎನ್ನಲಾಗಿದೆ. ಈ ಸಂಬಂಧ ಸುಬ್ರಮಣ್ಯನಗರ ಠಾಣೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು. ನಟ ದರ್ಶನ್‌ ಸೇರಿದಂತೆ 8 ಮಂದಿ ಸೆಲಿಬ್ರಿಟಿಗಳಿಗೆ ನೋಟಿಸ್‌ ನೀಡಿ ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದರು. 

ಇದರ ಬೆನ್ನಲ್ಲೇ ಅಬಕಾರಿ ಕಾಯ್ದೆಯಡಿ ನಿಯಮ ಉಲ್ಲಂಘಿಸಿದ ಆರೋಪದಡಿ ಜೆಟ್‌ ಲ್ಯಾಗ್‌ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ನ ಪರವಾನಗಿ ಅಮಾನತುಗೊಳಿಸಲಾಗಿದೆ.

ಮೂರು ಬಾರಿ ಅಬಕಾರಿ ಕಾಯ್ದೆ ನಿಯಮ ಉಲ್ಲಂಘಿಸಿದರೆ ಪರವಾನಗಿಯನ್ನು ಶಾಶ್ವತವಾಗಿ ರದ್ದುಗೊಳಿಸಲು ಅವಕಾಶವಿದೆ. ಜೆಟ್‌ ಲ್ಯಾಗ್‌ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ ಇದೇ ಮೊದಲ ಬಾರಿಗೆ ನಿಯಮ ಉಲ್ಲಂಘಿಸಿದೆ ಎನ್ನಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತನ್ನ ಮರ ಕಡಿದಿದ್ದಕ್ಕೆ ವಿಧಾನಸೌಧ ಬಳಿ ಸರ್ಕಾರಿ ಶ್ರೀಗಂಧ ಮರ ಕತ್ತರಿಸಿದ ರೈತ!
ಸಿದ್ದರಾಮಯ್ಯ , ನಾನು ಕದ್ದು ಮುಚ್ಚಿ ಮಾತಾಡಿಲ್ಲ, ನಮ್ಮಲ್ಲಿ ಗೊಂದಲವೂ ಇಲ್ಲ : ಡಿಸಿಎಂ